ಲಕ್ಷ್ಮಿ ಹೆಬ್ಬಾಳ್ಕರ್ಗೆ ಕೈ ಕೊಟ್ಟು ಗ್ರಾ.ಪಂ ಚುನಾವಣೆಗೆ ಸ್ಪರ್ಧಿಸಿದ್ದ ಹಾಲಿ ಜಿ.ಪಂ ಸದಸ್ಯೆಗೆ ಸೋಲು
ಬೆಳಗಾವಿ, ಡಿಸೆಂಬರ್ 31: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಸುಳೇಬಾವಿಯಲ್ಲಿ ಆಪರೇಶನ್ ಕಮಲ ಮಾಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಹಾಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಲಕ್ಷ್ಮಿ ವಿಠ್ಠಲ ಪಾರ್ವತಿ ಮತ್ತು ಅವರ ಮಾವ ನಾನಪ್ಪ ಪಾರ್ವತಿ ಇಬ್ಬರನ್ನೂ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿಗರು ಪರಾಭವಗೊಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದ ಹಾಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಲಕ್ಷ್ಮಿ ವಿಠ್ಠಲ ಪಾರ್ವತಿ ಅವರು, ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗನಿಂದ ಹೀನಾಯ ಸೋಲು ಅನುಭವಿಸಿದ್ದಾರೆ.

ಲಕ್ಷ್ಮಿ ಪಾರ್ವತಿ ಅವರು ಕಳೆದ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳಕರ್ ಪ್ರಯತ್ನದಿಂದಾಗಿ ಗೆದ್ದಿದ್ದರು. ಆದರೆ ಈಚೆಗೆ ರಮೇಶ ಜಾರಕಿಹೊಳಿ ಅವರು ಲಕ್ಷ್ಮಿ ವಿಠ್ಠಲ ಪಾರ್ವತಿ ಅವರನ್ನು ಬಿಜೆಪಿಗೆ ಸೇರ್ಪಡೆಗೊಳಿಸಿದ್ದರು.
ಮಾವ, ಸೊಸೆ ಇಬ್ಬರೂ ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಇಬ್ಬರೂ ತೀವ್ರ ಮುಖಭಂಗ ಅನುಭವಿಸಿದ್ದಾರೆ. ತನ್ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಆಪರೇಶನ್ ಫೇಲ್ ಆಗಿದೆ.
ಹಾಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ತನ್ನನ್ನು ಗೆಲ್ಲಿಸಿದ್ದ ಲಕ್ಷ್ಮಿ ಹೆಬ್ಬಾಳ್ಕರ್ಗೆ ಕೈಕೊಟ್ಟು ಈಗ ತಾವೇ ಸೋಲನುಭವಿಸುವಂತಾಯಿತು. ಈ ಮೂಲಕ ರಮೇಶ ಜಾರಕಿಹೊಳಿಗೆ ಗ್ರಾಮೀಣ ಕ್ಷೇತ್ರದಲ್ಲಿ ಅವಕಾಶವಿಲ್ಲ ಎನ್ನುವುದನ್ನು ಮತದಾರರು ತೋರಿಸಿದ್ದಾರೆ.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬೆಂಬಲಿಗರು ಭರ್ಜರಿ ಜಯಭೇರಿ ಭಾರಿಸಿದ್ದಾರೆ. ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 44 ಗ್ರಾಮ ಪಂಚಾಯಿತಿಗಳಿದ್ದು, ಶೇ.75ಕ್ಕಿಂತಲೂ ಹೆಚ್ಚಿನ ಸ್ಥಾನಗಳಲ್ಲಿ ತಮ್ಮ ಬೆಂಬಲಿಗರು ಜಯಗಳಿಸಿದ್ದಾಗಿ ಹೆಬ್ಬಾಳಕರ್ ಮಾಹಿತಿ ನೀಡಿದ್ದಾರೆ.
ಮತದಾರರು ಅಭಿವೃದ್ಧಿಗೆ ಮತ ನೀಡಿರುವುದಕ್ಕೆ, ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ಸದಾ ಋಣಿಯಾಗಿರುವುದಾಗಿ ಲಕ್ಷ್ಮಿ ಹೆಬ್ಬಾಳಕರ್ ತಿಳಿಸಿದ್ದಾರೆ.












Click it and Unblock the Notifications