ವಿಶ್ವನಾಥ್ ಬಹಿರಂಗ ಹೇಳಿಕೆಗೆ ಜಗದೀಶ್ ಶೆಟ್ಟರ್ ಕಿವಿಮಾತು
ಬೆಳಗಾವಿ, ಡಿಸೆಂಬರ್ 02: ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗೆ ಸಚಿವ ಸ್ಥಾನ ನೀಡುವಂತಿಲ್ಲ ಎನ್ನುವ ಹೈಕೋರ್ಟ್ ಆದೇಶದ ಬೆನ್ನಲ್ಲೇ ಸರ್ಕಾರದ ವಿರುದ್ಧ ಎಚ್. ವಿಶ್ವನಾಥ್ ಗರಂ ಆಗಿದ್ದು, ಹೈಕೋರ್ಟ್ ತೀರ್ಪಿನ ವಿರುದ್ದ ಸುಪ್ರಿಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಉದ್ದೇಶಿಸಿದ್ದೇನೆ ಎಂದು ಹೇಳಿದ್ದಾರೆ. ಸರ್ಕಾರದ ನಡವಳಿಕೆ ಕುರಿತೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಜಗದೀಶ್ ಶೆಟ್ಟರ್, ನಾನು ವೈಯಕ್ತಿಕ ಅಭಿಪ್ರಾಯದ ಬಗ್ಗೆ ಚರ್ಚೆ ಮಾಡಲ್ಲ. ಆದರೆ ಬಹಿರಂಗವಾಗಿ ಹೇಳಿಕೆ ಕೊಡುವವರಿಗೆ ನಾನೊಂದು ಸಲಹೆ ನೀಡುತ್ತೇನೆ. ಏನೇ ಸಮಸ್ಯೆ ಇದ್ದರೂ ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿ. ನಾಲ್ಕು ಗೋಡೆಗಳ ಮಧ್ಯೆ ಇರುವ ವಿಚಾರವನ್ನು ಬಹಿರಂಗವಾಗಿ ಮಾತನಾಡಬೇಡಿ ಎಂದು ಹೇಳಿದ್ದಾರೆ.
ಕೆಲವು ವಿಷಯಗಳನ್ನು ಮೊದಲು ಪಕ್ಷದವರೊಂದಿಗೆ ಚರ್ಚೆ ಮಾಡಿ. ಬಹಿರಂಗವಾಗಿ ಯಾವುದೇ ಹೇಳಿಕೆ ನೀಡುವ ಮೊದಲು ಯೋಚಿಸಿ ಎಂದು ಎಚ್.ವಿಶ್ವನಾಥ್ಗೆ ಪರೋಕ್ಷವಾಗಿ ಜಗದೀಶ್ ಶೆಟ್ಟರ್ ಸಲಹೆ ನೀಡಿದ್ದಾರೆ.

ಇದೇ ಸಂದರ್ಭ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ವಿಚಾರವಾಗಿ ಮಾತನಾಡಿ, "ಬೆಳಗಾವಿ ಲೋಕಸಭಾ ಉಪಚುನಾವಣೆ ಇನ್ನೂ ಘೋಷಣೆ ಆಗಿಲ್ಲ. ಚುನಾವಣೆ ಘೋಷಣೆಯಾಗದೇ ಚರ್ಚೆ ಮಾಡುವ ಅವಶ್ಯಕತೆ ಇಲ್ಲ. ಇದರಲ್ಲಿ ನನ್ನ ಹೆಸರು ಎಲ್ಲಿಯೂ ಚರ್ಚೆ ಆಗಿಲ್ಲ. ಚುನಾವಣೆ ಘೋಷಣೆ ಆದಾಗ ನನ್ನ ಅಭಿಪ್ರಾಯವನ್ನು ಕೋರ್ ಕಮಿಟಿಯಲ್ಲಿ ತಿಳಿಸುತ್ತೇನೆ. ನಾನೊಬ್ಬ ಸಾಮಾನ್ಯ ಕಾರ್ಯಕರ್ತ, ಮಾಜಿ ಸಿಎಂ, ಕೋರ್ ಕಮಿಟಿ ಮೆಂಬರ್. ಚುನಾವಣೆ ಘೋಷಣೆ ಆದ ಮೇಲೆ ನಮ್ಮ ಪಕ್ಷದಲ್ಲಿ ಚರ್ಚೆ ಆರಂಭ ಆಗುತ್ತದೆ" ಎಂದು ಹೇಳಿದರು.
ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಅವರು, "ಸಂಪುಟ ವಿಸ್ತರಣೆ ಮುಖ್ಯಮಂತ್ರಿಗೆ ಬಿಟ್ಟ ವಿಚಾರ. ಐದಾರು ತಂಡಗಳಲ್ಲಿ ಗ್ರಾಮ ಸ್ವರಾಜ್ಯ ಸಮಾವೇಶ ಮಾಡುತ್ತಿದ್ದೇವೆ. ಎಲ್ಲಾ ಕಡೆ ಪ್ರವಾಸ ಮಾಡುತ್ತಿದ್ದು, ನಮ್ಮ ಪ್ರಮುಖ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ" ಎಂದು ತಿಳಿಸಿದರು.












Click it and Unblock the Notifications