ಬೆಳಗಾವಿ ಜಿಲ್ಲೆಯಾದ್ಯಂತ ವರುಣನ ಅಬ್ಬರ: ಕಟಾವಿಗೆ ಬಂದಿದ್ದ ಕಬ್ಬು ನೆಲಸಮ
ಬೆಳಗಾವಿ, ಅಕ್ಟೋಬರ್ 14: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಕಳೆದ ಎರಡ್ಮೂರು ದಿನಗಳಿಂದ ಬೆಳಗಾವಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿದೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ, ಸವದತ್ತಿ, ಬೈಲಹೊಂಗಲ, ಚಿಕ್ಕೋಡಿ, ಅಥಣಿಯಲ್ಲಿ ಭಾರಿ ಮಳೆಯಾಗಿದ್ದು, ಅಧಿಕ ಮಳೆಯಿಂದ ಕಟಾವಿಗೆ ಬಂದಿದ್ದ ಕಬ್ಬು ನೆಲಕ್ಕೆ ಉರಳಿದ್ದು, ಬೆಳೆಗಾರರ ನಿರಾಸೆಗೆ ಕಾರಣವಾಗಿದೆ. ಇನ್ನೊಂದೆಡೆ ಸೋಯಾಬಿನ್, ಹತ್ತಿ, ಮೆಕ್ಕೆಜೋಳ ಬೆಳೆಯೂ ಮಳೆಯಿಂದ ತುಸು ಹಾನಿಯಾಗಿವೆ. ವಾಯುಭಾರ ಕುಸಿತವು ಜಿಲ್ಲೆಯ ರೈತರ ನೆಮ್ಮದಿ ಕಸಿದುಕೊಂಡಿದೆ.
ಉತ್ತರ ಕರ್ನಾಟಕಕ್ಕೆ ರೆಡ್ ಅಲರ್ಟ್: ಕರಾವಳಿ, ಮಲೆನಾಡಲ್ಲೂ ಮಳೆ
ಕುಂದಾನಗರಿ ಬೆಳಗಾವಿಯಲ್ಲೂ ಮಳೆ ಅಬ್ಬರಿಸುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೂ, ನಗರದಲ್ಲಿ ಮಾತ್ರ ಮೋಡಕವಿದ ವಾತಾವರಣ ಇತ್ತು. ಇಂದು ಬೆಳಗ್ಗೆ 11 ರಿಂದ ಭಾರಿ ಮಳೆಯಾಗುತ್ತಿದೆ.
ಭಾರಿ ಮಳೆಯಿಂದ ಬೆಳಗಾವಿ ನಗರದಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದ ತೆಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ಜನಜೀವನ ಮತ್ತೇ ಸಂಕಷ್ಟಕ್ಕೆ ದೂಡಿದೆ. ಇಂದು ಸುರಿದ ಮಳೆಯಿಂದ ಯಾವುದೇ ಆಸ್ತಿ ಹಾಗೂ ಪ್ರಾಣಹಾನಿ ಸಂಭವಿಸಿಲ್ಲ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಉತ್ತರ ಕರ್ನಾಟಕದ ಬಳ್ಳಾರಿ, ರಾಯಚೂರು, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಬೆಳೆದ ಬೆಳೆಗಳು ಸಂಪೂರ್ಣ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಮಹಾರಾಷ್ಟದ ಕೊಯ್ನಾ ಡ್ಯಾಂನಿಂದ ಕೃಷ್ಣಾ ನದಿಗೆ 12 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಕಾರಣ ರಾಜ್ಯದಲ್ಲಿ ಇನ್ನೂ 3 ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆ, ನಾಡಿದ್ದು ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಿದೆ.
ಪ್ರಸ್ತುತ ಮುಂಗಾರು ಅವಧಿಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಒಟ್ಟಾರೆ ವಾಡಿಕೆಗಿಂತ ಶೇ.27ರಷ್ಟು ಹೆಚ್ಚು ಮಳೆಯಾಗಿರುವ ಪರಿಣಾಮ ಎಲ್ಲಾ ಭಾಗಗಳಲ್ಲಿ ವಾತಾವರಣ ತುಸು ಹೆಚ್ಚೇ ತಂಪಾಗಿದೆ.