ಬೆಳಗಾವಿಯಲ್ಲಿ ಪ್ರವಾಹ: ಗ್ರಾಮಗಳ ಖಾಯಂ ಸ್ಥಳಾಂತರ, ಸಿಎಂ ಕೊಟ್ಟ ಭರವಸೆ ಏನು?
ಬೆಳಗಾವಿ, ಆಗಸ್ಟ್ 05: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹಕ್ಕೆ ಪದೇ ಪದೇ ಸಿಲುಕುವ ಗ್ರಾಮಗಳ ಖಾಯಂ ಸ್ಥಳಾಂತರಕ್ಕೆ ಬೇಡಿಕೆ ಇದೆ. ಈ ಕುರಿತು ಜನರು, ಜನಪ್ರತಿನಿಧಿಗಳು ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದಾರೆ. ಸೋಮವಾರ ಬೆಳಗಾವಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಸೋಮವಾರ ಬೆಳಗಾವಿ ಪ್ರವಾಸ ಕೈಗೊಂಡಿದ್ದ ಸಿದ್ದರಾಮಯ್ಯ, ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಬಾಧಿತವಾದಂತಹ ಜುಗುಳ ಗ್ರಾಮ ಹಾಗೂ ಮಹಾರಾಷ್ಟ್ರ ರಾಜ್ಯದ ಗಡಿ ಗ್ರಾಮವಾದ ಕಿರಗಾಪುರ ನಡುವೆ ನಿರ್ಮಿಸಲಾದ ಸೇತುವೆ ಹಾಗೂ ಕೃಷ್ಣಾ ನದಿಯನ್ನು ಪರಿಶೀಲಿಸಿದರು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, "ಪ್ರತಿ ವರ್ಷ ಮಳೆಯಿಂದಾಗಿ ಜುಗುಳ ಹಾಗೂ ಮಂಗಾವತಿ ಗ್ರಾಮಗಳು ಪ್ರವಾಹಕ್ಕೆ ತುತ್ತಿಗುತ್ತಿರುವ ಹಿನ್ನಲೆಯಲ್ಲಿ ಈ ಗ್ರಾಮಗಳ ಖಾಯಂ ಸ್ಥಳಾಂತರಕ್ಕೆ ಈ ಭಾಗದ ಜನಪ್ರತಿಧಿಗಳೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು.
ವಾಡಿಕೆಗಿಂತಲೂ ಅಧಿಕ ಮಳೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, "ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಶೇ 62ರಷ್ಟು ಹೆಚ್ಚು ಮಳೆಯಾಗಿರುತ್ತದೆ. ಎಲ್ಲಾ ಜಲಾಶಯಗಳು ತುಂಬಿರುತ್ತವೆ. ಮಹಾರಾಷ್ಟ್ರದಿಂದಲೂ ನೀರು ಬರುತ್ತಿರುವುದರಿಂದ ಈ ಮೂರು ಗ್ರಾಮಗಳು ಪ್ರವಾಹ ಪರಿಸ್ಥಿತಿಯಿಂದಾಗಿ ಮುಳುಗಡೆ ಆಗುವುದರಿಂದ ಸಾರ್ವಜನಿಕರು ತೊಂದರೆಗೊಳಗಾಗುತ್ತಾರೆ" ಎಂದರು.
"ಜುಗೂಳ, ಶಹಾಪುರ ಹಾಗೂ ಮಂಗಾವತಿ ಗ್ರಾಮಗಳು ವಿಶೇಷವಾಗಿ ಪ್ರವಾಹ ಪೀಡಿತವಾಗುವ ಗ್ರಾಮಗಳಾಗಿದ್ದು, ಈ ಮೂರು ಗ್ರಾಮಗಳಲ್ಲಿ 3 ಸಾವಿರಕ್ಕೂ ಹೆಚ್ಚು ಮನೆಗಳಿದ್ದು, ಪ್ರವಾಹ ಸಂದರ್ಭದಲ್ಲಿ ತಾತ್ಕಾಲಿಕ ಪರಿಹಾರದ ಬದಲು ಖಾಯಂ ಅಗಿ ಈ ಗ್ರಾಮಗಳನ್ನು ಸ್ಥಳಾಂತರ ಮಾಡುವದು ಈ ಗ್ರಾಮಸ್ಥರ ಬೇಡಿಕೆಯಾಗಿದೆ" ಎಂದು ಹೇಳಿದರು.
"ಕೃಷ್ಣಾ ನದಿ ಪ್ರವಾಹ ಬಂದಾಗ ಅನೇಕ ಅನಾಹುತಗಳಾಗುತ್ತವೆ. ಈ ಗ್ರಾಮಗಳನ್ನು ಖಾಯಂ ಆಗಿ ಸ್ಥಳಾಂತರ ಮಾಡಲು ಈ ಭಾಗದ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ತೀರ್ಮಾನವನ್ನು ಕೈಗೊಳ್ಳಲಾಗುವದು. ಮಳೆ ಜಾಸ್ತಿಯಾದಾಗ ಪ್ರವಾಹ ಬಂದಾಗ ಇಂತಹ ಪರಿಸ್ಥಿತಿಗಳು ಉದ್ಭವವಾಗುತ್ತವೆ. ಕಷ್ಟದಲ್ಲಿರುವವರಿಗೆ ನಮ್ಮ ಸರ್ಕಾರದಿಂದ ಕೂಡಲೇ ಪರಿಹಾರ ನೀಡುವ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಯಾರೂ ಕೂಡ ಆತಂಕ ಪಡಬಾರದು" ಎಂದರು.
ಗ್ರಾಮಗಳ ಸ್ಥಳಾಂತರದ ಕುರಿತು ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷ ರಾಜು ಕಾಗೆ ಮಾತನಾಡಿ, "ಮಂಗಾವತಿ, ಶಹಾಪುರ ಹಾಗೂ ಜುಗುಳ ಗ್ರಾಮಸ್ಥರು ಪ್ರವಾಹದಿಂದಾಗಿ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಸ್ತ್ರತವಾಗಿ ತಿಳಿಸಲಾಗಿದ್ದು, ಗ್ರಾಮದ ಬಹು ಮುಖ್ಯ ಬೇಡಿಕೆಯಾದ ಗ್ರಾಮಗಳ ಸ್ಥಳಾಂತರ ಮಾಡಲು ವಿನಂತಿ ಮಾಡಲಾಗಿದ್ದು ಇದಕ್ಕೆ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ" ಎಂದು ತಿಳಿಸಿದರು.
ಸರಕಾರದ ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಮಾತನಾಡಿ, "2017ರಲ್ಲಿ 5 ಸೇತುವೆ ಮಂಜೂರಾಗಿದ್ದು ಆ ಸೇತುವೆಗಳ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿದ್ದಲ್ಲಿ ಪ್ರವಾಹ ಸಂದರ್ಭದಲ್ಲಿ ಗ್ರಾಮಸ್ಥರಿಗೆ ತುಂಬಾ ಅನುಕೂಲವಾಗಲಿದೆ" ಎಂದರು.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ, "ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿ ನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳು ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್ ಕಂಬ, ಟ್ರಾನ್ಸ್ಫಾರ್ಮರ್ಗಳ ದುರಸ್ತಿ ಮೊದಲಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ" ಎಂದು ಹೇಳಿದರು.
"ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ. ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ" ಎಂದರು.












Click it and Unblock the Notifications