"ನರೇಂದ್ರ ಮೋದಿ ಬಣ್ಣದ ಮಾತಿಗೆ ದೇಶವೇ ಮರುಳಾಗಿದೆ''
ಬೆಳಗಾವಿ, ಡಿಸೆಂಬರ್ 15: ಪ್ರಧಾನಿ ನರೇಂದ್ರ ಮೋದಿಯ ಬಣ್ಣದ ಮಾತಿಗೆ ಈಗಾಗಲೇ ದೇಶವೇ ಮರುಳಾಗಿದೆ. ಇದೇನು ಹೊಸದೇನಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವ್ಯಂಗ್ಯವಾಡಿದರು.
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಗ್ರಾಮ ಪಂಚಾಯತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆ ಏನು ಹೊಸದಲ್ಲ ಎಂದು ತಿಳಿಸಿದರು.
1965ರಲ್ಲಿಯೇ ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರು ಜಾರಿಗೆ ತಂದಿದ್ದರು. ಆದರೆ ಈಗ ಬಿಜೆಪಿ ಸರ್ಕಾರ ಅದಕ್ಕೆ ಸುಣ್ಣ ಬಣ್ಣ ಬಳಿದು, ಅಲಂಕರಿಸಲು ಹೊರಟ್ಟಿದ್ದಾರೆ. ದೇಶದ ಜನರು ಬಣ್ಣದ ಮಾತಿಗೆ ಮರುಳಾಗದೆ, ಮತ್ತೆ ವಸ್ತುಸ್ಥಿತಿಗೆ ಬರಬೇಕು ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ರಾಯಬಾಗ, ಕುಡಚಿ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. ಈಗ ಮತ್ತೆ ಗ್ರಾಮ ಪಂಚಾಯತಿಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿ, ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು. ಬಿ.ಎಸ್.ಯಡಿಯೂರಪ್ಪ, ಮೋದಿ ನೇತೃತ್ವದ ಸರ್ಕಾರಗಳ ವೈಫಲ್ಯಗಳನ್ನು ಜನರಿಗೆ ಅರ್ಥ ಮಾಡಿಸುವ ಪ್ರಯತ್ನ ಮಾಡಬೇಕೆಂದರು.
ಕಾಂಗ್ರೆಸ್ ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬರಬೇಕಾದರೆ, ರಾಯಬಾಗ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾ.ಪಂ ಸ್ಥಾನಗಳನ್ನು ಕಾರ್ಯಕರ್ತರು ಗೆಲ್ಲಿಸಿ ಕೊಡಬೇಕು. ಸಿದ್ದರಾಮಯ್ಯ ಸರ್ಕಾರದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಡಿ.ಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಮೇಲೆ ಕಾಂಗ್ರೆಸ್ ಪಕ್ಷದಲ್ಲಿನ ಕಾರ್ಯಗಳು ಚುರುಕುಗೊಂಡಿದ್ದು, ಹೊಸ ಚೈತನ್ಯ ಬಂದಿದೆ. ಕಾಂಗ್ರೆಸ್ ಕಾರ್ಯಕರ್ತರು ಪಕ್ಷ ಸಂಘಟನೆಗೆ ಶ್ರಮ ವಹಿಸಿ ಕೆಲಸ ಮಾಡಬೇಕು. ನೀವು ಮಾಡುವ ಕೆಲಸಕ್ಕೆ ಪ್ರತಿಫಲ ದೊರೆಯಲಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಭರವಸೆ ನೀಡಿದರು.












Click it and Unblock the Notifications