ಕೃಷ್ಣಾ ಮೇಲ್ದಂಡೆ ಯೋಜನೆ: ಡಿ.11 ಸಿಎಂ ಉಪಸ್ಥಿತಿಯಲ್ಲಿ ಮಹತ್ವದ ಸಭೆ
ಬೆಳಗಾವಿ, ಡಿಸೆಂಬರ್ 09: ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 11ರಂದು ನಾಲ್ಕು ಜಿಲ್ಲೆಯ ಸರ್ವಪಕ್ಷ ಸಭೆ ಕರೆದಿದ್ದಾರೆ. ಸಭೆಯಲ್ಲಿ ನಮ್ಮ ಹಕ್ಕನ್ನು ನಾವು ಪ್ರತಿಪಾಧಿಸುತ್ತೇವೆ.
ನಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಈಡೇರಿಸಬೇಕು. ಇಲ್ಲದಿದ್ದರೆ ಮುಂದಿನ ಹೋರಾಟದ ಬಗ್ಗೆ ಚರ್ಚಿಸಿ ಹೋರಾಟ ಮಾಡುತ್ತೇವೆ ಕೃಷ್ಣಾ ಮೇಲ್ದಂಡೆ ಯೋಜನೆ ಹೋರಾಟ ಸಮಿತಿ ಅಧ್ಯಕ್ಷ ಅಜಯ್ ಕುಮಾರ್ ಸರನಾಯಕ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆ ಹಲವು ವರ್ಷಗಳಿಂದ ಕುಂಟುತ್ತಾ ಸಾಗಿದೆ. ಯೋಜನೆ ಪೂರ್ಣಗೊಳಿಸಲು ಅಹೋರಾತ್ರಿ ಹೋರಾಟದ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಲಾಗಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸುವಂತೆ ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗುತ್ತಿಲ್ಲ. ಹಾಗಾಗಿ ಬಾಗಲಕೋಟೆ ಜಿಲ್ಲಾಡಳಿತ ಕಚೇರಿ ಮುಂಭಾಗದಲ್ಲಿ ರೈತರು ಹೋರಾಟ ನಡೆಸುತ್ತಿದ್ದೇವೆ. ಸರ್ಕಾರವು ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ತೀವ್ರ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ಯೋಜನೆ ಬಗ್ಗೆ ಸರ್ಕಾರದ ನಿರ್ಲಕ್ಷ್ಯ
ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೃಷ್ಣಾ ಮೇಲ್ದಂಡೆ ಯೋಜನೆಗೆ 40 ಸಾವಿರ ಕೋಟಿ ರೂಪಾಯಿ ಅನುದಾನ ನೀಡುತ್ತೇವೆ. ನುಡಿದಂತೆ ನಡೆಯುವ ನಡೆಯುತ್ತೇವೆ ಎಂದು ಹೇಳಿದ್ದರು. ಆದರೆ, ಇಲ್ಲಿಯವರೆಗೆ ಅನುದಾನ ನೀಡಿಲ್ಲ. ಯೋಜನೆ ಬಗ್ಗೆ ಸರ್ಕಾರವು ಸಂಪೂರ್ಣ ನಿರ್ಲಕ್ಷ್ಯ ವಹಿಸಿಕೊಂಡು ಬರುತ್ತಿದೆ.
ಕೂಡಲೇ ಕೃಷ್ಣಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಕ್ರಮ ವಹಿಸಬೇಕು. ಅಲ್ಲದೇ ಮುಳುಗಡೆಯಾದ ಭೂಮಿ ಸ್ವಾಧೀನಪಡಿಸಿಕೊಂಡ ಸಂತ್ರಸ್ತರಿಗೆ ಪರಿಹಾರ ಹಾಗೂ ಅವರ ಅತಂತ್ರ ಸ್ಥಿತಿ ಹೋಗಲಾಡಿಸಬೇಕು ಎಂದು ಒತ್ತಾಯಿಸಿದರು.
1964ರಲ್ಲಿ ದಿ ಲಾಲ್ ಬಹದ್ದೂರ ಶಾಸ್ತ್ರೀಜಿ ಅವರು ಶಂಕು ಸ್ಥಾಪನೆ ಮಾಡಿದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3ಕ್ಕೆ ಹಂಚಿಕೆಯಾದ 130 ಟಿಎಂಸಿ ನೀರನ್ನು ಬಳಸಿಕೊಂಡು ಉತ್ತರ ಕರ್ನಾಟಕದ 7 ಜಿಲ್ಲೆಗಳ 15 ಲಕ್ಷ ಎಕರೆ ಜಮೀನನ್ನು ನೀರಾವರಿಗೆ ಒಳಪಡಿಸಿಬೇಕು.
ಈ ಯೋಜನೆಯಿಂದ ಬಾಧಿತರಾಗುವ ಸಂತ್ರಸ್ತರಿಗೆ ಯೋಗ್ಯ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಿಕೊಡಬೇಕು ಎಂಬುವುದು ನಮ್ಮ ಪ್ರಮುಖ ಬೇಡಿಕೆಯಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಸ್.ಆರ್.ಪಾಟೀಲ್, ಆರ್.ವಿ.ಮುಳ್ಳೂರ, ಪ್ರಕಾಶ ಅಂತರಗೊಂಡ, ಅದೃಶ್ಯಪ ದೇಸಾಯಿ, ರೈತ ನಾಯಕರು ಮುಂತಾದವರು ಉಪಸ್ಥಿತರಿದ್ದರು.












Click it and Unblock the Notifications