ಮಾಜಿ ಶಾಸಕ ಸಂಜಯ ಪಾಟೀಲ್ ಆ ಒಂದು ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಹೇಗಿತ್ತು ಗೊತ್ತಾ?
ಬೆಳಗಾವಿ, ಏಪ್ರಿಲ್, 14: ಲೋಕಸಭಾ ಚುನಾವಣೆ ಹಿನ್ನೆಲೆ ಇದೀದ ಎಲ್ಲಾ ಪಕ್ಷಗಳು ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರಚಾರದಲ್ಲಿ ಸಕ್ರಿಯರಾಗಿದ್ದಾರೆ. ಹಾಗೆಯೇ ಒಬ್ಬರ ಮೇಲೊಬ್ಬರು ಆರೋಪಗಳನ್ನು ಕೂಡ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದೀಗ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ ಪಾಟೀಲ್ ಅವರು ಸಚಿವೆ ಲಕ್ಷ್ಮಿ ಹೆಬ್ಬಳ್ಕರ್ ಬಗ್ಗೆ ಆಡಿದ ಆ ಒಂದೇ ಒಂದು ಮಾತು ಹಲವರ ಆಕ್ರೋಶಕ್ಕೆ ಕಾರಣವಾಗಿದೆ.
"ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಬಿಜೆಪಿಗೆ ಸಿಕ್ಕ ಬೆಂಬಲ ನೋಡಿದರೆ ಅಕ್ಕ ನಿದ್ದೆಗೆಡುತ್ತಾರೆ. ಅವರು ನಿದ್ದೆ ಮಾತ್ರೆ ತೆಗೆದುಕೊಳ್ಳಬೇಕು ಇಲ್ಲ ಒಂದು ಪೆಗ್ ಹೆಚ್ಚು ಕುಡಿಯಬೇಕು," ಎಂದು ಸಂಜಯ ಪಾಟೀಲ್ ಹೇಳಿದ್ದು, ಈ ಹೇಳಿಕೆ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಮಹಿಳೆಯರನ್ನು ನಾನು ಪ್ರತಿನಿಧಿಸುತ್ತೇನೆ. ನಾಲಿಗೆ ಮೇಲೆ ಹಿಡಿತ ಇರಬೇಕು, ವೇದಿಕೆ ಮೇಲೆ ಇದ್ದವರು ಏಕೆ ತಡೆಯಲಿಲ್ಲ? ಸಂಜಯ ಪಾಟೀಲ್ ಮೂಲಕ ಮಾತನಾಡಿಸಿದ್ದಾರಾ? ಎಂದು ಮಾಜಿ ಶಾಸಕ ಸಂಜಯ ಪಾಟೀಲ್ ಹೇಳಿಕೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನಗೆ ಅಲ್ಲ ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ ಇದು. ನಾನು ಲಿಂಗಾಯತ ಸಮಾಜದ ಹೆಣ್ಣು ಮಗಳು. ಲಿಂಗಾಯತ ಸಮಾಜಕ್ಕೆ ಮಾಡಿದ ಅವಮರ್ಯಾದೆ ಇದು. ಇಡೀ ರಾಜ್ಯದ ಮಹಿಳೆಯರಿಗೆ ಧಿಕ್ಕರಿಸಲು ಕರೆ ಕೊಡ್ತೀನಿ. ಮಹಿಳೆಯ ಆತ್ಮಗೌರವಕ್ಕೆ ಧಕ್ಕೆಯಾಗಿದೆ. ಮಹಿಳೆಯರ ಸಬಲೀಕರಣ ವಿರೋಧಿಗಳು ಬಿಜೆಪಿಯವರು. ಗ್ಯಾರಂಟಿ ಯೋಜನೆಯ ಬಗ್ಗೆಯೂ ವಿರೋಧ ಮಾಡುತ್ತಾರೆ ಎಂದು ಕಿಡಿಕಾರಿದರು.
ಇನ್ನು ಮಕ್ಕಳು ಹುಟ್ಟಿದರೂ ಗ್ಯಾರಂಟಿ ಕಾರಣ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಲೇವಡಿ ವಿಚಾರಕ್ಕೆ, ನಿಮ್ಮ ಥರ ನಾನು ಟಾಂಟ್ ಹೊಡಯಲ್ಲ. ಎಸಿ ರೂಂನಲ್ಲಿ ಕುಳತಿರುವ ನಿಮಗೆ 2,000 ರೂಪಾಯಿಯ ಅರಿವಿಲ್ಲ. ಕುಮಾರಸ್ವಾಮಿ ಅವರೂ ಹಿರಿಯರು. ಗೃಹಲಕ್ಷ್ಮಿಯ ಲಾಭ ಪಡೆಯುವ ಯಾವ ಹಳ್ಳಿಯ ಮಹಿಳೆ ದಾರಿ ತಪ್ಪಿದ್ದಾರೆ ಎಂದು ಸ್ಪಷ್ಟ ಪಡಿಸಿ ಎಂದು ವಾಗ್ದಾಳಿ ನಡೆಸಿದರು.
ಹಳ್ಳಿಯ ಹೆಣ್ಣು ಮಗಳ ಬಗ್ಗೆ ಯಾಕೆ ಇಷ್ಟು ಹಗರುವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಯಾವುದೇ ಸ್ವಾರ್ಥಕ್ಕಾಗಿ ಯೋಜನೆ ಜಾರಿ ಮಾಡಿಲ್ಲ. ಬಿಜೆಪಿಯ ಮನಸ್ಥಿತಿ ಬಗ್ಗೆ ಜನರಿಗೆ ಗೊತ್ತಾಗಿದೆ. ಬರೀ ಸುಳ್ಳು ಹೇಳುವುದು ಬಿಜೆಪಿಯ ಅಜೆಂಡಾವಾಗಿದೆ. ಸಮಾಜ ನನ್ನ ಜೊತೆಗೆ ಇದೆ, ಇಡೀ ಕಾಂಗ್ರೆಸ್ ಪಕ್ಷದ ನಾಯಕರು ನನ್ನ ಜೊತೆ ಇದ್ದಾರೆ. ಚಿಕ್ಕೋಡಿ, ಬೆಳಗಾವಿ ಲೋಕಸಭಾ ಗೆಲ್ಲುವುದು ನಮ್ಮ ಉದ್ದೇಶ ಆಗಿದೆ ಅಂತಾ ಹೇಳಿದರು.
ಲೋಕಸಭಾ ಚುನಾವಣೆ ಮುಗಿದ ಬಳಿಕ ಕೇಂದ್ರ, ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರಕ್ಕೆ ನಾನು ರಾಜ್ಯದಲ್ಲಿ 135 ಸ್ಥಾನದಲ್ಲಿ ಗೆದ್ದಿದ್ದೇವೆ. ಅವರು ಹಗಲು ಕನಸು ಕಾಣುತ್ತಿದ್ದಾರೆ. ನಾವೇನು ಸುಮ್ನೆ ಕುಳಿತುಕೊಳ್ಳಲ್ಲ ಎಂದರು.
2ಎ ಮೀಸಲಾತಿ ಕೊಡಿಸಿದರೆ ಒಂದು ಕೆಜಿ ಚಿನ್ನ ನೀಡುವುದಾಗಿ ನಿರಾಣಿ ಸವಾಲು ವಿಚಾರಕ್ಕೆ ಚುನಾವಣೆ ಮುಗಿದ ಬಳಿಕ ನಿರಾಣಿ ಅಣ್ಣನ ಬಗ್ಗೆ ಮಾತನಾಡುತ್ತೇನೆ. ಈ ಸಂಬಂಧ ಈಗಾಗಲೇ ನಮ್ಮ ಸಮಾಜ ಪ್ರತಿಕ್ರಿಯೆ ಕೊಟ್ಟಿದೆ. ನಾನು ಚುನಾವಣೆ ಮುಗಿದ ಬಳಿಕ ಮಾತನಾಡುತ್ತೇನೆ ಎಂದರು.












Click it and Unblock the Notifications