ಬಾಕಿ ಉಳಿದಿರುವ 2 ಗ್ಯಾರಂಟಿಗೆ ಮಹೂರ್ತ: ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆ
ಬೆಳಗಾವಿ, ಆಗಸ್ಟ್ 12: ರಾಜ್ಯ ಸರಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ರೈತರು, ಬಡವರು, ಮಹಿಳೆಯರು, ಕಾರ್ಮಿಕರು, ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಯೊಂದು ಕುಟುಂಬಕ್ಕೆ ಐದು ಸಾವಿರ ರೂಪಾಯಿ ಲಭಿಸುತ್ತಿದೆ. ಇದರಿಂದ ಆರ್ಥಿಕ ಚಟುವಟಿಕೆಗಳು ಗರಿಗೆದರಲಿವೆ. ಇದರಿಂದ ರಾಜ್ಯದ ಜಿಡಿಪಿ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಥಣಿ ತಾಲ್ಲೂಕಿನ ಕೊಕಟನೂರಿನಲ್ಲಿ ಶುಕ್ರವಾರ (ಆ.11) ನಡೆದ ಸಮಾರಂಭದಲ್ಲಿ ಪಶುವೈದ್ಯಕೀಯ ಮಹಾವಿದ್ಯಾಲಯ ಲೋಕಾರ್ಪಣೆಗೊಳಿಸಿ ವಿವಿಧ ಅಭಿವೃದ್ಧಿ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಸಿಎಂ, "ಶಕ್ತಿ ಯೋಜನೆಯಡಿ ಇದುವರೆಗೆ 35 ಕೋಟಿ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇದರಿಂದ ಸರಕಾರದ ಆದಾಯ ಕೂಡ ಹೆಚ್ಚಾಗಲಿದೆ. ರಾಜ್ಯದ 1.30 ಕೋಟಿಗೂ ಅಧಿಕ ಕುಟುಂಬಗಳಿಗೆ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮೀ ಯೋಜನೆ ದೇಶದಲ್ಲೇ ಅಪರೂಪದ ಯೋಜನೆಯಾಗಿದೆ" ಎಂದು ಹೇಳಿದರು.

ವರ್ಷಕ್ಕೆ 35 ಸಾವಿರ ಕೋಟಿ ರೂಪಾಯಿ ಇದಕ್ಕೆ ವಿನಿಯೋಗಿಸಲಾಗುವುದು, ಗ್ಯಾರಂಟಿ ಅನುಷ್ಠಾನ ಸೇರಿದಂತೆ ಸರಕಾರದ ಸಾಧನೆಯು ವಿರೋಧ ಪಕ್ಷವನ್ನು ಕಂಗೆಡಿಸಿದೆ. ಏನೇ ಆದರೂ ಸರಕಾರ ನೀಡಿರುವ ಎಲ್ಲ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚುನಾವಣಾ ಸಂದರ್ಭದಲ್ಲಿ ನೀಡಲಾದ ಪ್ರತಿಯೊಂದು ಭರವಸೆಗಳನ್ನು ಸರಕಾರ ಈಡೇರಿಸಲಿದೆ. ನುಡಿದಂತೆ ನಡೆಯುವ ಸರಕಾರ ನಮ್ಮದು. ಕಳೆದ ಬಾರಿ 165 ಭರವಸೆಗಳ ಪೈಕಿ 158 ಈಡೇರಿಸಲಾಗಿದೆ. ಅದೇ ರೀತಿ ಈ ಸಲ ನೀಡಲಾಗಿರುವ ಐದು ಗ್ಯಾರಂಟಿ ಇತ್ತೀಚಿನ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಿಸಲಾದ 76 ಭರವಸೆಗಳನ್ನು ಈಡೇರಿಸಲು ಪ್ರಸಕ್ತ ಸಾಲಿನ ಬಜೆಟ್ ನಲ್ಲಿಯೇ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.
ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು
"ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರು ಈಗಾಗಲೇ ಈಡೇರಿಸಲಾಗಿದೆ. ಗೃಹಲಕ್ಷ್ಮೀ ಈ ಮಾಹೆಯಲ್ಲಿ ಜಾರಿಗೆ ತರಲಾಗುತ್ತಿದ್ದು, ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಯನ್ನು ಡಿಸೆಂಬರ್ ಅಥವಾ ಜನವರಿಯಲ್ಲಿ ಜಾರಿಗೊಳಿಸಲಾಗುವುದು. ಪ್ರಮುಖ ಸಮಾಜ ಸುಧಾರಕರ ಪೈಕಿ ಬಸವಣ್ಣ ನನಗೆ ಅತ್ಯಂತ ಇಷ್ಟವಾದ ವ್ಯಕ್ತಿ. ಆದ್ದರಿಂದ ಬಸವ ಜಯಂತಿಯ ದಿನ ಪ್ರಮಾಣವಚನ ಸ್ವೀಕರಿಸಿ ನುಡಿದಂತೆ ನಡೆದಿರುತ್ತೇವೆ" ಎಂದು ಸಿದ್ದರಾಮಯ್ಯ ಸ್ಪಷ್ಟನೆಯನ್ನು ನೀಡಿದರು.

ರಾಜ್ಯದಲ್ಲಿ ಪಶು ಸಂಪತ್ತು ಅಧಿಕ
ರಾಜ್ಯದಲ್ಲಿ ಪಶು ಸಂಪತ್ತು ಅಧಿಕವಾಗಿದ್ದು, ಪಶು ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಯಿಂದ ಜಾನುವಾರುಗಳ ಆರೋಗ್ಯ ರಕ್ಷಣೆಯ ಜತೆಗೆ ಕೃಷಿ ಅಭಿವೃದ್ಧಿಗೆ ಪೂರಕವಾಗಲಿದೆ. ಅಥಣಿ ಮತಕ್ಷೇತ್ರಕ್ಕೆ ಶಾಸಕ ಲಕ್ಷ್ಮಣ ಸವದಿ ಅವರು ಕೊಡುಗೆ ಅಪಾರವಾಗಿದೆ. ಆಯಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸವದಿ ಅವರ ಸಾಧನೆ ಅಭಿನಂದನಾರ್ಹ ಎಂದು ಸಿಎಂ ಹೇಳಿದರು.
ಮಹಾರಾಷ್ಟಕ್ಕೆ ಮಳೆಗಾಲದಲ್ಲಿ ನಾಲ್ಕು ಟಿ.ಎಂ.ಸಿ
ಮಹಾರಾಷ್ಟಕ್ಕೆ ಮಳೆಗಾಲದಲ್ಲಿ ನಾಲ್ಕು ಟಿ.ಎಂ.ಸಿ. ನೀಡಿ ಬೇಸಿಗೆಯಲ್ಲಿ ಕುಡಿಯುವ ನೀರಿಗಾಗಿ ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ನಾಲ್ಕು ಟಿ.ಎಂ.ಸಿ. ನೀರು ವಿನಿಮಯ ಮಾಡಿಕೊಳ್ಳುವ ಒಪ್ಪಂದಕ್ಕೆ ಸರಕಾರ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ಈ ರೀತಿಯ ಒಪ್ಪಂದದಿಂದ ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ಹೊರೆಯಾಗುವುದಿಲ್ಲ ಎಂದು ಜಾರಕಿಹೊಳಿ ಹೇಳಿದರು.












Click it and Unblock the Notifications