ಅಚ್ಚರಿ ನಡೆ; ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದ ಬಿಜೆಪಿ, ಕಾಂಗ್ರೆಸ್!
ಬೆಳಗಾವಿ, ಫೆಬ್ರವರಿ 02: ಕಾಂಗ್ರೆಸ್ ಮತ್ತು ಬಿಜೆಪಿ ದೇಶದ ರಾಜಕಾರಣದಲ್ಲಿ ವಿರೋಧ ಪಕ್ಷಗಳು. ಆದರೆ, ಬೆಳಗಾವಿ ಜಿಲ್ಲೆಯಲ್ಲೊಂದು ಅಚ್ಛರಿ ನಡೆದಿದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡಿವೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮ ಪಂಚಾಯಿತಿಯಲ್ಲಿ ಈ ಅಚ್ಚರಿ ನಡೆದಿದೆ. ಉಭಯ ಪಕ್ಷಗಳ ಬೆಂಬಲಿತ ಸದಸ್ಯರು ಕಾಂಗ್ರೆಸ್ ಮತ್ತು ಬಿಜೆಪಿ ಧ್ವಜವನ್ನು ಏಕಕಾಲಕ್ಕೆ ಪ್ರದರ್ಶಿಸಿ, ಸಂಭ್ರಮಿಸಿದರು, ಈ ಮೂಲಕ ಗಮನ ಸೆಳೆದರು.
ಗ್ರಾಮದ ಅಭಿವೃದ್ಧಿಗಾಗಿ ಕಾಂಗ್ರೆಸ್-ಬಿಜೆಪಿ ಮೈತ್ರಿ ಮಾಡಿಕೊಂಡಿರುವುದಾಗಿ ಸದಸ್ಯರು ಹೇಳಿದ್ದಾರೆ. ಮಂಗಳವಾರ ಯಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಯಿತು. ಮೈತ್ರಿಗೂ ಸಾಕ್ಷಿಯಾಯಿತು.

20 ಸದಸ್ಯ ಬಲ ಹೊಂದಿರುವ ಯಡೂರು ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿಯಿಂದ 7 ಸದಸ್ಯರು, ಕಾಂಗ್ರೆಸ್ನಿಂದ 6 ಸದಸ್ಯರು ಹಾಗೂ ಶಿವತೇಜ ಫೌಂಡೇಶನ್ನಿಂದ 7 ಜನ ಸದಸ್ಯರು ಆಯ್ಕೆಯಾಗಿದ್ದರು. ಬಿಜೆಪಿ ಪರವಾಗಿ ಅಧ್ಯಕ್ಷ ಸ್ಥಾನಕ್ಕೆ ಶ್ರೀದೇವಿ ವರಾಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಹುಲ ದೇಸಾಯಿ ನಾಮಪತ್ರ ಸಲ್ಲಿಸಿದರು.
ಶಿವತೇಜ ಫೌಂಡೇಶನ್ನಿಂದ ಅಧ್ಯಕ್ಷ ಸ್ಥಾನಕ್ಕೆ ಬಿಬಾ ಕಾಂಬಳೆ, ಉಪಾಧ್ಯಕ್ಷ ಸ್ಥಾನಕ್ಕೆ ಅಜಯ ಸೂರ್ಯವಂಶಿ ನಾಮಪತ್ರವನ್ನು ಸಲ್ಲಿಸಿದ್ದರು. ಚುನಾವಣೆಯಲ್ಲಿ ಶ್ರೀದೇವಿ ವರಾಳೆ 13 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ, ರಾಹುಲ ದೇಸಾಯಿ 13 ಮತಗಳನ್ನು ಪಡೆದು ಉಪಾಧ್ಯಕ್ಷರಾದರು.
ಕಾಂಗ್ರೆಸ್ ಸದಸ್ಯರು ಬಿಜೆಪಿ ಸದಸ್ಯರಿಗೆ ಬೆಂಬಲವನ್ನು ನೀಡಿದ್ದರಿಂದ ಕಾಂಗ್ರೆಸ್, ಬಿಜೆಪಿ ಮೈತ್ರಿ ಆಡಳಿತಕ್ಕೆ ಯಡೂರ ಗ್ರಾಮ ಪಂಚಾಯಿತಿ ಸಾಕ್ಷಿಯಾಗಿದೆ. ಶಿವತೇಜ ಫೌಂಡೇಶನ್ ಬದಿಗಿಟ್ಟು ಕಾಂಗ್ರೆಸ್-ಬಿಜೆಪಿ ಸದಸ್ಯರು ಸೇರಿ ಆಡಳಿತದ ಚುಕ್ಕಾಣಿ ಹಿಡಿದರು.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ತಮ್ಮ ಪಕ್ಷದ ಧ್ವಜವನ್ನು ಹಿಡಿದು ಗುಲಾಲು ಎರಚಿ, ಪಟಾಕಿ ಸಿಡಿಸಿ, ಸಿಹಿ ತಿನ್ನಿಸಿ ಸಂಭ್ರಮಿಸಿದರು.












Click it and Unblock the Notifications