"ಹುಬ್ಬಳ್ಳಿ ಮಾದರಿಯಲ್ಲಿ ಬೆಳಗಾವಿಯಲ್ಲೂ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ"
ಬೆಳಗಾವಿ, ಆಗಸ್ಟ್ 15: ಬೆಳಗಾವಿ ಮಹಾನಗರದಲ್ಲಿ ಶೀಘ್ರದಲ್ಲಿಯೇ 100 ಎಕರೆ ಪ್ರದೇಶದಲ್ಲಿ ಹುಬ್ಬಳ್ಳಿ ಮಾದರಿಯ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಅನ್ನು ನಿರ್ಮಾಣ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ.
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಂದಿನ ವರ್ಷ ಬೆಳಗಾವಿ ಜಿಲ್ಲಾ ಕ್ರೀಡಾಂಗಣದ ಲೀಸ್ ಅವಧಿ ಮುಗಿಯುತ್ತದೆ. ಹುಬ್ಬಳ್ಳಿ ಮಾದರಿಯಲ್ಲಿ ಬೆಳಗಾವಿಯಲ್ಲೂ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣ ಮಾಡುತ್ತೇವೆ ಎಂದರು.
ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ದಾಂಧಲೆ ಕುರಿತು ಮಾತನಾಡಿ, ಅದು ಕಾಂಗ್ರೆಸ್ಸಿನ ದಾಂಧಲೆ. ಅದಕ್ಕೂ ಬಿಜೆಪಿಗೂ ಸಂಬಂಧವಿಲ್ಲ. ಈ ದಾಂಧಲೆಯಲ್ಲಿ ಭಾಗಿಯಾದ ಸಂಘಟನೆಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳುವ ಕುರಿತು ಮುಂದಿನ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ತೀರ್ಮಾನ ಕೈಗೊಳ್ಳುತ್ತೇವೆ. ಗೃಹ ಸಚಿವ ಬೊಮ್ಮಾಯಿ ಅವರು ಬೆಂಗಳೂರಿನ ಗಲಭೆಯನ್ನು ಸಮರ್ಥವಾಗಿ ನಿಭಾಯಿಸಿದ್ದಾರೆ ಎಂದು ಹೇಳಿದರು.
ಕೃಷ್ಣಾ ನದಿ ಪ್ರವಾಹ ಚರ್ಚೆಗೆ ಮಹಾರಾಷ್ಟ್ರಕ್ಕೆ ತೆರಳಿದ ರಾಜ್ಯ ನಿಯೋಗ
ಮಹಾರಾಷ್ಟ್ರದ ಜೊತೆ ನಿರಂತರವಾಗಿ ಸಮನ್ವಯತೆ ಸಾಧಿಸಿದ ಪರಿಣಾಮ ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ ಪ್ರವಾಹದ ಪರಿಸ್ಥಿತಿ ಎದುರಾಗಿಲ್ಲ. ಯಾವುದೇ ರೀತಿಯ ಹಾನಿ ಆಗಿಲ್ಲ. ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ ಎಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆಯೋ ಅಷ್ಟೇ ಪ್ರಮಾಣದಲ್ಲಿ ಆಲಮಟ್ಟಿ ಜಲಾಶಯದಿಂದ ನೀರು ಹರಿದು ಬರುತ್ತಿದೆ. ಹೀಗಾಗಿ ಯಾವುದೇ ಸಮಸ್ಯೆ ಎದುರಾಗಿಲ್ಲ ಎಂದು ರಮೇಶ್ ಜಾರಕಿಹೊಳಿ ಮಾಹಿತಿ ನೀಡಿದರು.