ರಮೇಶ್ ಜಾರಕಿಹೊಳಿ ಸೋಲಿಸಲು ಒಂದಾದ ನಾಯಕರು!
ಬೆಳಗಾವಿ, ನವೆಂಬರ್ 11 : 15 ಕ್ಷೇತ್ರದ ಉಪ ಚುನಾವಣೆಗೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಡಿಸೆಂಬರ್ 5ರಂದು ಚುನಾವಣೆ ನಡೆಯಲಿದೆ. ಉಪ ಚುನಾವಣೆಯಲ್ಲಿ ಹೆಚ್ಚು ಕುತೂಹಲ ಕೆರಳಿಸಿರುವ ಕ್ಷೇತ್ರ ಬೆಳಗಾವಿ ಜಿಲ್ಲೆಯ ಗೋಕಾಕ್.
ಕರ್ನಾಟಕ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಲು ಗೋಕಾಕ್ ಕ್ಷೇತ್ರದ ಶಾಸಕರಾಗಿದ್ದ ರಮೇಶ್ ಜಾರಕಿಹೊಳಿ ಪ್ರಮುಖ ಕಾರಣ. ಉಪ ಚುನಾವಣೆಯಲ್ಲಿ ರಮೇಶ್ ಜಾರಕಿಹೊಳಿ ಸೋಲಿಸಬೇಕು ಎಂದು ಎರಡೂ ಪಕ್ಷಗಳು ಒಂದಾಗಿವೆ.
ಪಕ್ಷಬೇಧ ಮರೆತು ರಮೇಶ್ ಜಾರಕಿಹೊಳಿ ಸೋಲಿಸಬೇಕು ಎಂಬುದು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಗುರಿಯಾಗಿದೆ. ಆದ್ದರಿಂದ, ಗೋಕಾಕ್ ಕ್ಷೇತ್ರಕ್ಕೆ ಪ್ರತ್ಯೇಕವಾದ ರಣತಂತ್ರವನ್ನು ರೂಪಿಸಲಾಗುತ್ತಿದೆ. ಇದು ಬಿಜೆಪಿಗೆ ಆತಂಕವನ್ನು ಉಂಟು ಮಾಡಿದೆ.
ಉಪ ಚುನಾವಣೆಯಲ್ಲಿ ಗೋಕಾಕ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅಶೋಕ್ ನಿಂಗಯ್ಯಸ್ವಾಮಿ ಪೂಜಾರಿ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ತಮ್ಮ ಆಪ್ತರಾಗಿದ್ದ ರಮೇಶ್ ಜಾರಕಿಹೊಳಿ ಸೋಲಿಸಲು ಸ್ವತಃ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಯಸಿದ್ದಾರೆ, ತಂತ್ರ ಹಣೆಯುತ್ತಿದ್ದಾರೆ.

ಅಶೋಕ ಪೂಜಾರಿ ಕಾಂಗ್ರೆಸ್ಗೆ?
ಗೋಕಾಕ್ ಕ್ಷೇತ್ರದ ಬಿಜೆಪಿ ನಾಯಕ ಅಶೋಕ ಪೂಜಾರಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಒಂದು ವೇಳೆ ಕಾಂಗ್ರೆಸ್ ಸೇರಿದರೆ ಗೋಕಾಕ್ ಉಪ ಚುನಾವಣೆಯಲ್ಲಿ ಅವರೇ ಕಾಂಗ್ರೆಸ್ ಹುರಿಯಾಳು. ರಮೇಶ್ ಜಾರಕಿಹೊಳಿ ಅವರನ್ನು ಸೋಲಿಸಲು ಅಶೋಕ ಉತ್ತಮ ಅಭ್ಯರ್ಥಿ ಎಂಬುದು ಕಾಂಗ್ರೆಸ್ ನಾಯಕರ ಲೆಕ್ಕಾಚಾರವಾಗಿದೆ.

ಬಿಜೆಪಿ ಟಿಕೆಟ್ ಕೈ ತಪ್ಪಲಿದೆ
ಗೋಕಾಕ್ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಶೋಕ ಪೂಜಾರಿ ಬಿಜೆಪಿ ಟಿಕೆಟ್ ಆಕಾಂಕ್ಷಿ. 2017ರ ಚುನಾವಣೆಯಲ್ಲಿ ಬಿಜೆಪಿಯಿಂದ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದ ಪೂಜಾರಿ 75, 969 ಮತಗಳನ್ನು ಪಡೆದು,
14, 280 ಮತಗಳ ಅಂತರದಿಂದ ರಮೇಶ್ ಜಾರಕಿಹೊಳಿ ವಿರುದ್ಧ ಸೋಲು ಕಂಡಿದ್ದರು. ಈಗ ಅವರನ್ನು ಕಾಂಗ್ರೆಸ್ಗೆ ಕರೆತರುವ ಮಾತುಕತೆಗಳು ನಡೆದಿವೆ.

ಬಿಜೆಪಿ ಟಿಕೆಟ್ ಯಾರಿಗೆ?
ಗೋಕಾಕ್ನಲ್ಲಿ ಬಿಜೆಪಿ ಟಿಕೆಟ್ ಯಾರಿಗೆ ಎಂಬುದು ಸದ್ಯದ ಪ್ರಶ್ನೆ. ಸುಪ್ರೀಂ ತೀರ್ಪು ಅನರ್ಹರ ಪರವಾಗಿ ಬಂದರೆ ರಮೇಶ್ ಜಾರಕಿಹೊಳಿ ಕಣಕ್ಕಿಳಿಯಲಿದ್ದಾರೆ. ಇಲ್ಲವಾದಲ್ಲಿ ಬಿಜೆಪಿ ಟಿಕೆಟ್ ಯಾರಿಗೆ ಸಿಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಜೆಡಿಎಸ್ ಬೆಂಬಲ
ಗೋಕಾಕ್ ಉಪ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ ಕಡಿಮೆ ಇದೆ. ಕಾಂಗ್ರೆಸ್ಗೆ ಬೆಂಬಲ ನೀಡಲು ಪಕ್ಷ ತೀರ್ಮಾನಿಸಿದೆ. 2018ರಲ್ಲಿ ಜೆಡಿಎಸ್ನಿಂದ ಕಣಕ್ಕಿಳಿದಿದ್ದ ಲಕ್ಕಪ್ಪ 1553 ಮತಗಳನ್ನು ಮಾತ್ರ ಪಡೆದಿದ್ದರು.












Click it and Unblock the Notifications