ಬೆಳಗಾವಿ: ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ನಲ್ಲಿ ಅಧಿವೇಶನ
ಬೆಳಗಾವಿ, ಅಕ್ಟೋಬರ್ 19: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಸಲು ತಯಾರಿ ನಡೆದಿದೆ. ಡಿಸೆಂಬರ್ನಲ್ಲಿ ಚಳಿಗಾಲ ಅಧಿವೇಶನ ನಡೆಯಲಿದ್ದು, ಪೂರ್ವ ಸಿದ್ಧತೆ ಆರಂಭವಾಗಿದೆ. ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ದಿನಾಂಕ ತೀರ್ಮಾನವಾಗಲಿದೆ. ಸದ್ಯದ ಮಾಹಿತಿಯಂತೆ ಡಿಸೆಂಬರ್ 9 ರಿಂದ 20ರ ತನಕ ಚಳಿಗಾಲದ ಅಧಿವೇಶನ ನಡೆಯುವ ನಿರೀಕ್ಷೆ ಇದೆ.
ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸುವರ್ಣಸೌಧದ ವಿವಿಧ ಸಭಾಂಗಣಗಳನ್ನು ವೀಕ್ಷಿಸಿದರು, ಸ್ವಚ್ಛತಾ ಸಿಬ್ಬಂದಿಗಳನ್ನು ಮಾತನಾಡಿಸಿ ದೈನಂದಿನ ಸ್ವಚ್ಛತಾ ಕೆಲಸದ ಕುರಿತು ಮಾಹಿತಿ ಪಡೆದರು. ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಯು. ಟಿ. ಖಾದರ್ ಮಾತನಾಡಿ, "ಡಿಸೆಂಬರ್ನಲ್ಲಿ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನವನ್ನು ಕಳೆದ ಬಾರಿಯಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು" ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿ: ಸ್ಪೀಕರ್ ಯು. ಟಿ. ಖಾದರ್, "ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರಿಗೆ ಯಾವುದೇ ರೀತಿಯ ಅನಾನೂಕುಲವಾಗದಂತೆ ನಿಗಾವಹಿಸಬೇಕು. ಅಧಿವೇಶನಕ್ಕೆ ಬರುವಂತಹ ಸಚಿವರು, ಶಾಸಕರು, ಸಚಿವಾಲಯದ ಅಧಿಕಾರಿ, ಸಿಬ್ಬಂದಿಗಳು, ಚಾಲಕರಿಗೆ ಹಾಗೂ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ವ್ಯವಸ್ಥಿತ ವಸತಿ, ಊಟದ ವ್ಯವಸ್ಥೆಯಾಗಬೇಕು" ಎಂದರು.
"ಸುವರ್ಣಸೌಧದ ಪ್ರವೇಶದ್ವಾರದಲ್ಲಿ ಜನ ಹಾಗೂ ಸಂಚಾರ ದಟ್ಟಣೆ ಆಗದಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಪ್ರತಿಭಟನಾ ಸ್ಥಳ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ನಿರಂತರವಾಗಿ ನಿಗಾವಹಿಸಬೇಕು" ಎಂದು ತಿಳಿಸಿದರು.
"ಅಧಿವೇಶನದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಸುವರ್ಣಸೌಧದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಲಾಪಗಳ ವೀಕ್ಷಣೆಗೆ ಆಗಮಿಸುವ ಶಾಲಾ ಮಕ್ಕಳ ವಿವರಗಳನ್ನು ಮುಂಚಿತವಾಗಿ ನೀಡಬೇಕು. ಕಾಯುವಿಕೆ ಸಮಯದಲ್ಲಿ ಮಕ್ಕಳಿಗೆ ನೆರಳಿನ ವ್ಯವಸ್ಥೆ ಮಾಡಬೇಕು" ಎಂದರು.
ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, "ಕಳೆದ ಬಾರಿಯಂತೆ ಈ ಬಾರಿಯು ಪ್ರತಿದಿನ ಬೇರೆ ಬೇರೆ ಜಿಲ್ಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಈ ಕಾರ್ಯಕ್ರಮಗಳಿಗೆ ಅಕ್ಕಪಕ್ಕದ ಜಿಲ್ಲೆಗಳ ಕಲಾವಿದರಿಗೆ ಆದ್ಯತೆ ನೀಡಬೇಕು" ಎಂದು ತಿಳಿಸಿದರು.
"ಅಧಿವೇಶನದ ಸಂದರ್ಭದಲ್ಲಿ ಅಂತರ್ಜಾಲ ವ್ಯವಸ್ಥೆಯಲ್ಲಿ ಯಾವುದೇ ಅಡತಡೆ ಆಗದಂತೆ ನೋಡಿಕೊಳ್ಳಲು ಸೂಚಿಸಿದರು. ಶಾಸಕರು, ಸಚಿವರು ವಾಸ್ತವ್ಯ ಮಾಡುವಂತಹ ಹೋಟೆಲ್ಗಳಲ್ಲಿ ಸಾರ್ವಜನಿಕರ ಭೇಟಿಗೆ ಲಾಂಜ್ ವ್ಯವಸ್ಥೆ ಮಾಡಬೇಕು. ಈ ಕುರಿತು ಹೋಟೆಲ್ ಮಾಲೀಕರೊಂದಿಗೆ ಸಭೆ ನಡೆಸಿ ನಿರ್ದೆಶನಗಳನ್ನು ನೀಡಬೇಕು" ಎಂದರು.
ಸುವರ್ಣಸೌಧದಲ್ಲಿ ಶಾಸಕರ ಭವನ ನಿರ್ಮಾಣ ಹಾಗೂ ನಿರಂತರ ನೀರು ಪೂರೈಕೆಗೆ ಸಂಬಂಧಿಸಿದಂತೆ ಯೋಜನೆಯನ್ನು ರೂಪಿಸಿ, ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮಾತನಾಡಿ, "ಅಧಿವೇಶನವನ್ನು ವ್ಯವಸ್ಥಿತವಾಗಿ ಜರುಗಿಸುವ ಹಿನ್ನೆಲೆಯಲ್ಲಿ ವಸತಿ, ಆಹಾರ ಹಾಗೂ ಭದ್ರತಾ ಸಮಿತಿಗಳನ್ನು ರಚಿಸಿ ಸಭೆಗಳನ್ನು ಆಯೋಜಿಸಲಾಗಿದೆ. ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ವಾಹನ ಚಾಲಕರಿಗೆ ಸೂಕ್ತ ವಸತಿ ಹಾಗೂ ಊಟೋಪಹಾರದ ಕಲ್ಪಿಸಲು ಸಭೆಯಲ್ಲಿ ಚರ್ಚಿಸಲಾಗಿದೆ. ಅಲ್ಲದೇ ಭದ್ರತೆಗೆ ಸಂಬಂಧಿಸಿದಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಯೋಜಿಸಲಾಗಿದೆ" ಎಂದರು.
"ಸುವರ್ಣಸೌಧದಲ್ಲಿ ಸಚಿವರು, ಶಾಸಕರು, ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ವಾಹನ ಚಾಲಕರಿಗೆ ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಊಟದ ವ್ಯವಸ್ಥೆ ಮಾಡಲಾಗುವುದು. ಅಲ್ಲದೇ ಸುಮಾರು ನಾಲ್ಕು ಖಾಸಗಿ ಕ್ಯಾಂಟಿನ್ಗಳನ್ನು ತೆರೆಯಲಾಗುವುದು" ಎಂದು ವಿವರಣೆ ನೀಡಿದರು.
ಕಳೆದ ಬಾರಿಯ ಅಧಿವೇಶನದಂತೆ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಬೇಕು. ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸುವುದರ ಮೂಲಕ ಚಳಿಗಾಲದ ಅಧಿವೇಶನವನ್ನು ಯಶಸ್ವಿಗಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಯು. ಟಿ. ಖಾದರ್ ತಿಳಿಸಿದರು.












Click it and Unblock the Notifications