ಬೆಳಗಾವಿ ಉಪ ಚುನಾವಣೆ; ಕಾಂಗ್ರೆಸ್ ಗೆಲುವಿಗೆ 60 ನಾಯಕರ ತಂಡ!
ಬೆಳಗಾವಿ, ಮಾರ್ಚ್ 30; ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಣ ರಂಗೇರುತ್ತಿದೆ. ಕಾಂಗ್ರೆಸ್ ಚುನಾವಣೆ ಉಸ್ತುವಾರಿಗಾಗಿ 60 ನಾಯಕರ ತಂಡವನ್ನು ರಚನೆ ಮಾಡಲಿದೆ. ಶಾಸಕರು, ಮಾಜಿ ಶಾಸಕರು ಸೇರಿದಂತೆ ಹಲವಾರು ನಾಯಕರು ತಂಡದಲ್ಲಿದ್ದಾರೆ.
ಏಪ್ರಿಲ್ 17ರಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ್ ಜಾರಕಿಹೊಳಿ ಸೋಮವಾರ ನಾಮಪತ್ರವನ್ನು ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಾಮಪತ್ರ ಸಲ್ಲಿಕೆ ಬಳಿಕ ಜಿಲ್ಲಾ ಕಾಂಗ್ರೆಸ್ ನಾಯಕರ ಜೊತೆ ಡಿ. ಕೆ. ಶಿವಕುಮಾರ್ ಸಭೆಯನ್ನು ನಡೆಸಿದರು. ಚುನಾವಣಾ ಪ್ರಚಾರದ ಉಸ್ತುವಾರಿಯನ್ನು ಸ್ಥಳೀಯ ನಾಯಕರಿಗೆ ವಹಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.
60 ಪ್ರಮುಖ ನಾಯಕರಿಗೆ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯನ್ನು ನೀಡಲಾಗುತ್ತದೆ. ಜವಾಬ್ದಾರಿ ವಹಿಸಿದ ಕ್ಷೇತ್ರದಲ್ಲಿ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡಿ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸಬೇಕು ಎಂದು ಡಿ. ಕೆ. ಶಿವಕುಮಾರ್ ಸೂಚನೆಯನ್ನು ನೀಡಿದ್ದಾರೆ.

ವಿಧಾನಸಭಾ ಕ್ಷೇತ್ರದ ಉಸ್ತುವಾರಿ
60 ಪ್ರಮುಖ ನಾಯಕರಿಗೆ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ವಿಧಾನಸಭಾ ಕ್ಷೇತ್ರದ ಜವಾಬ್ದಾರಿಯನ್ನು ನೀಡಲಾಗುತ್ತದೆ. ಈ ಕುರಿತು ಡಿ. ಕೆ. ಶಿವಕುಮಾರ್, ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರಚಾರದಿಂದ ಹಿಡಿದು ಕ್ಷೇತ್ರದ ಉಸ್ತುವಾರಿ ಸಂಪೂರ್ಣವಾಗಿ ಅವರ ಮೇಲಿರುತ್ತದೆ.

ಒಗ್ಗಟ್ಟಾಗಿ ಕೆಲಸ ಮಾಡಬೇಕು
ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಬೆಳಗಾವಿ ಉಪ ಚುನಾವಣೆ ಕೆಲಸಗಳನ್ನು ಹಂಚಿಕೊಂಡು ಮಾಡುತ್ತಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಸತೀಶ್ ಜಾರಕಿಹೊಳಿ ಗೆಲುವು ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯಾಗಿದೆ. ಅದಕ್ಕಾಗಿ ಎಲ್ಲಾ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಸೂಚನೆ ಕೊಡಲಾಗಿದೆ.

ಜೆಡಿಎಸ್ ಸ್ಪರ್ಧೆ ಇಲ್ಲ
ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಸ್ಪರ್ಧೆ ಮಾಡುತ್ತಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಪೈಪೋಟಿ ನಡೆಯಲಿದೆ. ಕಾಂಗ್ರೆಸ್ ಬೆಳಗಾವಿಯ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಅವರಿಗೆ ಟಿಕೆಟ್ ನೀಡಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವುದು ಒಬ್ಬರು ಕಾಂಗ್ರೆಸ್ ಸಂಸದರು ಮಾತ್ರ.

ಅನುಕಂಪದ ಅಲೆ
ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದಾಗಿ ಉಪ ಚುನಾವಣೆ ಎದುರಾಗಿದೆ. ಬಿಜೆಪಿ ಸುರೇಶ್ ಅಂಗಡಿ ಪತ್ನಿ ಮಂಗಲ ಸುರೇಶ್ ಅಂಗಡಿ ಅವರಿಗೆ ಟಿಕೆಟ್ ನೀಡಿದೆ. ಅನುಕಂಪದ ಅಲೆ ಕೆಲಸ ಮಾಡಲಿದೆಯೇ? ಕಾದು ನೋಡಬೇಕಿದೆ.












Click it and Unblock the Notifications