'ಸುವರ್ಣಸೌಧ ನಿರ್ಮಾಣದ ಉದ್ದೇಶ ಈಡೇರುತ್ತಿಲ್ಲ'
ಬೆಳಗಾವಿ, ನವೆಂಬರ್ 15 : 'ನಮ್ಮ ಪಕ್ಷ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಸಾಲ ಮನ್ನಾ ಮಾಡುತ್ತೇವೆ. ಮುಂದೆದೂ ರೈತರು ಸಾಲಗಾರರಾಗದಂತೆ ಯೋಜನೆ ರೂಪಿಸುತ್ತೇವೆ. ಹೀಗಾಗಿ ರೈತರು ಆತ್ಮಹತ್ಯೆಯನ್ನು ಮುಂದೂಡಿ' ಎಂದು ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದರು.
ಬೆಳಗಾವಿಯಲ್ಲಿ ಮಂಗಳವಾರ ನಡೆದ ಪಕ್ಷದ 'ಕುಮಾರಪರ್ವ ಯಾತ್ರೆ' ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, 'ಸುವರ್ಣಸೌಧ ನಿರ್ಮಾಣ ಮಾಡಿದ ಉದ್ದೇಶ ಈಡೇರುತ್ತಿಲ್ಲ. ಅದಕ್ಕಾಗಿ ಈ ಭಾಗದ ಜನರ ಕ್ಷಮೆ ಕೋರುತ್ತೇನೆ' ಎಂದರು.
'ಉತ್ತರ ಕರ್ನಾಟಕ ಭಾಗದ ಜನರಿಗಾಗಿ ಸುವರ್ಣ ವಿಧಾನಸೌಧ ನಿರ್ಮಾಣ ಮಾಡಲಾಯಿತು. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ವಾರದಲ್ಲಿ ಎರಡು ದಿನ ಸುವರ್ಣಸೌಧದಿಂದಲೇ ಆಡಳಿತ ನಡೆಸುತ್ತೇವೆ' ಎಂದು ಭರವಸೆ ನೀಡಿದರು.
ಚಿತ್ರಗಳು : ಕುಮಾರಸ್ವಾಮಿ ರಾಜ್ಯ ಪ್ರವಾಸ
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ಪಿಜಿಆರ್ ಸಿಂಧ್ಯಾ, ಬಸವರಾಜ ಹೊರಟ್ಟಿ ಸೇರಿದಂತೆ ಹಲವು ನಾಯಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು...

ಹೊಸ ಪದ್ಧತಿ ಜಾರಿ
'ಕಡಿಮೆ ನೀರಿನಲ್ಲಿ ಕೃಷಿ ಮಾಡುವ ಪದ್ಧತಿಯನ್ನು ಇಸ್ರೇಲ್ನಲ್ಲಿ ನೋಡಿ ಬಂದಿದ್ದೇನೆ. ಆ ತಂತ್ರಜ್ಞಾನವನ್ನು ಇಲ್ಲಿ ಜಾರಿಗೆ ತರುತ್ತೇವೆ. ಯಾವ ಪ್ರದೇಶದಲ್ಲಿ ಯಾವ ಬೆಳೆ ಬೆಳೆಯಬೇಕು ಎಂದು ನೀತಿ ರೂಪಿಸುತ್ತೇವೆ' ಎಂದು ಕುಮಾರಸ್ವಾಮಿ ಹೇಳಿದರು.

ನೇರವಾಗಿ ಬ್ಯಾಂಕ್ ಖಾತೆಗೆ ಸಹಾಯಧನ
'ಗರ್ಭಿಣಿ ಮಹಿಳೆಯರಿಗೆ ಆಹಾರ ನೀಡುವ ಮಾತೃಪೂರ್ಣ ಯೋಜನೆ ಬದಲಾಯಿಸಿ ಅವರ ಬ್ಯಾಂಕ್ ಖಾತೆಗೆ ನೇರವಾಗಿ ನಗದು ವರ್ಗಾವಣೆ ಮಾಡುವ ಯೋಜನೆ ಜಾರಿಗೆ ತರಲಾಗುತ್ತದೆ. ಗರ್ಭಿಣಿ ಮಹಿಳೆಯರಿಗೆ 6 ತಿಂಗಳ ನಂತರ 6 ಸಾವಿರ ರೂ. ಸಹಾಯಧನ ನೀಡಲಾಗುತ್ತದೆ' ಎಂದು ಕುಮಾರಸ್ವಾಮಿ ಹೇಳಿದರು.

ಸಿದ್ದರಾಮಯ್ಯ ಸರ್ಕಾರ ಯಾರಿಗೆ ರಕ್ಷಣೆ ನೀಡುತ್ತಿದೆ?
'ಸಿದ್ದರಾಮಯ್ಯ ಸರ್ಕಾರ ಇತ್ತೀಚಿನ ದಿನಗಳಲ್ಲಿ ಆರೂವರೆ ಕೋಟಿ ಜನರಿಗೆ ರಕ್ಷಣೆ ನೀಡುವ ಕೆಲಸ ಮಾಡುತ್ತಿದ್ದೇನೆಂದು ಹೇಳಿದ್ದಾರೆ. ಆದರೆ, ಪ್ರಾಮಾಣಿಕ ಅಧಿಕಾರಿ ಕಲ್ಲಪ್ಪ ಹಂಡಿಭಾಗ್ ಅವರಿಗೆ ಯಾಕೆ ರಕ್ಷಣೆ ನೀಡಲಿಲ್ಲ? ಎಂದು ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಸಂಪೂರ್ಣ ಸಾಲ ಮನ್ನಾ
ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ಬಂದ 24ಗಂಟೆಯೊಳಗೆ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ಗಳ ಸಂಪೂರ್ಣ ಸಾಲಮನ್ನಾ ಮಾಡುವುದಾಗಿ ನಮ್ಮ ಹೆಚ್ಡಿಕೆ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತ ಸಮಾವೇಶದಲ್ಲಿ ಘೋಷಿಸಿದ್ದಾರೆ. ಈ ಕುರಿತ ವಿಡಿಯೋ ಇಲ್ಲಿದೆ.











Click it and Unblock the Notifications