ಬೆಳಗಾವಿಯಲ್ಲಿ ಈ ಬಾರಿ ಒಂದು ದಿನ ಮಾತ್ರ ಕಿತ್ತೂರು ಉತ್ಸವ
ಬೆಳಗಾವಿ, ಸೆಪ್ಟೆಂಬರ್ 30: ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಜನರ ಒಮ್ಮತದ ಅಭಿಪ್ರಾಯದಂತೆ ಇದೇ ಅಕ್ಟೋಬರ್ 23ರಂದು ಒಂದು ದಿನ ಮಾತ್ರ ಸಂಪ್ರದಾಯಬದ್ಧವಾಗಿ ಸರಳ ರೀತಿಯಲ್ಲಿ ಕಿತ್ತೂರು ಉತ್ಸವವನ್ನು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹಾಗೂ ಕಿತ್ತೂರು ಶಾಸಕ ಮಹಾಂತೇಶ ದೊಡಗೌಡ್ರ ಅವರು ತಿಳಿಸಿದ್ದಾರೆ.
ಕಿತ್ತೂರು ಉತ್ಸವಕ್ಕೆ ಸಂಬಂಧಿಸಿದಂತೆ ಚೆನ್ನಮ್ಮನ ಕಿತ್ತೂರಿನ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಚೆನ್ನಮ್ಮ ಸ್ವಾಭಿಮಾನದ ಸಂಕೇತ. ಆದರೆ ಪ್ರಸ್ತುತ ಸನ್ನಿವೇಶದಲ್ಲಿ ಸಾರ್ವಜನಿಕರ ಆರೋಗ್ಯ ಮತ್ತು ಜೀವ ರಕ್ಷಣೆ ಮುಖ್ಯವಾಗಿದೆ. ಆದ್ದರಿಂದ ಈ ಬಾರಿ ಮೂರು ದಿನಗಳ ಅದ್ಧೂರಿ ಉತ್ಸವದ ಬದಲಾಗಿ ಸಂಪ್ರದಾಯದಂತೆ ಜ್ಯೋತಿಯಾತ್ರೆ, ವಿಜಯದ ಸಂಕೇತವಾದ ದೀಪೋತ್ಸವ, ಮತ್ತಿತರ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸರಳ ರೀತಿಯಲ್ಲಿ ಒಂದು ದಿನ ಮಾತ್ರ ಉತ್ಸವವನ್ನು ಆಚರಿಸಲಾಗುವುದು ಎಂದು ತಿಳಿಸಿದರು.

ಸರಳ ರೀತಿಯಲ್ಲಿ ಆಚರಣೆಗೆ ಸಲಹೆ ನೀಡುವ ಮೂಲಕ ಎಲ್ಲರೂ ಪ್ರಬುದ್ಧತೆ ಪ್ರದರ್ಶಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ ಹಿರೇಮಠ ಅವರು, ಕೊರೊನಾದಿಂದ ಮುಕ್ತರಾಗುವ ಕಡೆಗೆ ನಾವು ಹೆಜ್ಜೆ ಇಟ್ಟಿದ್ದೇವೆ. ಇಂತಹ ಸಂದರ್ಭದಲ್ಲಿ ಉತ್ಸವವನ್ನು ಸರಳವಾಗಿ ಆಚರಿಸುವುದು ಸೂಕ್ತವಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಮಹಾಂತೇಶ ದೊಡಗೌಡ್ರ, ಕಳೆದ 24 ವರ್ಷಗಳಿಂದ ಕಿತ್ತೂರು ಉತ್ಸವವನ್ನು ಅಭಿಮಾನದಿಂದ ಅದ್ಧೂರಿಯಾಗಿ ಆಚರಿಸುತ್ತ ಬರಲಾಗಿದೆ. ಆದರೆ ಜಗತ್ತಿಗೆ ಎದುರಾಗಿರುವ ಮಹಾಮಾರಿಯಿಂದ ಸಮಾಜವನ್ನು ರಕ್ಷಿಸಬೇಕಿದೆ. ಇದನ್ನು ಗಮನದಲ್ಲಿಟ್ಟುಕೊಂಡು ಈ ಬಾರಿ ಕಿತ್ತೂರು ಉತ್ಸವವನ್ನು ಒಂದು ದಿನಕ್ಕೆ ಸೀಮಿತಗೊಳಿಸಿ ಸರಳವಾಗಿ ಆಚರಿಸೋಣ ಎಂದು ತಿಳಿಸಿದರು.












Click it and Unblock the Notifications