ಬೆಳಗಾವಿ-ಕೊಲ್ಹಾಪುರ ಸರ್ಕಾರಿ ಬಸ್ ಸಂಚಾರ ಸ್ಥಗಿತ
ಬೆಳಗಾವಿ, ಮಾರ್ಚ್ 14; ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮತ್ತೆ ಭುಗಿಲೆದ್ದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕನ್ನಡ ನಾಮಫಲಕಗಳಿಗೆ ಮಸಿ ಬಳಿದ ಬಳಿಕ ಬೆಳಗಾವಿಯಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಲ್ಹಾಪುರಕ್ಕೆ ತೆರಳುವ ಬಸ್ಗಳ ಸಂಚಾರವನ್ನು ಶನಿವಾರದಿಂದ ರದ್ದುಗೊಳಿಸಿದೆ. ಮತ್ತೊಂದು ಕಡೆ ಮಹಾರಾಷ್ಟ್ರ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳ ಸಂಚಾರವೂ ರದ್ದಾಗಿದೆ.
ಶಿವಸೇನೆ ಮುಖಂಡ ಸಂಜಯ್ ರಾವತ್, "ಮರಾಠಿ ಮಾತನಾಡುವ ಬೆಳಗಾವಿಯಲ್ಲಿರುವ ಜನರು ಸಂತ್ರಸ್ತರು. ಮಹಾರಾಷ್ಟ್ರದ ಸರ್ವಪಕ್ಷಗಳ ನಿಯೋಗ ಬೆಳಗಾವಿಗೆ ಭೇಟಿ ನೀಡಬೇಕು. ಈ ವಿವಾದ ಬಗೆಹರಿಸಲು ಪ್ರಯತ್ನ ನಡೆಸಬೇಕು" ಎಂದು ಹೇಳಿದ್ದಾರೆ.

"ಕಳೆದ 8 ದಿನಗಳಲ್ಲಿ ಶಿವಸೇನೆ ಮುಖಂಡರ ಮೇಲೆ ಬೆಳಗಾವಿಯಲ್ಲಿ ಹಲ್ಲೆಯಾಗಿದೆ. ಪಕ್ಷದ ಕಚೇರಿಯನ್ನು ಕನ್ನಡ ಪರ ಸಂಘಟನೆಗಳು ಧ್ವಂಸ ಮಾಡಿವೆ" ಎಂದು ಸಂಜಯ್ ರಾವತ್ ಆರೋಪ ಮಾಡಿದ್ದಾರೆ.
ಶುಕ್ರವಾರ ಕೊಲ್ಹಾಪುರದಲ್ಲಿ ಕನ್ನಡ ನಾಮಫಲಕಗಳಿಗೆ ಮಸಿ ಬಳಿಯಲಾಗಿದೆ. ಇದನ್ನು ಖಂಡಿಸಿ ಬೆಳಗಾವಿಯಲ್ಲಿದ್ದ ಮರಾಠಿ ನಾಮಫಲಕಗಳಿಗೆ ಮಸಿ ಬಳಿಕಯಾಗಿದೆ. ಇದರಿಂದಾಗಿ ಪರಿಸ್ಥಿತಿ ಅವಲೋಕಿಸಿ ಬಸ್ ಸಂಚಾರವನ್ನು ರದ್ದುಗೊಳಿಸಲಾಗಿದೆ.
ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ನಡೆಸಬೇಕು ಎಂದು ಕರ್ನಾಟಕ ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಕುರಿತು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಜೊತೆ ಸಮಾಲೋಚನೆ ನಡೆಸಲಾಗುತ್ತದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.
2018ರ ಬಳಿಕ ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನವೂ ನಡೆದಿಲ್ಲ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಸುವರ್ಣ ವಿಧಾನಸೌಧ ನಿರ್ಮಿಸಲಾಗಿದೆ. ಆದರೆ, ಅಲ್ಲಿಗೆ ಸರ್ಕಾರಿ ಕಚೇರಿಗಳನ್ನು ಸ್ಥಳಾಂತರ ಮಾಡುವ ಪ್ರಕ್ರಿಯೆಯೂ ನಡೆದಿಲ್ಲ.












Click it and Unblock the Notifications