ಕರ್ನಾಟಕ- ಮಹಾರಾಷ್ಟ್ರ ಗಡಿ ವಿವಾದ: ಬೆಳಗಾವಿ ಜಿಲ್ಲೆಯಲ್ಲಿ ಬಿಗಿ ಬಂದೋಬಸ್ತ್
ಬೆಳಗಾವಿ, ನ. 30: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ದಶಕಗಳ ಗಡಿ ವಿವಾದದ ಕೇಂದ್ರಬಿಂದುವಾಗಿರುವ ಬೆಳಗಾವಿ ಜಿಲ್ಲೆಯಾದ್ಯಂತ ಪೊಲೀಸರು ಬಿಗಿ ಭದ್ರತೆಯನ್ನು ನಿಯೋಜಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿರುವ ಹಿನ್ನೆಲೆ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸರು ಈ ಕ್ರಮಕೈಗೊಂಡಿದ್ದಾರೆ.
ನಗರ ಸೇರಿದಂತೆ ಬೆಳಗಾವಿ ಜಿಲ್ಲೆಯಲ್ಲಿ 21 ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗಿದೆ. ಹೆಚ್ಚುವರಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ (ಕೆಎಸ್ಆರ್ಪಿ) ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಬಸ್ ನಿಲ್ದಾಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪೋಸ್ಟರ್ಗೆ ಕಪ್ಪು ಮಸಿ
"ಸುಪ್ರೀಂಕೋರ್ಟ್ನಲ್ಲಿ ಗವಿ ವಿವಾದಕ್ಕೆ ಸಂಬಂಧೀಸಿದ ಪ್ರಕರಣ ವಿಚಾರಣೆಗೆ ಬರುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಳ್ಳಲು ನಾವು ನಿರ್ಧರಿಸಿದ್ದೇವೆ. ಕಳೆದ ವಾರ ನಡೆದ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ನಿರ್ಧರಿಸಿದ್ದೇವೆ" ಎಂದು ಎಡಿಜಿಪಿ (ಕಾನೂನು ಮತ್ತು ಆದೇಶ) ಅಲೋಕ್ ಕುಮಾರ್ ತಿಳಿಸಿದ್ದಾರೆ.
1960 ರ ದಶಕದ ಹಿಂದಿನ ಗಡಿ ವಿವಾದದಿಂದ ಎರಡೂ ರಾಜ್ಯಗಳಲ್ಲಿ ಬಸ್ಸುಗಳು ಮತ್ತು ವಾಹನಗಳಿಗೆ ಹಾನಿಯುಂಟು ಮಾಡುವುದು ಅಥವಾ ಕಪ್ಪು ಬಣ್ಣ ಬಳಿಯುವಂತಹ ಕೆಲವು ಘಟನೆಗಳು ನಡೆದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಗಡಿ ಭಾಗದಲ್ಲಿ ಶಾಂತಿ ಕಾಪಾಡುವ ಉದ್ದೇಶದಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರ ಪೊಲೀಸರು ಮಂಗಳವಾರ ನಿಪ್ಪಾಣಿಯಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಶಾಂತಿ, ಸೌಹಾರ್ದತೆಗೆ ಭಂಗ ತರುವ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ.
ಮಹಾರಾಷ್ಟ್ರ ಸಚಿವರಾದ ಚಂದ್ರಕಾಂತ್ ಪಾಟೀಲ್ ಮತ್ತು ಶಂಭುರಾಜ್ ದೇಸಾಯಿ ಅವರು ಡಿಸೆಂಬರ್ 3 ರಂದು ಬೆಳಗಾವಿಗೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಪದಾಧಿಕಾರಿಗಳನ್ನು ಭೇಟಿ ಮಾಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾರಾಷ್ಟ್ರದ ಯಾವುದೇ ನಾಯಕರ ಖಾಸಗಿ ಭೇಟಿಗಳನ್ನು ರಾಜ್ಯ ಪೊಲೀಸರು ತಡೆಯುವುದಿಲ್ಲ, ಆದರೆ ಶಾಂತಿ ಕದಡುವ ಯಾವುದೇ ಪ್ರಯತ್ನಗಳಿದ್ದರೆ ಕ್ರಮ ಕೈಗೊಳ್ಳುತ್ತಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನ್ಯಾಯಾಲಯದ ಮೊಕದ್ದಮೆ, ಮಹಾರಾಷ್ಟ್ರ ಸಚಿವರ ಭೇಟಿ ಮತ್ತು ಡಿಸೆಂಬರ್ 19 ರಿಂದ ಬೆಳಗಾವಿಯಲ್ಲಿ ಮುಂಬರುವ ವಿಧಾನಸಭೆ ಅಧಿವೇಶನದ ಹಿನ್ನೆಲೆಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.