Mahadevappa S Yadawad : ರಾಮದುರ್ಗದಲ್ಲಿ ನಾಮಪತ್ರ ವಾಪಸ್ ಪಡೆದ ಬಿಜೆಪಿ ಬಂಡಾಯ ಅಭ್ಯರ್ಥಿ ಮಹಾದೇವಪ್ಪ ಯಾದವಾಡ
ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ್ದ ಬೆನ್ನಲ್ಲೇ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ರಾಮದುರ್ಗ ಶಾಸಕ ಮಹಾದೇವಪ್ಪ ಯಾದವಾಡ ಸೋಮವಾರ ತಮ್ಮ ನಾಮಪತ್ರ ವಾಪಸ್ ಪಡೆದಿದ್ದಾರೆ. ಬಿಜೆಪಿ ವರಿಷ್ಠರ ಮನೊವೊಲಿಕೆ ಪ್ರಯತ್ನ ನೀಡಿದ್ದು, ನಾಮಪತ್ರ ವಾಪಸ್ ಪಡೆದಿರುವ ಅವರು ಬಿಜೆಪಿ ಅಭ್ಯರ್ಥಿ ಚಿಕ್ಕ ರೇವಣ್ಣ ಅವರಿಗೆ ಬೆಂಬಲ ನೀಡಲು ನಿರ್ಧರಿಸಿದ್ದಾರೆ.
ಮಹಾದೇವಪ್ಪ ಯಾದವಾಡ ನಾಮಪತ್ರ ವಾಪಸ್ ಪಡೆದ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ನಿಟ್ಟುಸಿರು ಬಿಟ್ಟಿದ್ದಾರೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮಹದೇವಪ್ಪ ಪಟ್ಟಣ ಅವರ ವಿರುದ್ಧ ಮಹಾದೇವಪ್ಪ ಯಾದವಾಡ 57,047 ಮತಗಳ ಅಂತದರಲ್ಲಿ ಭರ್ಜರಿ ಜಯ ಸಾಧಿಸಿದ್ದರು. ಹಾಲಿ ಶಾಸಕರಿಗೆ ಬಿಜೆಪಿ ಈ ಬಾರಿ ಟಿಕೆಟ್ ನೀಡದೆ ಚಿಕ್ಕ ರೇವಣ್ಣ ಎನ್ನುವವರಿಗೆ ಮಣೆ ಹಾಕಿತ್ತು. ಇದರಿಂದ ಪಕ್ಷದ ವಿರುದ್ಧ ಕೋಪಗೊಂಡಿದ್ದ ಮಹಾದೇವಪ್ಪ ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಲು ನಿರ್ಧರಿಸಿದ್ದರು.

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಬಂಡಾಯ ಶಮನ ಮಾಡಲು ರಾಜ್ಯ ಮತ್ತು ರಾಷ್ಟ್ರ ಮಟ್ಟದ ನಾಯಕರು ಪ್ರಯತ್ನ ಪಟ್ಟಿದ್ದರು. ಬಿಜೆಪಿ ವರಿಷ್ಠರ ಮನವೊಲಿಕೆ ಪ್ರಯತ್ನ ಫಲ ನೀಡಿದ್ದು, ಮಹಾದೇವಪ್ಪ ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾದ ಏಪ್ರಿಲ್ 23ರಂದು ಸೋಮವಾರು ಅವರು ವಾಪಸ್ ಪಡೆದುಕೊಂಡಿದ್ದು, ಬಿಜೆಪಿ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದ್ದಾರೆ.
ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ 14 ಬಾರಿ ಚುನಾವಣೆ ನಡೆದಿದ್ದು, ಕಾಂಗ್ರೆಸ್ 9 ಬಾರಿ ಗೆಲುವು ಸಾಧಿಸಿದೆ. ಬಿಜೆಪಿ ಇಲ್ಲಿ ಎರಡು ಬಾರಿ ಗೆಲುವು ಕಂಡಿದ್ದರೆ, ಜನತಾ ದಳ, ಜನತಾ ಪಕ್ಷ ಹಾಗೂ ಪಕ್ಷೇತರ ಅಭ್ಯರ್ಥಿ ತಲಾ ಒಂದು ಬಾರಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಹಾಲಿ ಶಾಸಕರಿಗೆ ಟಿಕೆಟ್ ತಪ್ಪಿಸಿ ಹೊಸಬರಿಗೆ ಮಣೆ ಹಾಕಿದ್ದು, ಯಾವ ರೀತಿಯ ಫಲಿತಾಂಶ ಬರಲಿದೆ ಎನ್ನುವ ಕುತೂಹಲ ಮೂಡಿದೆ.
ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಅಶೋಕ್ ಎಂ ಪಟ್ಟಣ್ ಸ್ಪರ್ಧೆ ಮಾಡಿದ್ದಾರೆ. ಕಳೆದ ಬಾರಿ ಮಹಾದೇವಪ್ಪ ವಿರುದ್ಧ ಸೋಲನುಭವಿಸಿದ್ದರೂ ಅಶೋಕ್ ಎಂ ಪಟ್ಟಣ್ ಮತ್ತೆ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ವಿರೋಧಿ ಲಾಭ ಪಡೆದು ಈ ಬಾರಿ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದಾರೆ, ಬಿಜೆಪಿ ಹೊಸ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಗೆಲುವಿನ ಲೆಕ್ಕಾಚಾರದಲ್ಲಿದೆ ಕಾಂಗ್ರೆಸ್.












Click it and Unblock the Notifications