ಕರ್ನಾಟಕವನ್ನು ಕಾಂಗ್ರೆಸ್ ಎಟಿಎಂ ಮಾಡಲು ಅವಕಾಶ ಕೊಡುವುದಿಲ್ಲ: ಅರುಣ್ ಸಿಂಗ್
ಬೆಳಗಾವಿ, ಏ.12: ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಮಾದರಿಯಲ್ಲಿ ಕರ್ನಾಟಕದಲ್ಲೂ ಮುಂದಿನ ವರ್ಷ ಬಿಜೆಪಿ ಸರಕಾರವು ಹೆಚ್ಚು ಶಾಸಕರ ಸ್ಥಾನಗಳೊಂದಿಗೆ ಅಧಿಕಾರಕ್ಕೆ ಏರಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ಕರ್ನಾಟಕದ ಉಸ್ತುವಾರಿಗಳೂ ಆದ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿಯಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಪಕ್ಷದ ಸಂಘಟನೆ ಬಲಪಡಿಸುವ ದೃಷ್ಟಿಯಿಂದ ಮೂರು ತಂಡಗಳಲ್ಲಿ ಪ್ರವಾಸ ಮಾಡಲಾಗುತ್ತಿದೆ. ಈ ಬಾರಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಕರ್ನಾಟಕದಲ್ಲಿ ನಾವು ಪಡೆಯಲಿದ್ದೇವೆ. ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಆವಾಸ್ ಯೋಜನೆ, ಜನ್ಧನ್ ಯೋಜನೆ, ಆಯುಷ್ಮಾನ್ ಭಾರತ್, ಕಿಸಾನ್ ಸಮ್ಮಾನ್ ನಿಧಿ, ನಲ್ ಸೇ ಜಲ್ ಮತ್ತಿತರ ಯೋಜನೆಗಳಿಂದ ಜನರು ಮೋದಿಜಿ ಮತ್ತು ಬಿಜೆಪಿ ಜೊತೆಗಿದ್ದಾರೆ ಎಂದು ವಿವರಿಸಿದರು.
ಕಾಂಗ್ರೆಸ್ ಎಲ್ಲ ಕಡೆಗಳಲ್ಲಿ ಸೋಲುತ್ತಾ ಸಾಗಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ನಲ್ಲಿ ನಾಯಕತ್ವ ಗೊಂದಲಮಯವಾಗಿದೆ. ವಿಫಲ ನಾಯಕರನ್ನು ಅದು ಹೊಂದಿದೆ. ಇಲ್ಲಿಯೂ ಕಾಂಗ್ರೆಸ್ ಒಡೆದ ಮನೆಯಾಗಿದೆ ಎಂದು ಟೀಕಿಸಿದರು.

ಛತ್ತೀಸ್ಗಡ ಮತ್ತು ರಾಜಸ್ಥಾನದಲ್ಲೂ ಕಾಂಗ್ರೆಸ್ ಸೋಲಲಿದೆ. ಕರ್ನಾಟಕವನ್ನು ಎಟಿಎಂ ಎಂದು ನೋಡುತ್ತಿರುವ ಕಾಂಗ್ರೆಸ್ ಇಲ್ಲೂ ಸೋಲಲಿದೆ. ಉನ್ನತ ನಾಯಕರಾದ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಸೇರಿ ಹಲವು ನಾಯಕರು ನಮ್ಮಲ್ಲಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷ ನಾಯಕರಹಿತವಾಗಿದೆ ಎಂದು ತಿಳಿಸಿದರು.
ಬೆಳಗಾವಿಯಲ್ಲೂ ರೈಲ್ವೆ, ರಸ್ತೆ ಸೇರಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಕರ್ನಾಟಕದಲ್ಲಿ ಸಮಗ್ರ ಅಭಿವೃದ್ಧಿ ಕಾರ್ಯ ನಡೆದಿದೆ. ಕೇಂದ್ರ- ರಾಜ್ಯಗಳೆರಡರಲ್ಲೂ ಬಿಜೆಪಿ ನೇತೃತ್ವದ ಡಬಲ್ ಎಂಜಿನ್ ಸರಕಾರವನ್ನು ಜನತೆ ಬಯಸುತ್ತಿದ್ದಾರೆ ಎಂದರು.

ರೈತರ ಮಕ್ಕಳಿಗೆ ಸ್ಕಾಲರ್ಶಿಪ್, ಯಶಸ್ವಿನಿ ಯೋಜನೆ ಮರುಜಾರಿ ಸೇರಿದಂತೆ ಹತ್ತಾರು ಉತ್ತಮ ಯೋಜನೆಗಳನ್ನು ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ ಎಂದು ಅವರು ಮೆಚ್ಚುಗೆ ಸೂಚಿಸಿದರು. ಕರ್ನಾಟಕವನ್ನು ಕಾಂಗ್ರೆಸ್ ಪಕ್ಷದ ಎಟಿಎಂ ಮಾಡಲು ಅವಕಾಶ ಕೊಡುವುದಿಲ್ಲ ಎಂದು ನುಡಿದರು.
ಕೋರ್ ಕಮಿಟಿ ಸಭೆ:
ಬೆಳಗಾವಿ ವಿಭಾಗ ಬೆಳಗಾವಿ ಮಹಾನಗರ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಬಾಗಲಕೋಟೆ ಹಾಗೂ ವಿಜಾಪುರ ಜಿಲ್ಲೆಗಳ ಕೋರ್ ಕಮಿಟಿ ಸಭೆ ಮಾಡಲಾಯಿತು ಸಭೆಯಲ್ಲಿ ಪಕ್ಷದ ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ರಾಜ್ಯ ಉಪಾಧ್ಯಕ್ಷರಾದ ಮಾಲಿಕಯ್ಯ ಗುತ್ತೇದಾರ್, ಎಮ್ ಶಂಕರಪ್ಪ, ಎಮ್. ಬಿ.ನಂದೀಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ತೆಂಗಿನಕಾಯಿ ಹಾಗೂ ರಾಜ್ಯ ಕಾರ್ಯದರ್ಶಿ ಹಾಗೂ ತಂಡದ ಸಂಯೋಜಕರಾದ ಕೆ. ಎಸ್. ನವೀನ್ ಹಾಗೂ ಬೆಳಗಾವಿ ಜಿಲ್ಲೆಯ ಸಚಿವರು ಹಾಗೂ ಸಂಸದರು, ಶಾಸಕರು, ಬೆಳಗಾವಿ ಜಿಲ್ಲೆಯ ಬಿಜೆಪಿ ಅಧ್ಯಕ್ಷರು ಹಾಗೂ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು.












Click it and Unblock the Notifications