ಯಡಿಯೂರಪ್ಪ ನಿರ್ಲಕ್ಷಿಸಿದರೆ ಬಿಜೆಪಿ ದಿವಾಳಿ: ಕೆಜೆಪಿ ಅಧ್ಯಕ್ಷ ಎಚ್ಚರಿಕೆ
ಬೆಳಗಾವಿ, ಅಕ್ಟೋಬರ್ 5: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕೇಂದ್ರ ಸರ್ಕಾರವು ಕಡೆಗಣಿಸಿದರೆ ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗುತ್ತದೆ ಎಂದು ಕೆಜೆಪಿ ಸಂಸ್ಥಾಪಕ ಅಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ ಹೇಳಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೇಂದ್ರ ಸರ್ಕಾರವು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸುತ್ತಿದೆ. ಇದೇ ರೀತಿ ಕೇಂದ್ರದ ಧೋರಣೆ ಮುಂದುವರಿದರೆ ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗುವುದು ನಿಶ್ಚಿತ ಎಂದು ಎಚ್ಚರಿಕೆ ನೀಡಿದರು.
ಭೀಕರ ಮಳೆ ಮತ್ತು ಪ್ರವಾಹದಿಂದ ರೈತರು ಕಷ್ಟಪಟ್ಟು ಬೆಳೆದ ಬೆಳೆಗಳು ನಾಶವಾಗಿವೆ. ನೆರೆಯಿಂದಾಗಿ ಲಕ್ಷಾಂತರ ಮಂದಿ ಸಂತ್ರಸ್ತರಾಗಿದ್ದಾರೆ. ಮನೆಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅವರನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ಮಾಡಬಾರದು ಎಂದು ಒತ್ತಾಯಿಸಿದರು.

ಸರ್ಕಾರದ ಬೊಕ್ಕಸ ಖಾಲಿಯಾಗಿದೆ ಎಂದು ಮುಖ್ಯಮಂತ್ರಿ ಅವರೇ ಹೇಳಿಕೆ ನೀಡಿರುವುದು ದುರ್ದೈವದ ಸಂಗತಿ. ಇಷ್ಟೆಲ್ಲ ಅನಾಹುತಗಳು ಸಂಭವಿಸಿದ್ದರೂ ಕೇಂದ್ರ ಸರ್ಕಾರ 1,200 ಕೋಟಿ ರೂ. ಪರಿಹಾರ ನೀಡಿರುವುದು ಮೂಗಿಗೆ ತುಪ್ಪ ಸವರಿದಂತಾಗಿದೆಯಷ್ಟೇ. ಈ ಹಣ ಯಾವುದಕ್ಕೂ ಸಾಲುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನೆರೆ ಸಂತ್ರಸ್ತರ ಕುರಿತು ಮಾತನಾಡುವಾಗ ಅವರು ಭಾವುಕರಾದರು.
ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಯಡಿಯೂರಪ್ಪ ಅವರ ಪರಿಶ್ರಮವೇ ಕಾರಣ. ಅವರನ್ನು ಬಿಜೆಪಿ ಹೈಕಮಾಂಡ್ ಕಡೆಗಣಿಸಬಾರದು. ಯಡಿಯೂರಪ್ಪ ಅವರ ಮಗ ಬಿವೈ ರಾಘವೇಂದ್ರ ನಮ್ಮ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದಾರೆ. ಯಡಿಯೂರಪ್ಪ ಅವರು ಕೆಜೆಪಿಗೆ ಮರಳಿದರೂ ಸ್ವಾಗತಿಸುತ್ತೇನೆ ಎಂದು ಹೇಳಿದರು.












Click it and Unblock the Notifications