ಬಾದಾಮಿಯಿಂದ ಸ್ಪರ್ಧಿಸಲು ಮನಸ್ಸಿರಲಿಲ್ಲ: ಸಿದ್ದರಾಮಯ್ಯ
ಬೆಳಗಾವಿ, ಏಪ್ರಿಲ್ 28: ಚಾಮುಂಡೇಶ್ವರಿ ಮತ್ತು ಬಾದಾಮಿ ವಿಧಾನಸಭಾ ಕ್ಷೇತ್ರಗಳಿಂದ ಕಣಕ್ಕಿಳಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕ ಭಾಗದ ಶಾಸಕರ ಒತ್ತಾಯದಿಂದ ಬಾದಾಮಿಯಲ್ಲಿ ಸ್ಪರ್ಧಿಸುತ್ತಿರುವುದಾಗಿ ತಿಳಿಸಿದ್ದಾರೆ.
ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳುವ ಸಲುವಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಶನಿವಾರ ಆಗಮಿಸಿದ ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧಿಸಲು ತಮಗೆ ಮನಸ್ಸಿರಲಿಲ್ಲ ಎಂದು ಹೇಳಿದರು.
ಬದಾಮಿ ಮತ್ತು ಚಾಮುಂಡೇಶ್ವರಿ ಎರಡು ಕ್ಷೇತ್ರದಲ್ಲಿ ಗೆಲುವು ನಮ್ಮದೇ ಆಗಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವುದಕ್ಕೆ ಟೀಕೆಗಳು ವ್ಯಕ್ತವಾಗುತ್ತಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಲೋಕಸಭೆ ಚುನಾವಣೆಯಲ್ಲಿ ಮೋದಿ ಏಕೆ ಎರಡು ಕಡೆ ಸ್ಪರ್ಧೆ ಮಾಡಿದರು ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ಚುನಾವಣೆಯ ಹೊಸ್ತಿಲಿನಲ್ಲಿ ವಿವಿಧೆಡೆ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಐಟಿ ದಾಳಿ ನಡೆಸುತ್ತಿರುವುದಕ್ಕೆ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಕೇಂದ್ರ ಸರ್ಕಾರದಿಂದ ಐಟಿ ಇಲಾಖೆಯ ದುರ್ಬಳಕೆ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಷಾ ಕುತಂತ್ರದಿಂದ ಐಟಿ ದಾಳಿ ನಡೆಯುತ್ತಿದೆ. ಮೋದಿ ಸರ್ಕಾರದಿಂದ ಸೇಡಿನ ರಾಜಕಾರಣ ನಡೆಯುತ್ತಿದೆ ಎಂದು ಆರೋಪಿಸಿದರು.
ಇದೇ ಸಂದರ್ಭದಲ್ಲಿ ಅವರು ಉಮೇಶ್ ಕತ್ತಿ, ಪ್ರಭಾಕರ್ ಕೋರೆ, ಸುರೇಶ್ ಅಂಗಡಿ ಮುಂತಾದ ಬಿಜೆಪಿ ಮುಖಂಡರ ಮನೆಗಳ ಮೇಲೆ ಏಕೆ ಐಟಿ ದಾಳಿ ನಡೆಯಲ್ಲ ಎಂದು ಪ್ರಶ್ನಿಸಿದರು.
ನಾನು ಯಾರ ಬಗ್ಗೆಯೂ ಹಗುರವಾಗಿ ಮಾತನಾಡುವುದಿಲ್ಲ. ಯಾರನ್ನು ಬಯ್ಯುವುದಿಲ್ಲ. ಬೇರೆಯವರು ಮಾತನಾಡಿದರೆ ಸುಮ್ಮನಿರಲು ಸಾಧ್ಯವೇ? ನಮ್ಮದು 10% ಸರ್ಕಾರ ಎಂದು ಮೋದಿ ನಮ್ಮನ್ನು ಟೀಕಿಸಿದ್ದಕ್ಕೆ ನಾನು ಅವರದ್ದು 90% ಸರ್ಕಾರ ಅಂದಿದ್ದೇನೆ ಎಂದರು.
ಮುಳಬಾಗಿಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಲ್ಲದ ಕುರಿತು ಪ್ರತಿಕ್ರಿಯಿಸಿದ ಅವರು, ಮಾಜಿ ಶಾಸಕ ಶ್ರೀನಿವಾಸ ಅವರಿಗೆ ಒಬ್ಬರ ಹೆಸರನ್ನು ಸೂಚಿಸುವಂತೆ ಹೇಳಿದ್ದೇವೆ. ಅವರು ಸೂಚಿಸಿದ ಪಕ್ಷೇತರ ಅಭ್ಯರ್ಥಿಗೆ ನಾವು ಬೆಂಬಲ ನೀಡಲಿದ್ದೇವೆ ಎಂದರು.
ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುತ್ತಾರೆ. ಸೋಲಿನ ಭಯದಿಂದಲೇ ಮೋದಿ ಅವರ ರಾಲಿಗಳ ಸಂಖ್ಯೆ ಕಡಿಮೆಯಾಗಿದೆ. ಬಿಜೆಪಿ ನಾಯಕರು ಐದು ವರ್ಷ ರಾಜ್ಯದಲ್ಲಿ ಲೂಟಿ ಮಾಡಿದ್ದಾರೆ. ಕೊನೆಗೆ ಜೈಲು ಸೇರಿದ್ದಾರೆ. ಅವರೇನೂ ಜೈಲಿಗೆ ಬೀಗತನ ಮಾಡಲು ಹೋಗಿರಲಿಲ್ಲ ಎಂದು ವ್ಯಂಗ್ಯವಾಡಿದರು.












Click it and Unblock the Notifications