2018ರಲ್ಲಿ 150 ಸೀಟು ಗೆಲ್ಲುವ ತಂತ್ರ ಸಿದ್ಧ : ಯಡಿಯೂರಪ್ಪ
ಬೆಳಗಾವಿ, ಅಕ್ಟೋಬರ್ 06: ಕುಂದಾನಗರಿ ಬೆಳಗಾವಿಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಮುಕ್ತಾಯವಾಗಿದೆ. ಈ ಸಭೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಬಿಜೆಪಿ ತೆಗೆದುಕೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ 150 ಸೀಟು ಗೆಲ್ಲಲು ತಂತ್ರಗಾರಿಕೆ ರೂಪಿಸುವುದಾಗಿ ಘೋಷಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಮುಖವಾಗಿ ನಾಲ್ಕು ನಿರ್ಣಯಗಳನ್ನು ಕೈಗೊಳ್ಳಲಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧದ ಹೋರಾಟವನ್ನು ಇನ್ನಷ್ಟು ಬಲಗೊಳಿಸಲು ನಿರ್ಧರಿಸಲಾಗಿದೆ.
ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯಲ್ಲಿ ಮಂಡಿಸಿದ ನಿರ್ಣಯಗಳಿಗೆ ಪದಾಧಿಕಾರಿಗಳು ಒಮ್ಮತದ ಒಪ್ಪಿಗೆ ಸೂಚಿಸಲಿದ್ದಾರೆ.
* ಮುಖ್ಯವಾಗಿ ಕಾವೇರಿ ನದಿ ನೀರು ಹಂಚಿಕೆ ವಿವಾದವನ್ನು ಮಾತುಕತೆ ಮೂಲಕವೇ ಇತ್ಯರ್ಥಪಡಿಸುವುದು,
* ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಹೋರಾಟ, ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವುದು
* ಮುಂದಿನ ವಿಧಾನಸಭೆ ಚುನಾವಣೆಗೆ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರುವ ನಿರ್ಣಯಗಳನ್ನು ಪಕ್ಷ ಕೈಗೊಳ್ಳಲಿದೆ.

ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ, ಅನಂತ್ಕುಮಾರ್, ರಮೇಶ್ ಜಿಗಜಿಣಗಿ, ನಿರ್ಮಲ ಸೀತಾರಾಮನ್, ರಾಜ್ಯ ಉಸ್ತುವಾರಿ ಮುರಳೀಧರರಾವ್, ಮುಖಂಡರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಸೇರಿದಂತೆ ಪದಾಧಿಕಾರಿಗಳೆಲ್ಲರೂ ನಿರ್ಣಯಕ್ಕೆ ಸೂಚಿಸಿದ್ದಾರೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ಮುಖಂಡರೂ ತಮ್ಮ ತಮ್ಮ ವೈಯಕ್ತಿಕ ಹಿತಾಸಕ್ತಿ ಮರೆತು ಪಕ್ಷ ಸಂಘಟನೆ ಹಾಗೂ ಬಲವರ್ಧನೆಗೆ ಗಮನ ಹರಿಸಬೇಕೆಂಬ ಮಾತುಗಳು ಸಭೆಯಲ್ಲಿ ವ್ಯಕ್ತವಾಗಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವೈಫಲ್ಯಗಳ ವಿರುದ್ಧವೂ ಹೋಬಳಿ ಮಟ್ಟದಿಂದ ಜಿಲ್ಲಾಮಟ್ಟದಲ್ಲಿ ಹೋರಾಟ ನಡೆಸುವುದು ಹಾಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ಮಾಡಿರುವ ಸಾಧನೆಯನ್ನು ಮನೆ ಮನೆಗೆ ತಲುಪಿಸಬೇಕೆಂದು ಪದಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಕರಾವಳಿ ತೀರ ಪ್ರದೇಶ, ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ, ಮುಂಬೈ ಕರ್ನಾಟಕದಲ್ಲಿ ಪಕ್ಷವನ್ನು ಇನ್ನಷ್ಟು ಸದೃಢಗೊಳಿಸಬೇಕು. ಇದೇ ರೀತಿ ಬೆಂಗಳೂರು ಸೇರಿದಂತೆ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು.
ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಯಾರ ಹಂಗೂ ಇಲ್ಲದೆ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತರುವ ಹೆಗ್ಗುರಿಯೊಂದಿಗೆ ಬೆಳಗಾವಿ ಕಾರ್ಯಕಾರಿಣಿ ಮುಕ್ತಾಯ ಕಂಡಿದೆ.
ಇದೇ ವೇಳೆ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಂಘಟನೆ ಕುರಿತಂತೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಕೇಂದ್ರ ವರಿಷ್ಠರು ತೀರ್ಮಾನಿಸಲಿದ್ದಾರೆ. ಈ ಬಗ್ಗೆ ರಾಜ್ಯ ನಾಯಕರು ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ. ಕೇವಲ ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ಅಧಿಕಾರಕ್ಕೆ ತರುವತ್ತ ಗಮನ ಹರಿಸಿ ಎಂದು ಸೂಚಿಸಿದ್ದಾರೆ.












Click it and Unblock the Notifications