ಸರ್ಕಾರ ಉಳಿಸಿಕೊಳ್ಳುವುದು ಎರಡೂ ಪಕ್ಷಕ್ಕೆ ಅನಿವಾರ್ಯ: ಜಿಟಿಡಿ
ಬೆಳಗಾವಿ, ಜೂನ್ 29: ಬಿಜೆಪಿಗೆ ಅನುಕೂಲ ಮಾಡಿಕೊಡಬಾರದು ಎಂಬ ಸಲುವಾಗಿ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳೆರಡಕ್ಕೂ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಂಡು ಹೋಗುವುದು ಅನಿವಾರ್ಯವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಹೇಳಿದರು.
ದೇಶವನ್ನು ಕಾಂಗ್ರೆಸ್ ಮುಕ್ತ ಮಾಡಲು ಬಿಜೆಪಿ ಬಯಸಿದೆ. ಇದಕ್ಕೆ ಅವಕಾಶ ನೀಡಬಾರದೆಂಬ ಉದ್ದೇಶದಿಂದ ಕಾಂಗ್ರೆಸ್ನವರು ಸಮ್ಮಿಶ್ರ ಸರ್ಕಾರ ನಡೆಸಲು ಜೆಡಿಎಸ್ಗೆ ಬೆಂಬಲ ನೀಡಿದ್ದಾರೆ.
ಜಾತ್ಯತೀತ ಶಕ್ತಿಗಳು ಒಂದಾಗಬೇಕು ಹಾಗೂ ಕೋಮುವಾದಿಗಳಿಗೆ ಅಧಿಕಾರ ನೀಡಬಾರದು ಎಂದು ಪಕ್ಷದ ವರಿಷ್ಠ ದೇವೇಗೌಡ ಅವರು ಕಾಂಗ್ರೆಸ್ ಜತೆಗಿನ ಮೈತ್ರಿಗೆ ಒಪ್ಪಿದ್ದಾರೆ.

ದೇಶದಲ್ಲಿ ಕಾಂಗ್ರೆಸ್ ಉಳಿಯಬೇಕಿದೆ. ಅದು ಕರ್ನಾಟಕದಿಂದ ಮಾತ್ರ ಸಾಧ್ಯವಿದೆ. ಸರ್ಕಾರ ಬೀಳುವುದಕ್ಕೆ ಎರಡೂ ಪಕ್ಷಗಳ ನಾಯಕರು ಬಿಡುವುದಿಲ್ಲ. ಸರ್ಕಾರ ಸುಭದ್ರವಾಗಿರುತ್ತದೆ ಎಂದು ಜಿಟಿಡಿ ಹೇಳಿದರು.
ದೇವೇಗೌಡರು ಮತ್ತು ಸಿದ್ದರಾಮಯ್ಯ ಅವರ ನಡುವೆ ದ್ವೇಷವಿಲ್ಲ. ದ್ವೇಷ ಇದ್ದಿದ್ದರೆ ಸಮ್ಮಿಶ್ರ ಸರ್ಕಾರ ರಚನೆಯೇ ಆಗುತ್ತಿರಲಿಲ್ಲ. ದೇವೇಗೌಡ ಅವರು ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿದ್ದಾರೆ ಎಂಬುದು ಸತ್ಯವಲ್ಲ ಎಂದರು.
ಬಜೆಟ್ ಮಂಡನೆಗೆ ಸಿದ್ಧತೆ ನಡೆಸಲಾಗಿದೆ. ಸಿದ್ದರಾಮಯ್ಯ ಸರ್ಕಾರ ಹಿಂದೆ ಘೋಷಣೆ ಮಾಡಿದ್ದ ಮಹತ್ವದ ಯೋಜನೆಗಳನ್ನು ಮುಂದುವರಿಸುವ ಕುರಿತು ಸಮನ್ವಯ ಸಭೆಯಲ್ಲಿ ಚರ್ಚಿಸಲಾಗಿದೆ.
ಬಜೆಟ್ ಮಂಡನೆ ಮತ್ತು ರೈತರ ಸಾಲ ಮನ್ನಾಕ್ಕೆ ಸಿದ್ದರಾಮಯ್ಯ ತಕರಾರು ತೆಗೆದಿಲ್ಲ. ಸಚಿವ ಸ್ಥಾನ ಸಿಗದೆ ಇರುವವರು ಈ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಅಷ್ಟೇ ಎಂದು ಸ್ಪಷ್ಟೀಕರಣ ನೀಡಿದರು.
ನಾನು ಸಿದ್ದರಾಮಯ್ಯ ಅವರನ್ನು ಸೋಲಿಸಿಲ್ಲ. ಅವರು ನರೇಂದ್ರ ಮೋದಿ ಜತೆ ಯುದ್ಧ ಮಾಡಲು ಹೋಗಿ ಸೋತಿದ್ದಾರೆ ಎಂದು ಹೇಳಿದರು.
ಸರ್ಕಾರಿ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರು, ಪ್ರಾಧ್ಯಾಪಕರು, ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡಬೇಕು, ಏಳನೇ ವೇತನ ಆಯೋಗದ ಶಿಫಾರಸುಗಳ ಅನ್ವಯ ಸಂಬಳ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಕೋರಿರುವುದಾಗಿ ತಿಳಿಸಿದರು.












Click it and Unblock the Notifications