ಕುಡಚಿಯಲ್ಲಿ ದೆಹಲಿಯಿಂದ ಬಂದಿದ್ದ ನಾಲ್ವರಲ್ಲಿ ಕೊರೊನಾ ಸೋಂಕು
ಬೆಳಗಾವಿ, ಏಪ್ರಿಲ್ 06: ಬೆಳಗಾವಿ ಜಿಲ್ಲೆಯಲ್ಲಿ ಇಂದು ಮತ್ತೆ ಹೊಸದಾಗಿ ನಾಲ್ಕು ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಕೊರೊನಾ ಏಳು ಮಂದಿ ಕೊರೊನಾ ಸೋಂಕಿತರಾಗಿದ್ದಾರೆ.
ಕೊರೊನಾ ಪಾಸಿಟಿವ್ ಬಂದಿರುವ ಎಲ್ಲರೂ ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗವಹಿಸಿದ್ದವರು ಎಂಬುದು ತಿಳಿದುಬಂದಿದೆ. ಇವರೆಲ್ಲರಿಗೂ ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಸದಾಗಿ ಕೊರೊನಾ ಸೋಂಕು ಪತ್ತೆಯಾದ ನಾಲ್ವರೂ ಬೆಳಗಾವಿ ಜಿಲ್ಲೆಯ ರಾಯಬಾಗದ ಕುಡಚಿಯವರು. ಇವರು ಮಾರ್ಚ್ 13 ರಿಂದ 18ರವರೆಗೆ ದೆಹಲಿಯಲ್ಲಿ ನಡೆದ ಧರ್ಮ ಸಭೆಯಲ್ಲಿ ಭಾಗಿಯಾಗಿದ್ದರು.
ಗುಜರಾತ್ನಿಂದ ಖಾನಾಪುರಕ್ಕೆ ಬಂದಿದ್ದ 11 ತಬ್ಲೀಘೀಗಳು ನಾಪತ್ತೆ
ಹೀಗೆ ಕೊರೊನಾ ಸೋಂಕಿತರು ಹೆಚ್ಚಾಗಿರುವುದರಿಂದ ಆತಂಕವೂ ಹೆಚ್ಚಾಗಿದೆ. ಗೋವಾ ಮತ್ತು ಮಹಾರಾಷ್ಟ್ರ ಗಡಿಯಲ್ಲಿ ತಪಾಸಣೆ ಕಾರ್ಯ ಬಿರುಸಾಗಿದೆ. ಸೋಂಕಿತರ ಟ್ರಾವೆಲ್ ಹಿಸ್ಟರಿಯನ್ನೂ ಜಿಲ್ಲಾಡಳಿತ ಕಲೆ ಹಾಕುತ್ತಿದೆ. ಕುಡಚಿ ಪಟ್ಟಣದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕುಡಚಿ ಪಟ್ಟಣ 3 ಕಿ.ಮೀ ನಿಷೇಧಿತ ಪ್ರದೇಶವೆಂದು ಬೆಳಗಾವಿ ಡಿಸಿ ಎಸ್.ಬಿ ಬೊಬ್ಬನಹಳ್ಳಿ ಆದೇಶ ಹೊರಡಿಸಿದ್ದಾರೆ.
ಸುಮಾರು 40 ಸಾವಿರ ಜನಸಂಖ್ಯೆ ಕುಡಚಿಯಲ್ಲಿದ್ದಾರೆ. ಹೀಗಾಗಿ ಇಲ್ಲಿ ಯಾರೂ ಮನೆ ಬಿಟ್ಟು ಹೊರಗೆ ಹೋಗದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಆರೋಗ್ಯ ಇಲಾಖೆಯ ಎಲ್ಲ ಸಲಹೆ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ ನೀಡಲಾಗಿದೆ. ಸದ್ಯಕ್ಕೆ ಈ ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮಾಹಿತಿಯನ್ನು ಪೊಲೀಸರು ಹಾಗೂ ಜಿಲ್ಲಾಡಳಿತ ಕಲೆ ಹಾಕುತ್ತಿದೆ.