ಮಹಾಪ್ರವಾಹ : ತಾತ್ಕಾಲಿಕ ಶೆಡ್ ನಿರ್ಮಾಣಕ್ಕೆ ಹಣ ಬಿಡುಗಡೆ
ಬೆಳಗಾವಿ, ಆಗಸ್ಟ್ 18 : "ಪ್ರವಾಹ ಮತ್ತು ಮಳೆಯಿಂದ ಸಂಪೂರ್ಣ ಮನೆ ಕುಸಿದಿದ್ದರೆ ಮನೆ ನಿರ್ಮಾಣಕ್ಕೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ನೀಡಲಿದೆ. ಅದೇ ರೀತಿ ಮನೆ ನಿರ್ಮಾಣ ಮಾಡುವವರೆಗೆ ಹತ್ತು ತಿಂಗಳು ಕಾಲ ಪ್ರತಿ ತಿಂಗಳು ಐದು ಸಾವಿರ ಬಾಡಿಗೆ ಅಥವಾ ತಾತ್ಕಾಲಿಕ ಶೆಡ್ ನಿರ್ಮಾಣಕ್ಕೆ ತಕ್ಷಣ ಐವತ್ತು ಸಾವಿರ ನೀಡಲಾಗುವುದು" ಎಂದು ಟಿ. ಎಂ. ವಿಜಯ ಭಾಸ್ಕರ್ ಹೇಳಿದರು.
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಅರಂಭಿಸಲಾಗಿರುವ ಪರಿಹಾರ ಕೇಂದ್ರಕ್ಕೆ ಭಾನುವಾರ ಭೇಟಿ ನೀಡಿದರು. ಪ್ರವಾಹ ಸಂತ್ರಸ್ತರ ಜೊತೆ ಮಾತುಕತೆ ನಡೆಸಿದರು.
"ಬಾಡಿಗೆ ಮನೆಯಲ್ಲಿದ್ದವರಿಗೂ ಕೂಡ ತಕ್ಷಣವೇ 50 ಸಾವಿರ ರೂಪಾಯಿ ನೀಡಲಾಗುವುದು. ಸಂತ್ರಸ್ತರು ಜಮೀನು ಹೊಂದಿದ್ದರೆ ಮನೆ ನಿರ್ಮಾಣಕ್ಕೆ ಹಣ ನೀಡಲಾಗುವುದು. ಜಮೀನು ಇಲ್ಲದವರಿಗೆ ಸರ್ಕಾರದಿಂದಲೇ ಮನೆ ಒದಗಿಸಲು ಕ್ರಮ ಕೈಗೊಳ್ಳಲಾಗುತ್ತದೆ" ಎಂದರು.

ಎತ್ತರದ ಸೇತುವೆ ನಿರ್ಮಾಣಕ್ಕೆ ಮನವಿ : "ಪ್ರವಾಹ ಸಂದರ್ಭದಲ್ಲಿ ರಾಯಬಾಗ, ಚಿಕ್ಕೋಡಿ ಹಾಗೂ ಮಹಾರಾಷ್ಟ್ರದ ಸಂಪರ್ಕ ಕಡಿತಗೊಳ್ಳುವುದರಿಂದ ಜನ-ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಅನುಕೂಲ ಆಗುವಂತೆ ಫ್ಲೈ ಓವರ್ ಮಾದರಿಯಲ್ಲಿ ಎತ್ತರದ ಸೇತುವೆ ನಿರ್ಮಾಣ ಅಗತ್ಯವಿದ್ದು, ಕೂಡಲೇ ಈ ಬಗ್ಗೆ ಕ್ರಮಕೈಗೊಳ್ಳಬೇಕು" ಎಂದು ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ ಮನವಿ ಮಾಡಿದರು.
"ಪ್ರತಿವರ್ಷ ಮಳೆ ಹೆಚ್ಚಾದರೆ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುತ್ತಿದೆ. ಮುಳುಗಡೆಯಾಗುವ ಗ್ರಾಮಗಳಿಗೆ ರಸ್ತೆ ಸಂಪರ್ಕ ಸುಲಭವಾಗುವಂತೆ ಸೇತುವೆಗಳ ಎತ್ತರ ಹೆಚ್ಚಿಸಬೇಕು" ಎಂದು ಪ್ರಭಾಕರ್ ಕೋರೆ ಹೇಳಿದರು.
ಪ್ರವಾಹ ಸಂತ್ರಸ್ತ ಮಹಿಳೆಯರು, ಬೇರೆ ಕಡೆ ಜಾಗೆ ನೀಡಿದರೆ ನಾವು ಮನೆ ಕಟ್ಟಿಕೊಂಡು ನೆಮ್ಮದಿಯಾಗಿರುತ್ತೇವೆ. ಮಣ್ಣಿನ ಮನೆ ಸಂಪೂರ್ಣ ಕುಸಿದಿದೆ ಎಂದು ಮುಖ್ಯ ಕಾರ್ಯದರ್ಶಿಗಳ ಬಳಿ ಅಹವಾಲು ಸಲ್ಲಿಸಿದರು.

ಸಂತ್ರಸ್ತರಿಗೆ ನೀಡಲಾಗುತ್ತಿರುವ ಊಟ, ಉಪಹಾರ, ಔಷಧಿ ಮತ್ತಿತರ ಸೌಲಭ್ಯದ ಬಗ್ಗೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಮಾಹಿತಿ ಪಡೆದುಕೊಂಡರು. ಮಕ್ಕಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರಗಳನ್ನು ಕೂಡ ನೀಡಲಾಗುವುದು ಎಂದರು.
ಪರಿಹಾರ ಕೇಂದ್ರದಲ್ಲಿ ಎಷ್ಟು ಜನರಿಗೆ ವೈದ್ಯಕೀಯ ತಪಾಸಣೆ ಮಾಡಲಾಗಿದೆ. ಯಾವ ರೀತಿಯ ಔಷಧಿ ವಿತರಣೆ, ಗರ್ಭಿಣಿಯರು ಎಷ್ಟು ಜನರಿದ್ದಾರೆ. ಅವರಿಗೆ ಯಾವ ರೀತಿಯ ಸೌಲಭ್ಯಗಳನ್ನು ನೀಡಲಾಗಿದೆ ಎಂಬುದರ ಬಗ್ಗೆ ವೈದ್ಯಾಧಿಕಾರಿಗಳಿಂದ ತಿಳಿದುಕೊಂಡರು.












Click it and Unblock the Notifications