ನನ್ನನ್ನು ಜೈಲಿಗೆ ಕಳುಹಿಸಲು ಕಟೀಲ್, ಕುಮಾರಸ್ವಾಮಿ ನ್ಯಾಯಾಧೀಶರಲ್ಲ- ಡಿ.ಕೆ ಶಿವಕುಮಾರ್
ಬೆಳಗಾವಿ, ಅಕ್ಟೋಬರ್ 18: ನನ್ನನ್ನು ಜೈಲಿಗೆ ಕಳುಹಿಸಲು ನಳೀನ್ ಕುಮಾರ್ ಕಟೀಲ್ ಆಗಲಿ, ಕುಮಾರಸ್ವಾಮಿ ಅವರಾಗಲಿ ನ್ಯಾಯಾಧೀಶರಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಕುಮಾರ್ ಅವರು ಎರಡನೇ ಬಾರಿಗೆ ತಿಹಾರ್ ಜೈಲಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳಲಿ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಬಹಿರಂಗವಾಗಿ ತಿರುಗೇಟು ನೀಡಿದರು.

ಬೆಳಗಾವಿಯಲ್ಲಿ ಇಂದು ಈ ಭಾಗದ ವಿವಿಧ ನೀರಾವರಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳ ಸಭೆ ಮಾಡಿ ಚರ್ಚಿಸಿದ್ದೇನೆ. ಈ ಭಾಗದಲ್ಲಿ ಘಟಪ್ರಭ, ಮಾರ್ಕಂಡೇಯ, ಹಿಪ್ಪರಗಿ, ಆಲಮಟ್ಟಿ ಜಲಾಶಯಗಳಲ್ಲಿ ಶೇ.90 ರಷ್ಟು ನೀರು ತುಂಬಿದೆ. ಮಲಪ್ರಭದಲ್ಲಿ ಮಾತ್ರ ಶೇ. 52ರಷ್ಟಿದೆ. ಈ ಭಾಗದಲ್ಲಿ ನೀರಾವರಿ ಇಲಾಖೆಯ ಹುದ್ದೆಗಳ ನೇಮಕಾತಿ ಸಮಸ್ಯೆ ಇದೆ. ಒಟ್ಟು 1322 ಹುದ್ದೆಗಳು ಮಂಜೂರಾಗಿದ್ದು, 671 ಭರ್ತಿಯಾಗಿದ್ದು, 651 ಹುದ್ದೆಗಳು ಖಾಲಿ ಇವೆ. ಬೆಂಗಳೂರಿಗೆ ಹೋದ ಮೇಲೆ ಈ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುತ್ತೇನೆ ಎಂದರು.
ಯಾವ ಕಾಮಗಾರಿಗಳನ್ನು ಉಳಿಸಿಕೊಳ್ಳಬೇಕು, ಯಾವ ಅನಗತ್ಯ ಕಾಮಗಾರಿಗಳನ್ನು ಕೈಬಿಡಬೇಕು ಎಂಬುದರ ಬಗ್ಗೆ ಸಭೆ ಮಾಡಿ ತೀರ್ಮಾನಿಸುತ್ತೇವೆ. ನೀರು ಬಳಕೆದಾರರ ಸಂಘದ ಚಟುವಟಿಕೆಗಳು ಸರಿಯಾಗಿ ನಡೆಯುತ್ತಿಲ್ಲ. ಮುಂದಿನ ನೂರು ದಿನಗಳಲ್ಲಿ ಎಲ್ಲಾ ಕಡೆ ನೀರು ಬಳಕೆದಾರರ ಸಂಘ ಸ್ಥಾಪನೆಯಾಗಬೇಕು ಎಂದು ಕಾಡಾ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಈ ಮೂಲಕ ಸೂಚನೆ ನೀಡುತಿದ್ದೇನೆ. ಚಟುವಟಿಕೆ ನಡೆಯದ ಕಡೆ ಮತ್ತೆ ಚುನಾವಣೆ ಮಾಡಿ ಪುನರಾರಂಭಿಸಬೇಕು ಎಂದು ಹೇಳಿದರು.
ಇನ್ನು ವಾಲ್ಮಿ ತರಬೇತಿಗೆ ಧಾರವಾಡಕ್ಕೆ ಹೋಗಬೇಕಾಗಿದೆ. ರಾಜ್ಯದ ಆಯಾ ಭಾಗಗಳಲ್ಲಿ ವಾಲ್ಮಿ ತರಬೇತಿ ಕೇಂದ್ರಗಳನ್ನು ಆರಂಭಿಸಿ ಅಲ್ಲೇ ತರಬೇತಿ ನೀಡುವ ಬಗ್ಗೆ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಇದನ್ನು ಪರಿಗಣಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ತರಬೇತಿ ಕೇಂದ್ರಗಳನ್ನು ಆರಂಭಿಸಲಾಗುವುದು. ಎಲ್ಲೆಲ್ಲಿ ಮೂಲಭೂತ ಸೌಕರ್ಯ ಇರುವುದಿಲ್ಲವೇ ಅಂತಹ ಪ್ರದೇಶಗಳಲ್ಲಿ ಸಂಸ್ಥೆಗಳ ಜೊತೆ ಒಡಂಬಡಿಕೆ ಮಾಡಿಕೊಂಡು ತರಬೇತಿ ನೀಡುವ ವ್ಯವಸ್ಥೆ ಮಾಡಲು ಕಾರ್ಯಕ್ರಮ ರೂಪಿಸಲಾಗುವುದು ಎಂದು ತಿಳಿಸಿದರು.

ಎಲ್ಲಾ ಸೊಸೈಟಿ ಸಭೆಗಳಲ್ಲಿ ಎಇಇಗಳು ಭಾಗವಹಿಸಬೇಕು ಎಕ್ಸಿಕ್ಯೂಟಿವ್ ಇಂಜಿನಿಯರ್ ಉಸ್ತುವಾರಿ ನೋಡಿಕೊಳ್ಳಬೇಕು. ನೀರಾವರಿ ಇಲಾಖೆ ಹಾಗೂ ಕಾಡಾ ಎರಡೂ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ರೈತರಿಗೆ ಭೂಮಿ ಹೇಗೆ ಬಳಕೆಯಾಗಬೇಕು. ಈ ಭಾಗದಲ್ಲಿ ಹೆಚ್ಚಾಗಿ ಕಬ್ಬು ಬೆಳೆಯಲಾಗುತ್ತಿದ್ದು, ಇದಕ್ಕೆ ನೀರು ಪೂರೈಸಬೇಕು. ಹೊಸ ಕೆರೆ ಹಾಗೂ ಕೆನಾಲ್ ಗಳಿಂದ ನೀರು ಕದಿಯದಂತೆ ರಕ್ಷಣೆ ಮಾಡಲು ಕಾನೂನು ತರಲಾಗುವುದು. ಈ ವಿಚಾರವಾಗಿ ಮಹಾರಾಷ್ಟ್ರದಲ್ಲಿರುವ ವ್ಯವಸ್ಥೆ ಬಗ್ಗೆ ಅಧಿಕಾರಿಗಳು ಗಮನಸೆಳೆದಿದ್ದು, ಈ ಬಗ್ಗೆ ವರದಿ ನೀಡುವಂತೆ ತಿಳಿಸಿದ್ದೇನೆ. ಸಾಧ್ಯವಾದರೆ ನಾನು ಕೂಡ ಹೋಗಿ ನೋಡಿಕೊಂಡು ಬರುತ್ತೇನೆ ಎಂದು ಹೇಳಿದರು.












Click it and Unblock the Notifications