ಬೆಳಗಾವಿಯ 18 ಸ್ಥಾನದಲ್ಲಿಯೂ ಕಾಂಗ್ರೆಸ್ ಗೆಲುವು; ಖರ್ಗೆ
ಬೆಳಗಾವಿಯಲ್ಲಿ ನಡೆದ ಕರ್ನಾಟಕ ಕಾಂಗ್ರೆಸ್ನ ಯುವಕ್ರಾಂತಿ ಸಮಾವೇಶ ಉದ್ದೇಶಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು.
ಬೆಳಗಾವಿ, ಮಾರ್ಚ್ 17; ಕರ್ನಾಟಕದ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಚುನಾವಣೆ ಗೆಲ್ಲಲು ತಂತ್ರ ರೂಪಿಸಿರುವ ಕಾಂಗ್ರೆಸ್ ಯುವಜನರನ್ನು ಗಮನದಲ್ಲಿಟ್ಟುಕೊಂಡು ಸೋಮವಾರ ಬೆಳಗಾವಿಯಲ್ಲಿ 'ಯುವಕ್ರಾಂತಿ' ಸಮಾವೇಶ ಆಯೋಜನೆ ಮಾಡಿತ್ತು. ಈ ಸಮಾವೇಶದಲ್ಲಿಯೇ ಕಾಂಗ್ರೆಸ್ 4ನೇ ಗ್ಯಾರಂಟಿ 'ಯುವನಿಧಿ' ಘೋಷಣೆ ಮಾಡಲಾಗಿದೆ.
ಬೆಳಗಾವಿ ಸಿಪಿಇಡಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಹಲವು ನಾಯಕರು ಪಾಲ್ಗೊಂಡಿದ್ದರು. 'ಯುವನಿಧಿ' ಕಾರ್ಯಕ್ರಮದಡಿ ನಿರುದ್ಯೋಗಿ ಪದವೀಧರಿಗೆ ತಿಂಗಳಿಗೆ 3 ಸಾವಿರ ರೂ. ಆರ್ಥಿಕ ಶಕ್ತಿಯನ್ನು, ಡಿಪ್ಲೊಮಾ ಪದವೀಧರಿಗೆ ಪ್ರತಿ ತಿಂಗಳು 1500 ರೂ. ನಿರುದ್ಯೋಗ ಭತ್ಯೆಯನ್ನು ಎರಡು ವರ್ಷಗಳ ತನಕ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಪಕ್ಷ ಸಮಾವೇಶದಲ್ಲಿ ಘೋಷಣೆ ಮಾಡಿತು.

ಸಮಾವೇಶ ಉದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, "ನಾನು ಎಐಸಿಸಿ ಅಧ್ಯಕ್ಷನಾದ ನಂತರ ಮೊದಲ ಬಾರಿಗೆ ಬೆಳಗಾವಿಯ ಪವಿತ್ರ ಭೂಮಿಯ ಮೇಲೆ ಕಾಲಿಟ್ಟಿದ್ದೇನೆ. ಮಹಾತ್ಮಾ ಗಾಂಧೀಜಿ ಅವರು ಇದೇ ನೆಲದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಚುನಾಯಿತರಾಗಿದ್ದರು. ತಾವೆಲ್ಲರೂ ಸೇರಿ ಈಗ ನನ್ನನ್ನು ಅದೇ ಸ್ಥಾನದಲ್ಲಿ ಕೂರಿಸಿದ್ದೀರಿ, ಅದಕ್ಕಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ" ಎಂದು ಹೇಳಿದರು.
"ಒಂದು ಕಾಲದಲ್ಲಿ ಬೆಳಗಾವಿ ಕಾಂಗ್ರೆಸ್ಗೆ ಶಕ್ತಿ ತುಂಬಿದ್ದ ಜಿಲ್ಲೆ. ಇಲ್ಲಿ ನಾವು 15-16 ಕ್ಷೇತ್ರಗಳಲ್ಲಿ ಗೆಲ್ಲುತ್ತಿದ್ದೆವು. ಇಂದು ಇಲ್ಲಿ ಸೇರಿರುವ ಜನರು, ಮುಖಂಡರ ಒಗ್ಗಟ್ಟು ನೋಡಿದರೆ ಮುಂಬರುವ ಚುನಾವಣೆಯಲ್ಲಿ 18 ಕ್ಕೆ 18 ಸ್ಥಾನಗಳಲ್ಲೂ ಗೆಲ್ಲಿಸುತ್ತೀರಿ ಎಂದು ನಂಬುತ್ತೇನೆ. ಈ ಬಾರಿ ವಾತಾವರಣವೂ ಅದಕ್ಕೆ ಪೂರಕವಾಗಿದೆ" ಎಂದು ಮಲ್ಲಿಕಾರ್ಜುನ ಖರ್ಗೆ ಭರವಸೆ ವ್ಯಕ್ತಪಡಿಸಿದರು.

ಕರ್ನಾಟಕದ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಖರ್ಗೆ, "ಕರ್ನಾಟಕದಲ್ಲಿ ಯಾವ ಕಾಲದಲ್ಲೂ ಇಷ್ಟೊಂದು ಭ್ರಷ್ಟಾಚಾರ, ದುರಾಡಳಿತ ಇರಲಿಲ್ಲ. ಆದರೆ, ಈಗ ಬಿಜೆಪಿ ಸರ್ಕಾರದಲ್ಲಿ ಶೇ 40 ಕಮಿಷನ್ ನಡೆಯುತ್ತಿದೆ, ಹೀಗೆಂದು ಹೇಳಿದ್ದು ಸ್ವತಃ ಈ ಸಮಸ್ಯೆ ಎದುರಿಸುತ್ತಿರುವ ಗುತ್ತಿಗೆದಾರರು ನೇರವಾಗಿ ಪ್ರಧಾನಮಂತ್ರಿಗಳಿಗೆ, ಅಮಿತ್ ಶಾ ಅವರಿಗೇ ಪತ್ರ ಬರೆದು ದೂರಿದ್ದಾರೆ" ಎಂದು ಹೇಳಿದರು.
'ರಾಹುಲ್ ಗಾಂಧಿ ಅವರು 46 ದಿನದ ಹಿಂದೆ ಹೇಳಿದ ಮಾತಿನ ಬಗ್ಗೆ ನಿನ್ನೆ ಪೋಲೀಸರು ಸಾಕ್ಷಿ ಕೇಳಿಕೊಂಡು ಅವರ ಮನೆ ಮುಂದೆ ಹೋಗಿದ್ದಾರೆ. ಆದರೆ ಕರ್ನಾಟಕದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ಸಾಕ್ಷಿ ನೀಡಿದರೂ ತನಿಖೆ ನಡೆಸುತ್ತಿಲ್ಲ. 100 ರೂ. ಕಾಮಗಾರಿ ಇದ್ದರೆ 200 ರೂ. ಅಂದಾಜು ನಿಗದಿ ಮಾಡಿ ಕಮೀಷನ್ ಪಡೆಯುತ್ತಿದ್ದಾರೆ" ಎಂದು ಖರ್ಗೆ ಗಂಭೀರ ಆರೋಪ ಮಾಡಿದರು.
"ನರೇಂದ್ರ ಮೋದಿ ಅವರು ನನ್ನ ರಿಮೋಟ್ ಕಟ್ರೋಲ್ ಬೇರೆಯವರ ಬಳಿ ಇದೆ ಎಂದಿದ್ದಾರೆ. ಹಾಗಾದರೆ ನಿಮ್ಮ ನಡ್ಡಾ ಅವರ ರಿಮೋಟ್ ಕಂಟ್ರೋಲ್ ಯಾರ ಬಳಿ ಇದೆ?. ಅದಾನಿ ಅವರ ಬಗ್ಗೆ ರಾಹುಲ್ ಗಾಂಧಿ ಅವರು ಪ್ರಶ್ನೆ ಕೇಳಿದರೆ ಅದನ್ನು ಕಡತದಿಂದ ತೆಗೆದು ಹಾಕುತ್ತಾರೆ. ದೇಶದಲ್ಲಿ ಪ್ರಜಾಪ್ರಭುತ್ವವಿಲ್ಲ, ಜಾತಿವಾದ, ತಾರತಮ್ಯವಿದೆ ಎಂದು ಹೇಳಿದರೆ ಅದು ತಪ್ಪಾ?" ಎಂದು ಖರ್ಗೆ ಪ್ರಶ್ನಿಸಿದರು.
"ಕಾಂಗ್ರೆಸ್ ಪಕ್ಷ ಗೃಹಲಕ್ಷಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆ ಘೋಷಿಸಿದೆ. 2 ಕೋಟಿ ಉದ್ಯೋಗದ ಮಾತು ಬಿಡಿ, ದೇಶದಲ್ಲಿ 50 ಲಕ್ಷ ಸರ್ಕಾರಿ ಹುದ್ದೆ ಖಾಲಿ ಇದ್ದರೂ ಅದನ್ನೂ ತುಂಬುತ್ತಿಲ್ಲ. ರಾಜ್ಯದಲ್ಲಿ 2.50 ಲಕ್ಷ ಉದ್ಯೋಗ ಖಾಲಿ ಇದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಎಲ್ಲಾ ಹುದ್ದೆ ತುಂಬುತ್ತೇವೆ" ಎಂದು ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದರು.












Click it and Unblock the Notifications