ಗಡಿ ಪ್ರವೇಶ: ಜನರನ್ನು ಅವರ ಜಿಲ್ಲೆಗಳಿಗೆ ಕಳುಹಿಸಲು ನಿರ್ಧಾರ
ಬೆಳಗಾವಿ, ಮೇ 11: ನೆರೆಯ ಮಹಾರಾಷ್ಟ್ರ ರಾಜ್ಯದಿಂದ ಬೆಳಗಾವಿ ಜಿಲ್ಲೆಗೆ ಆಗಮಿಸುವ ಜನರನ್ನು ತಪಾಸಣೆ ನಡೆಸಿದ ಬಳಿಕ ಅವರನ್ನು ಸಂಬಂಧಿಸಿದ ಜಿಲ್ಲೆಗಳಿಗೆ ಕಳುಹಿಸಿ ಕ್ವಾರಂಟೈನ್ ಮಾಡುವ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಈ ವಿಷಯವನ್ನು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ. ಗಡಿ ಜಿಲ್ಲೆ ಬೆಳಗಾವಿಗೆ ಆಗಮಿಸುವ ಇತರೆ ಜಿಲ್ಲೆಯ ಜನರನ್ನು ಆಯಾ ಜಿಲ್ಲೆಯ ನೋಡಲ್ ಅಧಿಕಾರಿಗಳ ಮೂಲಕ ಕಳಿಸಿಕೊಡಬೇಕು ಎಂದರು.
Recommended Video
ಬೇರೆ ರಾಜ್ಯಗಳಲ್ಲಿ ಮೃತಪಟ್ಟಿರುವವರನ್ನು ರಾಜ್ಯಕ್ಕೆ ಕರೆತರದೇ ಆಯಾ ರಾಜ್ಯಗಳಲ್ಲಿಯೇ ಅಂತ್ಯಕ್ರಿಯೆ ನಡೆಸಬೇಕು ಎಂದು ರಾಜ್ಯ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು
ಹೆಚ್ಚು ಸೋಂಕಿತ ಪ್ರಕರಣಗಳು ವರದಿಯಾಗಿದ್ದರೂ ಕೂಡಾ, ಸುದೈವದಿಂದ ಜೀವಹಾನಿ ಪ್ರಮಾಣ ಕಡಿಮೆಯಾಗಿದೆ. ಇದುವರೆಗೆ ವೆಂಟಿಲೇಟರ್ ಬಳಕೆ ಹಂತಕ್ಕೆ ಪರಿಸ್ಥಿತಿ ತಲುಪಿಲ್ಲ. ಸೋಂಕಿತರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡಿ, ನೆಗೆಟಿವ್ ಬಂದ ಬಳಿಕ ಅವರಲ್ಲಿ ಆತ್ಮಸ್ಥೈರ್ಯ ಮೂಡಿಸಿ ಬಳಿಕ ಮನೆಗೆ ಕಳಿಸಬೇಕು ಎಂದರು.
ಸೋಂಕಿತರಿಗೆ ನೀಡಲಾಗುತ್ತಿರುವ ಚಿಕಿತ್ಸೆಯ ಬಗ್ಗೆ ಬಿಮ್ಸ್ ನಿರ್ದೇಶಕರಿಂದ, ಕೈಗಾರಿಕೆಗಳು ಮತ್ತು ಇತರೆ ವಾಣಿಜ್ಯ, ಆರ್ಥಿಕ ವಹಿವಾಟು ಆರಂಭಗೊಂಡಿರುವ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿಯನ್ನು ಸಚಿವರು ಪಡೆದುಕೊಂಡರು.

ಸಾರ್ವಜನಿಕರಿಗೆ ಹೊರೆಯಾಗದಂತೆ ಕ್ರಮ
ಎರಡು ತಿಂಗಳಿನ ವಿದ್ಯುತ್ ಬಿಲ್ ಒಮ್ಮೆಲೆ ನೀಡುತ್ತಿರುವುದರಿಂದ ಜನರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆಯೂ ಪರಿಶೀಲಿಸಿ ಜನರಿಗೆ ಅನುಕೂಲ ಕಲ್ಪಿಸುವಂತೆ ಸಚಿವ ಜಗದೀಶ್ ಶೆಟ್ಟರ್ ಅವರು ನಿರ್ದೇಶನ ನೀಡಿದರು.
ಈ ಬಗ್ಗೆ ಹೆಸ್ಕಾಂ ಹಿರಿಯ ಅಧಿಕಾರಿಗಳ ಜತೆ ಸಭೆಯಲ್ಲಿಯೇ ದೂರವಾಣಿಯ ಮೂಲಕ ಮಾತನಾಡಿದ ಸಚಿವರು, ಸಾರ್ವಜನಿಕರಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕು ಮತ್ತು ಕಂತುಗಳಲ್ಲಿ ಬಿಲ್ ಪಾವತಿಸಲು ಅನುಕೂಲ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ಗಡಿಭಾಗದಲ್ಲಿ ಸಿಲುಕಿರುವ ಪ್ರಯಾಣಿಕರು
ನಿರಂತರವಾಗಿ 45 ದಿನಗಳಿಗಿಂತ ಅಧಿಕ ಕಾಲ ಕಂಟೈನ್ಮೆಂಟ್ ಝೋನ್ ಆಗಿರುವ ಪ್ರದೇಶಗಳಲ್ಲಿ ಸ್ವಲ್ಪಮಟ್ಟಿಗೆ ವಿನಾಯಿತಿ ನೀಡುವುದರ ಬಗ್ಗೆ ಸರ್ಕಾರಕ್ಕೆ ಒಂದು ಪ್ರಸ್ತಾವ ಕಳಿಸುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅದೇ ರೀತಿ ದಾನಿಗಳಿಂದ ಅಗತ್ಯ ಸಾಮಗ್ರಿಗಳನ್ನು ಸಂಗ್ರಹಿಸಿ ಕಂಟೈನ್ಮೆಂಟ್ ಝೋನ್ ನಲ್ಲಿ ವಿತರಿಸುವ ಬಗ್ಗೆಯೂ ಪರಿಶೀಲಿಸುವಂತೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ ಅವರು, ಗಡಿಭಾಗದಲ್ಲಿ ಸಿಲುಕಿರುವ ಪ್ರಯಾಣಿಕರು ಮತ್ತು ವಲಸೆ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.

ಕೊರೊನಾ ನಿಯಂತ್ರಣ ಕ್ರಮಗಳ ಬಗ್ಗೆ ಪರಿಶೀಲನೆ
ಶಾಸಕ ಅಭಯ್ ಪಾಟೀಲ ಮಾತನಾಡಿ, ಜಿಲ್ಲೆಯ ಎಲ್ಲ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಹೋಮಿಯೋಪಥಿ ಮಾತ್ರೆ ನೀಡುವ ಬಗ್ಗೆ ಪರಿಶೀಲಿಸಬೇಕು ಎಂದು ಸಲಹೆ ನೀಡಿದರು. ಮಹಾನಗರ ಪಾಲಿಕೆಯ ಪರಿಷ್ಕೃತ ತೆರಿಗೆ ನೀಡುವುದಕ್ಕೆ ನಾಗರಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ, ಈ ಬಗ್ಗೆ ಪರಿಶೀಲಿಸುವಂತೆ ತಿಳಿಸಿದರು.
ರೈಲ್ವೆ ಇಲಾಖೆಯ ರಾಜ್ಯ ಸಚಿವರಾದ ಸುರೇಶ್ ಅಂಗಡಿ, ವಿಧಾನ ಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಅವರು ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಚರ್ಚಿಸಿದರು.












Click it and Unblock the Notifications