ಬೆಳಗಾವಿ; ಕಲುಷಿತ ನೀರು ಸೇವಿಸಿ ಓರ್ವ ಸಾವು, 90 ಜನರು ಅಸ್ವಸ್ಥ
ಬೆಳಗಾವಿ ಅಕ್ಟೋಬರ್ 27: ಕಲುಷಿತ ನೀರು ಸೇವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ನಡೆದಿದೆ. ಶಿವಪ್ಪ (70) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ.
ಮುದೇನೂರು ಗ್ರಾಮದಲ್ಲಿ ನಲ್ಲಿಗಳಿಗೆ ನೀರು ಪೂರೈಸುವ ಪೈಪ್ಲೈನ್ ಒಡೆದು ಚರಂಡಿ ನೀರು ಸೇರ್ಪಡೆಯಾಗುತ್ತಿದೆ. ಇದನ್ನು ಸೇವಿಸಿದ ಜನರ ಆರೋಗ್ಯದಲ್ಲಿ ಏರುಪೇರಾಗಿದೆ. ಮೂರು ದಿನಗಳ ಅಂತರದಲ್ಲಿ ಸುಮಾರು 90ಕ್ಕೂ ಹೆಚ್ಚು ಜನರ ಅಸ್ವಸ್ಥಗೊಂಡಿದ್ದಾರೆ.
ದೀಪಾವಳಿ ಹಬ್ಬದ ಸಂಭ್ರಮದಲ್ಲಿರಬೇಕಾದ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದಾಗಿ ಆತಂಕ ಉಂಟಾಗಿದೆ. ಕಲುಷಿತ ನೀರು ಸೇವಿಸಿ ಮೃತಪಟ್ಟ ಶಿವಪ್ಪ ಕುಟುಂಬಕ್ಕೆ ರಾಜ್ಯ ಸರ್ಕಾರವು 10 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಪರಿಹಾರ ವಿತರಣೆ ಕುರಿತು ಜಿಲ್ಲಾಡಳಿತಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸಚಿವರು, "ನಿನ್ನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮುದೇನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ, ಕೆಲವರು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅದರಲ್ಲಿ 70 ವರ್ಷದ ವೃದ್ಧ ಶಿವಪ್ಪ ಎನ್ನುವವರು ಮೃತಪಟ್ಟಿದ್ದಾರೆ. ಇನ್ನುಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಈ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಜಿಲ್ಲೆಯ ಅಧಿಕಾರಿಗಳಿಗೆ ತಿಳಿಸಿದ್ದೇನೆ" ಎಂದು ಹೇಳಿದ್ದಾರೆ.
ಗ್ರಾಮ ಪಂಚಾಯಿತಿ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಆರೋಪಿಸಲಾಗುತ್ತಿದೆ. ಜಿಲ್ಲಾ ಹಿರಿಯ ಆರೋಗ್ಯಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೂಕ್ತ ಚಿಕಿತ್ಸಾ ವ್ಯವಸ್ಥೆ ಮಾಡುವಂತೆ ರಾಮದುರ್ಗದ ಸರ್ಕಾರಿ ಆಸ್ಪತ್ರೆಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಳಗಾವಿ ಜಿಲ್ಲಾ ವ್ಯಾಪ್ತಿಯ ವಿವಿಧ ತಾಲೂಕುಗಳಿಗೆ ಜಲಜೀವನ ಮಿಷನ್ ಅಡಿ ಕುಡಿಯುವ ನೀರಿನ ಒದಗಿಸುವ ಯೋಜನೆಗಾಗಿ ಒಟ್ಟು 960 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದ್ದರು. ಈ ಯೋಜನೆ ಘೋಷಣೆ ಬೆನ್ನಲ್ಲೇ ದುರ್ಘಟನೆ ಸಂಭವಿಸಿದೆ.












Click it and Unblock the Notifications