ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಐಸಿಯು ಘಟಕ : ರಮೇಶ್ ಕುಮಾರ್
ಬೆಳಗಾವಿ, ನವೆಂಬರ್ 21 ; ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಪಟ್ಟುಹಿಡಿರುವ ರಮೇಶ್ ಕುಮಾರ್ ಅವರು ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ಕೂ ಕೈಹಾಕಿದ್ದಾರೆ.
'ಡಿ.10ರಿಂದ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಉಚಿತ ಸ್ಕ್ಯಾನಿಂಗ್, ಡಯಾಲಿಸಿಸ್'
ಜನವರಿ ಹೊಸ ವರ್ಷದ 1ರೊಳಗೆ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ತೀರ್ವ ನಿಘಾ ಘಟಕ (ಐಸಿಯು) ತೆರೆಯುವುದಾಗಿ ಸಚಿವ ರಮೇಶ್ ಕುಮಾರ್ ಘೋಷಿಸಿದ್ದಾರೆ.
ಸೋಮವಾರ ನವೆಂಬರ್ 21 ರಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸುತ್ತಾ ಅವರು ಈ ವಿಷಯವನ್ನು ಹೇಳಿದರು.
ವೈದ್ಯಕೀಯ ಇಲಾಖೆ ಸಂಬಂಧಿಸಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು 'ರಾಜ್ಯದಲ್ಲಿ ತಜ್ಞ ವೈದ್ಯರ ಕೊರತೆ ಇರುವ ಹಿನ್ನೆಲೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾಪ ಸರಕಾರದ ಮುಂದಿಲ್ಲ' ಎಂದರು.
'ಈಗಾಗಲೇ 200ಕ್ಕೂ ಹೆಚ್ಚು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ತಜ್ಞರ ಕೊರತೆಯಿದೆ, ಕೆಪಿಎಸ್ಸಿ, ಗುತ್ತಿಗೆ, ಬಿಡ್, ಕಾಲ್ ಬೇಸಿಸ್ ಹೀಗೆ ಏನೇ ಸರ್ಕಸ್ ಮಾಡಿದರೂ ಸಮಸ್ಯೆ ಪೂರ್ಣ ಪ್ರಮಾಣದಲ್ಲಿ ಪರಿಹಾರವಾಗಿಲ್ಲ. ಜನರ ಖುಷಿಗೆ ನಾವು ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೆ ಏರಿಸುವುದಾಗಿ ಹೇಳುವುದಿಲ್ಲ' ಎಂದು ಸ್ಪಷ್ಟಪಡಿಸಿದರು.
ಸರ್ಕಾರ ನೀಡಿರುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದ ಸಚಿವರು '150ಕ್ಕಿಂತ ಹೆಚ್ಚು ಹೊರ ರೋಗಿಗಳಿರುವ ಆಸ್ಪತ್ರೆಗಳಿಗೆ ಇನ್ನೊಬ್ಬ ವೈದ್ಯರನ್ನು ಕೊಡಲಾಗುವುದು ಎಂದವರು, ರೋಗಿಗಳಿಗೆ ತುರ್ತು ಚಿಕಿತ್ಸೆ ಒದಗಿಸುವ ಹಿನ್ನೆಲೆಯಲ್ಲಿ ಸರಕಾರ ಈಗಾಗಲೇ 10-12 ಕಿ.ಮೀ.ಗೆ ಒಂದರಂತೆ ಆಂಬುಲೆನ್ಸ್ ಸೇವೆ ಒದಗಿಸಿದೆ' ಎಂದರು.