Shivarajkumar: ಲಕ್ಷ್ಮಿ ಹೆಬ್ಬಾಳ್ಕರ್ ಪರ ಶಿವರಾಜಕುಮಾರ್ ಪ್ರಚಾರ; ಎಲ್ಲಿ? ಯಾವಾಗ?
ಬೆಳಗಾವಿ, ಮೇ 5: ಕರ್ನಾಟಕದ 2023ರ ವಿಧಾನಸಭೆ ಚುನಾವಣಾ ಕಾವು ರಾಜ್ಯದಲ್ಲಿ ಜೋರಾಗಿದ್ದು, ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆ ಎಲ್ಲ ಅಭ್ಯರ್ಥಿಗಳು ಮತ್ತು ಪಕ್ಷಗಳು ಮತದಾರನಿಗೆ ಕೈ ಮುಗಿಯುತ್ತಿದ್ದಾರೆ. ಈ ಬಾರಿ ಅಧಿಕಾರದ ಗದ್ದುಗೆ ಹಿಡಿಯಲು ಆಡಳಿತರೂಢ ಬಿಜೆಪಿ ಸೇರಿದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಭಾರೀ ಕಸರತ್ತು ನಡೆಸುತ್ತಿದ್ದಾರೆ.
ಸದ್ಯ ಗೆಲುವಿನ ಮಂತ್ರವನ್ನಷ್ಟೇ ಪಠಿಸುತ್ತಿರುವ ಅಭ್ಯರ್ಥಿಗಳು ತಮ್ಮ ಗೆಲುವಿಗೆ ಮತ್ತು ಎದುರಾಳಿಯ ಸೋಲಿಗೆ ಬೇಕಾದ ಎಲ್ಲ ತಂತ್ರ ಪ್ರತಿತಂತ್ರಗಳನ್ನು ಹೆಣೆಯುತ್ತಿದ್ದಾರೆ. ಇದೇ ವೇಳೆ ರಾಜಕೀಯ ನಾಯಕರ ಜೊತೆ ಸಿನಿಮಾ ತಾರೆಯರೂ ಚುನಾವಣಾ ಪ್ರಚಾರ ಕಣದಲ್ಲಿ ಧೂಳೆಬ್ಬಿಸುತ್ತಿದ್ದಾರೆ.

ಕಿಚ್ಚ ಸುದೀಪ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಆತ್ಮೀಯ ಅಭ್ಯರ್ಥಿಗಳ ಪ್ರಚಾರ ನಡೆಸುತ್ತಿದ್ದರು. ಇದೀಗ ಅವರ ಸಾಲಿಗೆ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್, ದುನಿಯಾ ವಿಜಯ್ ಸೇರಿದಂತೆ ಹಲವು ನಟ-ನಟಿಯರು ಸೇರಿಕೊಂಡಿದ್ದಾರೆ.
ಈ ಮಧ್ಯೆಯೇ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಶನಿವಾರ, ಮೇ 6ರಂದು ಬೆಳಗಾವಿಗೆ ಆಗಮಿಸಲಿರುವ ಬೆಳಗಾವಿ ಗ್ರಾಮೀಣ ಶಾಸಕಿ ಪರವಾಗಿ ಮತಯಾಚನೆ ಮಾಡಲಿದ್ದಾರೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಅತ್ಯಂತ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿರುವ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಗೆಲುವು ಕಷ್ಟಸಾಧ್ಯವಾಗಿದೆ. ಏಕೆಂದರೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಂಬಲಿತ ಬಿಜೆಪಿ ಅಭ್ಯರ್ಥಿ ನಾಗೇಶ್ ಮನೋಳ್ಕರ್ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಪ್ರತಿಷ್ಠೆಯ ಕಣವಾಗಿದೆ.

ಶನಿವಾರ ಸಂಜೆ 4 ಗಂಟೆಗೆ ಬೆಳಗಾವಿ ತಾಲೂಕಿನ ಸುಳೇಬಾವಿಗೆ ಆಗಮಿಸಲಿರುವ ಶಿವರಾಜಕುಮಾರ್, ಮಹಾಲಕ್ಷ್ಮೀ ದೇವಿ ದರ್ಶನ ಪಡೆದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಲಿದ್ದಾರೆ. ಬಳಿಕ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.
ಬಳಿಕ ಸಂಜೆ 5 ಗಂಟೆಗೆ ಬೆಳಗಾವಿ ತಾಲ್ಲೂಕಿನ ಶಿಂದೊಳ್ಳಿ ಗ್ರಾಮದಲ್ಲಿ ರೋಡ್ ಶೋ ನಡೆಸಿ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಶಿವರಾಜಕುಮಾರ್, ಸಂಜೆ 7 ಗಂಟೆಗೆ ಹೊನ್ನಿಹಾಳ ಗ್ರಾಮದಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಗುರುವಾರವಷ್ಟೇ ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದಾರಾಮಯ್ಯ ಪರ ಭರ್ಜರಿ ಪ್ರಚಾರ ನಡೆಸಿದ್ದ ಶಿವರಾಜಕುಮಾರ್, ವಿವಿಧ ಸಿನಿಮಾ ಗೀತೆಗಳನ್ನು ಹಾಡಿ ಅಭಿಮಾನಿಗಳನ್ನು ರಂಜಿಸಿದರು. ಅಲ್ಲದೆ ಸಿದ್ದರಾಮಯ್ಯ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಶಿವರಾಜಕುಮಾರ್ ಅವರು ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದಕ್ಕೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಸೇರಿದಂತೆ ಸಂಸದ ಪ್ರತಾಪ್ ಸಿಂಹ ಬೇಸರ ವ್ಯಕ್ತಪಡಿಸಿದ್ದಾರೆ. ರಾಜಕುಮಾರ್ ಕುಟುಂಬ ಆತ್ಮೀಯವಾಗಿದ್ದರೂ ಮತ್ತು ಗೋವಿಂದರಾಜನಗರದಲ್ಲಿ ಪುನೀತ್ ರಾಜಕುಮಾರ್ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿದರೂ ನನ್ನ ವಿರುದ್ಧ ಪ್ರಚಾರ ಮಾಡಿದ್ದಾರೆ ಎಂದಿದ್ದಾರೆ.
2023ರ ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ನಾಮಪತ್ರ ಸಲ್ಲಿಕೆ, ಪರಿಶೀಲನೆ ಮತ್ತು ನಾಮಪತ್ರ ವಾಪಸ್ ಪ್ರಕ್ರಿಯೆ ಕೊನೆಗೊಂಡಿದೆ. ಮೇ 10ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದರೆ, ಮೇ 13ರಂದು ಫಲಿತಾಂಶ ಪ್ರಕಟವಾಗಲಿದ್ದು, ಬಳಿಕ ಯಾವ ಪಕ್ಷ ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂಬ ಕುತೂಹಲ ಮೂಡಿದೆ.












Click it and Unblock the Notifications