ಬೆಳಗಾವಿ ಜಿಲ್ಲೆಯಾದ್ಯಂತ ಮುಂದುವರೆದ ಮಳೆ ಅಬ್ಬರ, ಜನಜೀವನ ಅಸ್ತವ್ಯಸ್ತ
ಬೆಳಗಾವಿ, ಆಗಸ್ಟ್ 17: ನೆರೆಯ ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ಭಾರಿ ಮಳೆಗೆ ಹಲವು ರಸ್ತೆಗಳು ಸಂಪರ್ಕ ಕಳೆದುಕೊಂಡಿವೆ.
ಬೆಳಗಾವಿ ತಾಲೂಕಿನ ಮಂಡೋಳಿ-ಸಾವಗಾಂವ ಗ್ರಾಮದ ಮಧ್ಯೆ ನಿರ್ಮಿಸಿದ್ದ ಸೇತುವೆ ಮುಳುಗಡೆಯಾಗಿದ್ದು, ಭಾರಿ ಪ್ರಮಾಣದಲ್ಲಿ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ, ನೀರಿನ ರಭಸಕ್ಕೆ ರಸ್ತೆ ಕೊಚ್ಚಿಕೊಂಡು ಹೋಗಿದೆ.
ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಸಮರ್ಪಕ ಒಳಚರಂಡಿ ವ್ಯವಸ್ಥೆ ಕಲ್ಪಿಸದ ಕಾರಣ ಮನೆಗಳಿಗೆ ನೀರು ನುಗ್ಗಿದೆ. ತಾಲೂಕು ಆಡಳಿತ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ
ನವಿಲು ತೀರ್ಥ ಜಲಾಶಯದಿಂದ 25 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೊಂಡ ಹಿನ್ನೆಲೆ, ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ರಾಮದುರ್ಗ ತಾಲೂಕಿನ ಸುನ್ನಾಳ ಗ್ರಾಮದ ಸರ್ಕಾರಿ ಶಾಲೆಗೆ ನದಿ ನೀರು ನುಗ್ಗಿದೆ. ಗ್ರಾಮದ ಇಪ್ಪತ್ತಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿವೆ.
ಬೆಳಗಾವಿ ಜಿಲ್ಲೆಯ ಗೋಕಾಕ್ಗೆ ಮತ್ತೆ ಪ್ರವಾಹದ ಭೀತಿ ಎದುರಾಗಿದ್ದು, ಹಿಡಕಲ್ ಜಲಾಶಯದಿಂದ 40 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆಯಾಗಿದೆ. ಹೀಗಾಗಿ ಗೋಕಾಕ್ ನಗರದ ಹೊರವಲಯದಲ್ಲಿನ ದನದ ಪೇಟೆಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ನೀರಿನ ಪ್ರಮಾಣ ಹೆಚ್ಚಳಗೊಂಡಿದ್ದರಿಂದ ಗೋಕಾಕ್ ಜನರಲ್ಲಿ ಆತಂಕ ಹೆಚ್ಚಾಗಿದೆ.

ಸತತವಾಗಿ ಸುರಿಯುತ್ತಿರುವ ಮಳೆ
ಜಿಲ್ಲೆಯ ಖಾನಾಪೂರ ತಾಲೂಕಿನ ದಟ್ಟ ಅರಣ್ಯ ಪ್ರದೇಶದಲ್ಲಿ ಹಾಗೂ ನೆರೆಯ ಮಹಾರಾಷ್ಟ್ರದ ಗಡಿಯಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯ ನವಿಲು ತೀರ್ಥ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿರುವುದರಿಂದ ರಾಮದುರ್ಗ ತಾಲೂಕಿನ ಸುನ್ನಾಳ ಗ್ರಾಮಕ್ಕೆ ಮಲಪ್ರಭಾ ನದಿ ನೀರು ನುಗ್ಗಿದೆ. ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಘಟಪ್ರಭಾದ ಹಿಡಕಲ್ ಜಲಾಶಯ ಭರ್ತಿ
ಭಾರೀ ಮಳೆಯಾಗುತ್ತಿರುವ ಕಾರಣ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಲಕ್ಷ ಕ್ಯೂಸೆಕ್ಸ್ ಗೂ ಹೆಚ್ಚಿನ ನೀರು ಹರಿದು ಬರುತ್ತಿದೆ. ಅಷ್ಟೇ ಅಲ್ಲದೇ ಜಿಲ್ಲೆಯ ಘಟಪ್ರಭಾದ ಹಿಡಕಲ್ ಜಲಾಶಯ ಮತ್ತು ಮಲಪ್ರಭಾದ ನವಿಲು ತೀರ್ಥ ಜಲಾಶಯ ತುಂಬಿದ ಪರಿಣಾಮ ಹೆಚ್ಚಿನ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ.

ಸುರಕ್ಷಿತ ಸ್ಥಳಕ್ಕೆ ತೆರಳಬೇಕೆಂದು ಸಚಿವ ರಮೇಶ್ ಜಾರಕಿಹೊಳಿ ಎಚ್ಚರಿಕೆ
ಸದ್ಯ ಜಲಾಶಯಗಳ ಒಳಹರಿವು ಗಣನೀಯವಾಗಿ ಹೆಚ್ಚುತ್ತಿರುವುದರಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇದೆ. ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಹಾಗಾಗಿ ನದಿ ತೀರದಲ್ಲಿನ ರೈತರು ಹಾಗೂ ಗ್ರಾಮಸ್ಥರು, ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications