ಬೆಳಗಾವಿಯಲ್ಲಿ ವ್ಯಾಪಕ ಮಳೆ: ನದಿತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ
ಬೆಳಗಾವಿ, ಆಗಸ್ಟ್ 17: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಹಾಗೂ ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಮೊದಲು ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ನೀರಿನ ಒಳ ಹರಿವು ಮತ್ತು ಹೊರ ಹರಿವಿನ ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು. ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. ನೀರು ಬಿಡುಗಡೆಗಿಂತ ಮುಂಚೆ ನದಿ ತೀರದ ಜನರಿಗೆ ಹಾಗೂ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿಯನ್ನು ಮುಂಚಿತವಾಗಿ ನೀಡಬೇಕು ಎಂದು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನವೀಲುತೀರ್ಥ ಜಲಾಶಯದ ಕಾರ್ಯನಿರ್ವಾಹಕ ಅಭಿಯಂತರ ಕೃಷ್ಣಾಜಿ ರಾವ್ ಉಪಸ್ಥಿತರಿದ್ದರು.

51 ಕುಟುಂಬಗಳು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ
ಬೈಲಹೊಂಗಲ ಪಟ್ಟಣದ ಕೆಲ ಪ್ರದೇಶಗಳನ್ನು ಸುತ್ತಾಡಿದ ಜಿಲ್ಲಾಧಿಕಾರಿಗಳು, ನೆರೆ ಹಾವಳಿಯಿಂದ ಉಂಟಾಗುವ ಸಮಸ್ಯೆಗಳ ಕುರಿತು ಪರಿಶೀಲನೆ ಕೈಗೊಂಡು, ನಯಾನಗರ ಸೇತುವೆ ವೀಕ್ಷಿಸಿದರು. ಮಲಪ್ರಭಾ ನದಿ ತೀರದ ರಾಮದುರ್ಗ ತಾಲ್ಲೂಕಿನ ಹಿರೇ ಹಂಪಿಹೊಳಿ ಹಾಗೂ ಚಿಕ್ಕ ಹಂಪಿಹೊಳಿ ಗ್ರಾಮದ ಒಟ್ಟು 51 ಕುಟುಂಬಗಳನ್ನು ಮುಂಜಾಗ್ರತಾ ಕ್ರಮವಾಗಿ ಸುರೇಬಾನದ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಸುರೇಬಾನದ ಎಪಿಎಂಸಿ ಆವರಣದ ಕೇಂದ್ರದಲ್ಲಿ 12 ಕುಟುಂಬಗಳು ಮತ್ತು ಹೈಸ್ಕೂಲಿನಲ್ಲಿ ತೆರೆಯಲಾಗಿರುವ ಪರಿಹಾರ ಕೇಂದ್ರದಲ್ಲಿ 39 ಕುಟುಂಬಗಳಿಗೆ ಆಶ್ರಯ ಕಲ್ಪಿಸಲಾಗಿದೆ.

ಐದು ಜನರ ಪ್ರತ್ಯೇಕ ತಂಡ ರಚನೆ
ಕುಟುಂಬಗಳಿಗೆ ಊಟೋಪಹಾರ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕಾಳಜಿ ಕೇಂದ್ರಗಳಲ್ಲಿರುವವರಿಗೆ ಮಾಸ್ಕ್, ಸ್ಯಾನಿಟೈಸರ್, ಪಲ್ಸ್ ಆಕ್ಸಿಮೀಟರ್ ಮತ್ತಿತರ ಅಗತ್ಯ ಉಪಕರಣ ನೀಡಲಾಗಿದ್ದು, ಪ್ರತಿ ಪರಿಹಾರ ಕೇಂದ್ರಕ್ಕೆ ವೈದ್ಯರ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಸೇರಿದಂತೆ ಐದು ಜನರ ಪ್ರತ್ಯೇಕ ತಂಡ ನಿಯೋಜಿಸಲಾಗಿದೆ ಎಂದು ಹೇಳಿದರು. ಇದೇ ರೀತಿ ರಾಮದುರ್ಗ ತಾಲ್ಲೂಕಿನ ಗೊನ್ನಾಗರದಲ್ಲೂ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು ಹಾಗೂ ಜಿಲ್ಲಾಧಿಕಾರಿಗಳು, ಅಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ಈ ಕೇಂದ್ರದಲ್ಲಿ 48 ಕುಟುಂಬಗಳ 200ಕ್ಕೂ ಅಧಿಕ ಜನರು ಆಶ್ರಯ ಪಡೆದುಕೊಂಡಿದ್ದಾರೆ. ಪರಿಹಾರ ಕೇಂದ್ರದಲ್ಲಿನ ವ್ಯವಸ್ಥೆಯ ಕುರಿತು ಗ್ರಾಮಸ್ಥರಿಂದಲೂ ಮಾಹಿತಿಯನ್ನು ಪಡೆದುಕೊಂಡರು.

ದೇವಸ್ಥಾನಗಳಿಗೂ ನುಗ್ಗಿದ ನೀರು
ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದ ಬೆಳಗಾವಿ ಜಿಲ್ಲೆಯ ಸಪ್ತನದಿಗಳು ತುಂಬಿ ಹರಿಯುತ್ತಿವೆ. ಹೀಗಾಗಿ ನದಿ ಪಾತ್ರದ ದೇವಸ್ಥಾನಗಳು ಕೂಡ ಮುಳುಗಡೆ ಆಗಿವೆ. ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿ ಸಮೀಪದ ಗಂಗಾಬಿಕೆ ಐಕ್ಯ ಸ್ಥಳವೂ ಮಲಪ್ರಭಾ ನದಿಯಿಂದ ಮುಳುಗಡೆ ಆಗಿದೆ. ಘಟಪ್ರಭಾ ನದಿಯ ಒಳಹರಿವು ಹೆಚ್ಚಳದಿಂದ ಹುಕ್ಕೇರಿ ತಾಲೂಕಿನ ಕೊಟಬಾಗಿ ಗ್ರಾಮದ ದುರ್ಗಾದೇವಿ ದೇವಸ್ಥಾನ ಜಲಾವೃತಗೊಂಡಿವೆ. ಕೃಷ್ಣಾ ನದಿ ಅಪಾಯಮಟ್ಟ ಮೀರಿ ಹರಿಯುತ್ತಿರುವ ಕಾರಣ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ದತ್ತ ಮಂದಿರ ಮುಳುಗಡೆಯಾಗಿದೆ. ರಾಮದುರ್ಗ ತಾಲೂಕಿನ ಕಿಲ್ಲಾತೋರಗಲ್ಲ ಬಳಿಯ ದೇವಸ್ಥಾನ ಕೂಡ ಮುಳುಗಡೆ ಆಗಿದೆ.

ಗೋಕಾಕ, ರಾಮದುರ್ಗದಲ್ಲಿ ನೀರು
ನವಿಲು ತೀರ್ಥ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ ಹಿನ್ನೆಲೆಯಲ್ಲಿ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರಾಮದುರ್ಗ ತಾಲೂಕಿನ ಸುನ್ನಾಳ ಗ್ರಾಮದ ಸರ್ಕಾರಿ ಶಾಲೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಗ್ರಾಮದ ಇಪ್ಪತ್ತಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿವೆ. ಇನ್ನೊಂದೆಡೆ ಬೆಳಗಾವಿ ಜಿಲ್ಲೆ ಗೋಕಾಕ್ಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಹಿಡಕಲ್ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ಗೋಕಾಕ್ ನಗರದ ಹೊರವಲಯದಲ್ಲಿನ ದನದಪೇಟೆ, ಮನೆ ಹಾಗೂ ಅಂಗಡಿಗಳಿಗೆ ನೀರು ನುಗ್ಗಿದೆ.











Click it and Unblock the Notifications