ರಾಜೀನಾಮೆ ಬಳಿಕ ಸತೀಶ್ ಜಾರಕಿಹೊಳಿ ಹೇಳಿದ್ದೇನು?
ಬೆಳಗಾವಿ, ಜ.28 : 'ಇದು ಖಾತೆ ಕ್ಯಾತೆಯೂ ಅಲ್ಲ, ಬಂಡಾಯವೂ ಅಲ್ಲ. ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಸಲುವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ, ಇದನ್ನು ದೊಡ್ಡ ವಿವಾದವಾಗಿಸುವುದು ಬೇಡ ಎಂದು' ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಅಬಕಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ ಅವರು, 'ಇದು ಖಾತೆ ಕ್ಯಾತೆಯೂ ಅಲ್ಲ, ಬಂಡಾಯವೂ ಅಲ್ಲ, ಸಮಾಜ ಸೇವೆ ಮಾಡಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ' ಎಂದು ಸ್ಪಷ್ಟಪಡಿಸಿದರು. [ಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆ]

ಮಂಗಳವಾರ ಬೆಳಗ್ಗೆಯೇ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಫ್ಯಾಕ್ಸ್ ಮೂಲಕ ಕಳಿಸಿದ್ದೇನೆ. ಆದಷ್ಟು ಬೇಗ ಅಂಗೀಕಾರ ಮಾಡುವಂತೆಯೂ ಮನವಿ ಮಾಡಿದ್ದೇನೆ ಎಂದು ಜಾರಕಿಹೊಳಿ ಹೇಳಿದರು. ರಾಜೀನಾಮೆ ವಿಷಯವನ್ನು ವಿವಾದವಾಗಿ ಮಾಡುವುದು ಬೇಡ ಎಂದು ಅವರು ಮನವಿ ಮಾಡಿದರು. [ಅಬಕಾರಿ ಮಂತ್ರಿ ಖಾತೆ, ಸತೀಶ ಜಾರಕಿಹೊಳಿ ಕ್ಯಾತೆ]
'ಬುದ್ಧ, ಬಸವವಣ್ಣ, ಅಂಬೇಡ್ಕರ್ ತತ್ವದಡಿ ಬಹುಜನ ಸಮಾಜ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕೆಂದು ನಿರ್ಧರಿಸಿದ್ದೇನೆ. ಸಚಿವನಾಗಿದ್ದರೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಸಮಯ ಸಿಗುವುದಿಲ್ಲ ಆದ್ದರಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ' ಎಂದು ಜಾರಕಿಹೊಳಿ ಹೇಳಿದರು.
'ಸಚಿವನಾಗಿ ಕೆಲಸ ಮಾಡಲು ಅವಕಾಶ ನೀಡಿದ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರಿಗೆ ಸಲ್ಲಿಸಿದ್ದೇನೆ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲು ಅವಕಾಶ ನೀಡುವಂತೆ ಡಾ.ಜಿ.ಪರಮೇಶ್ವರ ಅವರಿಗೆ ಪತ್ರ ಬರೆದಿದ್ದೇನೆ' ಎಂದು ತಿಳಿಸಿದರು.
ಮನವೊಲಿಕೆಗೆ ಯತ್ನ : ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಸತೀಶ್ ಜಾರಕಿಹೊಳಿ ಮನವೊಲಿಕೆಗೆ ಮುಂದಾಗಿದ್ದಾರೆ. ಮಂಗಳವಾರ ಜಾರಕಿಹೊಳಿ ಅವರರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಏನೇ ಬೇಸರವಿದ್ದರೂ ಕುಳಿತು ಮಾತನಾಡಿ ಪರಿಸಿಕೊಳ್ಳಿ, ರಾಜೀನಾಮೆ ಬೇಡ, ಬೆಂಗಳೂರಿಗೆ ಬಂದು ಭೇಟಿಯಾಗಿ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications