'ಎರಡೂ ರಾಷ್ಟ್ರೀಯ ಪಕ್ಷಗಳು ರೈತರಿಗೆ ಟೋಪಿ ಹಾಕುತ್ತಿವೆ'
ಬೆಳಗಾವಿ, ನವೆಂಬರ್ 23 : ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬೆಳಗಾವಿ ನಗರದಲ್ಲಿ ಪಕ್ಷದ ನೂತನ ಕಚೇರಿಯನ್ನು ಉದ್ಘಾಟಿಸಿದರು.
ಗುರುವಾರ ಬೆಳಗಾವಿಯ ಮಹಾಂತೇಶ ನಗರದಲ್ಲಿ ಕುಮಾರಸ್ವಾಮಿ ಜಿಲ್ಲಾ ಜೆಡಿಎಸ್ ಕಚೇರಿಯನ್ನು ಉದ್ಘಾಟಿಸಿದರು. ನಂತರ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಹಾಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.

ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ಅವರು, 'ಬೆಳಗಾವಿ ನಗರದಲ್ಲಿ ಪಕ್ಷದ ಕಚೇರಿ ಉದ್ಘಾಟನೆ ಮಾಡಿದ್ದೇವೆ. ರೈತರಿಗೆ ಸಂಕಷ್ಟ ಇದೆ. ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ' ಎಂದು ಆರೋಪಿಸಿದರು.
'ಕೇಂದ್ರ ಸರ್ಕಾರದ ಫಸಲ ಭೀಮಾ ಯೋಜನೆಯಲ್ಲಿ ರೈತರಿಗೆ ವಿಮೆ ಹಣ ಕೊಡದೆ ಟೋಪಿ ಹಾಕುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ರೈತರಿಗೆ ಟೋಪಿ ಹಾಕುವೆ ಕೆಲಸ ಮಾಡುತ್ತಿವೆ' ಎಂದು ದೂರಿದರು.

2018ರ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಬೇಕು ಎಂದು ಜೆಡಿಎಸ್ ತಂತ್ರ ರೂಪಿಸುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಲು ಕುಮಾರಸ್ವಾಮಿ ಹುಬ್ಬಳ್ಳಿಯಲ್ಲಿ ಮನೆ ಮಾಡಿದ್ದಾರೆ.
ಬೆಳಗಾವಿಯಲ್ಲಿ ನವೆಂಬರ್ 15ರಂದು ಕುಮಾರ ಪರ್ವ ಸಮಾವೇಶ ನಡೆಸಿ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪ್ರಚಾರ ನಡೆಸಿದ್ದರು. ಈಗ ಪಕ್ಷದ ಜಿಲ್ಲಾ ಕಚೇರಿಯನ್ನು ಉದ್ಘಾಟನೆ ಮಾಡಿದ್ದಾರೆ.












Click it and Unblock the Notifications