ಕನ್ನಡ ರಾಜ್ಯೋತ್ಸವ: ಮನೆ ಮುಂದೆ ಕನ್ನಡ ಜ್ಯೋತಿ ಬೆಳಗಲು ಕರೆ
ಬೆಳಗಾವಿ, ಅಕ್ಟೋಬರ್ 29: ನವೆಂಬರ್ 1 ರಂದು ಜಿಲ್ಲೆಯ ಎಲ್ಲರೂ ತಮ್ಮ ಮನೆಗಳ ಮುಂದೆ ಕೆಂಪು ಮತ್ತು ಹಳದಿ ಬಣ್ಣದ ರಂಗೋಲಿಗಳನ್ನು ಬಿಡಿಸಿ 'ಕರ್ನಾಟಕ ಸಂಭ್ರಮ-50 ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ' ಎಂಬ ಘೋಷವಾಕ್ಯವನ್ನು ಬರೆಯುವಂತೆ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮನವಿ ಮಾಡಿದ್ದಾರೆ.
ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ಮನೆಗಳ ಮುಂದೆ ರಂಗೋಲಿ ಹಾಕಿ, ಗಾಳಿಪಟಗಳನ್ನು ಹಾರಿಸಿ, ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಿಸುವುದರೊಂದಿಗೆ ಸಂಭ್ರಮವನ್ನು ಹೆಚ್ಚಿಸಬೇಕು ಎಂದು ಕರೆ ನೀಡಲಾಗಿದೆ.

ನವೆಂಬರ್ 1ರಂದು ಬೆಳಗ್ಗೆ 9 ಗಂಟೆಗೆ ರಾಜ್ಯದ ಎಲ್ಲ ಆಕಾಶವಾಣಿ ಕೇಂದ್ರಗಳಿಂದ ನಾಡಗೀತೆಯನ್ನು ಪ್ರಸಾರ ಮಾಡಲಾಗುತ್ತದೆ. ಆ ಸಂದರ್ಭದಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು ನಾಡಗೀತೆ ಪ್ರಸಾರವಾಗುವ ಸಂದರ್ಭದಲ್ಲಿ ಎದ್ದು ನಿಂತು ರಾಷ್ಟ್ರಗೀತೆಗೆ ಗೌರವ ಸಲ್ಲಿಸುವ ರೀತಿಯಲ್ಲಿ ನಾಡಗೀತೆಗೆ ಗೌರವ ಸಲ್ಲಿಸಬೇಕು ಎಂದು ಮನವಿ ಮಾಡಲಾಗಿದೆ.
ನವೆಂಬರ್ 1 ರಂದು ಸಂಜೆ 5 ಗಂಟೆಗೆ ಎಲ್ಲ ಗ್ರಾಮಗಳ ಮೈದಾನಗಳಲ್ಲಿ ಕೆಂಪು-ಹಳದಿ ಬಣ್ಧದ ಗಾಳಿಪಟಗಳನ್ನು ಹಾರಿಸುವ ಮೂಲಕ ಸುವರ್ಣ ಸಂಭ್ರಮ ಗಾಳಿಪಟ ಉತ್ಸವವನ್ನು ಆಚರಿಸಬೇಕು ಎಂದು ಈಗಾಗಲೇ ಕರೆ ನೀಡಲಾಗಿದೆ.
ಅದೇ ರೀತಿ ನವೆಂಬರ್ 1 ರಂದು ಸಂಜೆ 7 ಗಂಟೆಗೆ ಪ್ರತಿಯೊಬ್ಬರು ತಮ್ಮ ಮನೆಗಳು, ಕಚೇರಿಗಳು ಹಾಗೂ ಅಂಗಡಿ ಮುಂಗಟ್ಟುಗಳ ಮುಂದೆ ಹಣತೆ ಹಚ್ಚುವ ಮೂಲಕ ಕನ್ನಡ ಜ್ಯೋತಿ ಬೆಳಗಬೇಕು. ಜಿಲ್ಲೆಯ ಎಲ್ಲ ನಾಗರಿಕರು, ಸಂಘ-ಸಂಸ್ಥೆಗಳು ರಂಗೋಲಿ, ಗಾಳಿಪಟ ಉತ್ಸವ ಹಾಗೂ ಕನ್ನಡಜ್ಯೋತಿ ಬೆಳಗುವ ಮೂಲಕ ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಲಾಗಿದೆ.
ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ; "ಎಲ್ಲಾ ಕನ್ನಡಪರ ಸಂಘಟನೆಗಳ ಒಕ್ಕೊರಲಿನ ಒತ್ತಾಯದಂತೆ ಈ ಬಾರಿ ಕೂಡ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಗುವುದು" ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
"ಕಳೆದ ವರ್ಷ ಸುಮಾರು 5 ಲಕ್ಷ ಜನರು ರಾಜ್ಯೋತ್ಸವದಲ್ಲಿ ಪಾಲ್ಗೊಂಡಿದ್ದರು. ಈ ಬಾರಿ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಲಿದ್ದಾರೆ. ದಸರಾ ಉತ್ಸವ ಮಾದರಿಯಲ್ಲಿ ಅತೀ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು" ಎಂದು ಹೇಳಿದ್ದಾರೆ.
ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆ, ಎನ್.ಎನ್.ಸಿ.ಸಿ, ಸ್ಕೌಟ್ಸ್ ಮತ್ತು ಗೈಡ್ಸ್, ಶಾಲಾ ಕಾಲೇಜು ವಿದ್ಯಾರ್ಥಿಗಳು, ಗೃಹರಕ್ಷಕ ದಳದ ಸಿಬ್ಬಂದಿ, ಭಾರತ ಸೇವಾ ದಳ ಪರೇಡ್ ನಡೆಸಲು ಸಿದ್ಧತೆ ಮಾಡಿಕೊಳ್ಳುತ್ತಿವೆ.
ಕನ್ನಡ ರಾಜ್ಯೋತ್ಸವದ ದಿನದಂದು ಎಂಇಎಸ್ ಕರಾಳ ದಿನಾಚರಣೆ ಆಚರಿಸಲು ಕರೆ ನೀಡಿದೆ. ಆದರೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ನವೆಂಬರ್ 1ರಂದು ಕರಾಳ ದಿನಾಚರಣೆಗೆ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ಮನವಿ ಸಲ್ಲಿಕೆ; ಕರ್ನಾಟಕ, ಮಹಾರಾಷ್ಟ್ರ ಗಡಿ ವಿವಾದಗಳು ಪದೇ ಪದೇ ಕೇಳಿ ಬರುತ್ತಿದ್ದು, ಬೆಳಗಾವಿಯಲ್ಲಿ ಯಾವುದೇ ಸ್ಥಳಗಳಲ್ಲಿ ಕರಾಳ ದಿನಾಚರಣೆ ನಡೆಸಲು ಜಿಲ್ಲಾಡಳಿತ ಅನುಮತಿ ಕೊಡಬಾರದು. ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರಕಾರ ಕಳೆದ ಒಂದು ವರ್ಷದಲ್ಲಿ ಕೈಕೊಳ್ಳುತ್ತಿರುವ ಆಕ್ರಮಣಕಾರಿ ಮತ್ತು ಕರ್ನಾಟಕ ವಿರೋಧಿ ನಿಲವುಗಳ ಬಗ್ಗೆ ಕನ್ನಡ ಸಂಘಟನೆಗಳು ಕರ್ನಾಟಕ ಸರಕಾರಕ್ಕೆ ನಿರಂತರ ವರದಿ ಸಲ್ಲಿಸುತ್ತಿವೆ. ಆದರೆ ಸರ್ಕಾರದ ಈ ಸಂಬಂಧ ಯಾವುದೇ ದೃಢ ನಿರ್ಧಾರ ಕೈಗೊಂಡಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಕೆ ಮಾಡಲಾಗಿದೆ.
ಕರ್ನಾಟಕದ 5 ಜಿಲ್ಲೆಗಳ 855 ಹಳ್ಳಿ ಪಟ್ಟಣಗಳಲ್ಲಿ ವಾಸಿಸುವ ಮರಾಠಿ ಭಾಷಿಕರಿಗೆ ಅನ್ವಯವಾಗುವಂತೆ ಮಹಾತ್ಮ ಫುಲೇ ಜನಾರೋಗ್ಯ ಯೋಜನೆಯನ್ನು ಜಾರಿಗೊಳಸಲು ಇದೇ ವರ್ಷದ ಮಾರ್ಚ್ ತಿಂಗಳಲ್ಲಿ ಮಹಾರಾಷ್ಟ್ರ ಸರಕಾರ ನಿರ್ಧಾರ ಕೈಕೊಂಡಿದೆ. ಈ ನಿರ್ಧಾರದಿಂದ ಮಹಾರಾಷ್ಟ್ರವು ಕರ್ನಾಟಕದ ಆಡಳಿತದಲ್ಲಿ ನೇರವಾಗಿ, ಹಸ್ತಕ್ಷೇಪ ಮಾಡಿದೆ ಇದನ್ನು ತಡೆಯಲು ಜಿಲ್ಲಾಡಳಿತದಿಂದ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಒತ್ತಾಯಿಸಲಾಗಿದೆ.












Click it and Unblock the Notifications