ಬೆಳಗಾವಿಯಲ್ಲಿ ಮಳೆಯಿಂದ ಹಾಳಾದ ರಸ್ತೆ, ಸೇತುವೆ ಕಾಮಗಾರಿಗೆ ಸೆ.22 ಡೆಡ್ ಲೈನ್
ಬೆಳಗಾವಿ, ಸೆಪ್ಟೆಂಬರ್ 4: ಮಳೆ ಮತ್ತು ಪ್ರವಾಹದಿಂದ ಹಾಳಾಗಿರುವ ಸೇತುವೆ ಹಾಗೂ ರಸ್ತೆಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಶಾಸಕರ ಗಮನಕ್ಕೆ ತಂದು ಸೆ.22ರ ಒಳಗಾಗಿ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವಲಯ ಮಟ್ಟದ ಯೋಜನೆಗಳ ಬಗ್ಗೆ ಮತ್ತು ಪ್ರವಾಹ ಹಾನಿ ತಡೆಗಟ್ಟುವ ಕುರಿತು ತುರ್ತಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸುವರ್ಣಸೌಧದಲ್ಲಿ ಶುಕ್ರವಾರ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅತಿವೃಷ್ಟಿ ಹಾನಿಗೆ ಸಮರ್ಪಕ ಪರಿಹಾರ; ಮುಂದಿನ ವಾರ ದೆಹಲಿಗೆ ಸಿಎಂ
ಸೆ.22ರ ಒಳಗಾಗಿ ಬೆಳಗಾವಿ ಮತ್ತು ಧಾರವಾಡ ವಲಯದ ರಸ್ತೆ ಹಾಗೂ ಸೇತುವೆಗಳ ಕಾಮಗಾರಿಗಳು ಪ್ರಾರಂಭಗೊಳ್ಳಬೇಕು. ಕಾಮಗಾರಿಗಳಿಗೆ ಸಂಬಂಧಿಸಿದಂತೆ ಟೆಂಡರ್ ನೋಟಿಫಿಕೇಷನ್ ಹೊರಡಿಸಬೇಕು. ಟೆಂಡರ್ ಪ್ರಕ್ರಿಯೆ ಶೀಘ್ರ ಪೂರ್ಣಗೊಳಿಸಲು ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು ಎಂದರು.
ಬೆಳಗಾವಿ ವಲಯದ 74 ಕೆಲಸಗಳಿಗೆ ಬೇಕಾಗುವ ದಾಖಲಾತಿಗಳನ್ನು ಸಿದ್ಧಪಡಿಸಿಕೊಂಡು ಟೆಂಡರ್ ಬಿಡುಗಡೆ ಮಾಡಬೇಕು. ಚಿಕ್ಕೋಡಿ ವಲಯದ ಕಾಮಗಾರಿಗಳಿಗೆ ಸಂಬಂಧಿಸಿದಂತೆ ನಾಳೆವರೆಗೆ ಸಂಪೂರ್ಣ ಮಾಹಿತಿಯನ್ನು ನೀಡಬೇಕು ಎಂದು ತಿಳಿಸಿದರು. ವಿಜಯಪುರ ಜಿಲ್ಲೆಯಲ್ಲಿ ಮಳೆ ಹಾಗೂ ಪ್ರವಾಹದಿಂದ ಹಾಳಾಗಿರುವ ರಸ್ತೆ ಮತ್ತಿತರ ಮೂಲಸೌಕರ್ಯಗಳ ದುರಸ್ತಿಗೆ ಅಗತ್ಯವಿರುವ ಕೆಲಸಗಳಿಗೆ ಅಂದಾಜು ಮೊತ್ತದ ವರದಿ ತಯಾರಿಸಬೇಕೆಂದು ಸೂಚಿಸಿದರು.