ಕೆಎಸ್ಆರ್ಟಿಸಿ ಮುಚ್ಚುವ ಸ್ಥಿತಿ ನಿರ್ಮಾಣವಾಗಿದೆ: ಸರ್ಕಾರದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಾಗ್ದಾಳಿ
ಬೆಳಗಾವಿ, ಜೂನ್ 25: ಕೆಎಸ್ಆರ್ಟಿಸಿ ಮುಂದಿನ ದಿನಗಳಲ್ಲಿ ಮುಚ್ಚುವಂತಹ ಸ್ಥಿತಿ ನಿರ್ಮಾಣವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಡೀಸೆಲ್ಗೆ ಹಣ ಇಲ್ಲದೆ ಬಸ್ಗಳು ನಿಲ್ಲುವಂತಹ ಸ್ಥಿತಿ ಬರಲಿದೆ. ಇಡೀ ರಾಜ್ಯ ಕತ್ತಲಲ್ಲಿ ಮುಳುಗುವಂತಹ ಸ್ಥಿತಿ ಬರಲಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ಜನಪ್ರಿಯತೆ ಕಳೆದಿಕೊಂಡಿದೆ. ಇಂತಹ ಪರಿಸ್ಥಿತಿ ಬಂದಿರುವುದು ಇದೇ ಮೊದಲು. ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ, ಕುಡಿಯುವ ನೀರಿನ ಸಮಸ್ಯೆ ಕಾಡುತ್ತಿದೆ. ಆದರೆ ಇವರಿಗೆ ಅದರ ಬಗ್ಗೆ ಯೋಚನೆ ಇಲ್ಲ, ಅಕ್ಕಿ ಕೊಟ್ಟಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲು ಇವರಿಗೆ ಯಾವ ನೈತಿಕತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸರ್ಕಾರದಲ್ಲಿದ್ದುಕೊಂಡು ಇವರೇ ಪ್ರತಿಭಟನೆ ಮಾಡುತ್ತಿದ್ದಾರೆ, ಅಕ್ಕಿ ಖರೀದಿಯಲ್ಲಿ ಏನೆಲ್ಲಾ ಆಗಿದೆ ಎನ್ನುವುದು ನನಗೆ ಗೊತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನಾಯಕರ ಬಣ್ಣ ಬಯಲಾಗಲಿದೆ. ಪರ್ಸಂಟೇಜ್ ವಿಚಾರದಲ್ಲಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಮಾಡಿದ್ದರು, ಈಗ ಪರ್ಸಂಟೇಜ್ ನಿಗದಿ ಮಾಡುತ್ತಿದ್ದಾರೆ. ಯಾವ ಯಾವ ಸಚಿವರು ಯಾವ ಗುತ್ತಿಗೆದಾರರನ್ನು ಕರೆದು ಏನು ಹೇಳಿದ್ದಾರೆ ನನಗೆ ಗೊತ್ತಿದೆ ಎಂದು ಆರೋಪ ಮಾಡಿದರು.
ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕ್ರಮ
ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ 9 ವರ್ಷ ತುಂಬಿದ ಸಂಭ್ರಮದಲ್ಲಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕ್ರಮ ಆಯೋಜಿಸಿತ್ತು. ನಗರದ ಗಾಂಧಿ ಭವನದಲ್ಲಿ ಜಿಲ್ಲಾ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಾಯಿತು. ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಹೊಗಳಿಕೆ ನಡೆಸಿದರು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ, ಸಂಸದರಾದ ಅಣ್ಣಾ ಸಾಹೇಬ್ ಜೊಲ್ಲೆ, ರಮೇಶ್ ಜಿಗಜಿಣಗಿ, ಮಂಗಳಾ ಅಂಗಡಿ, ಈರಣ್ಣ ಕಡಾಡಿ, ಬಾಲಚಂದ್ರ ಜಾರಕಿಹೊಳಿ, ಅಭಯ್ ಪಾಟೀಲ್ ಸೇರಿ ಹಲವು ಭಾಗವಹಿಸಿದ್ದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆ ಜಾರಿ ಮಾಡಿರುವುದರಿಂದ ಸಾರಿಗೆ ಸಂಸ್ಥೆಗೆ ಯಾವ ನಷ್ಟವೂ ಆಗುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಶಕ್ತಿ ಯೋಜನೆ ಜಾರಿಯಲ್ಲಿ ಕೆಲವು ಸಣ್ಣ ಲೋಪಗಳಿವೆ ಎಂದು ಒಪ್ಪಿಕೊಂಡ ಅವರು, ಆದರೂ ಯೋಜನೆ ಬಗ್ಗೆ ಉತ್ತಮ ಸ್ಪಂದನೆ ದೊರೆತಿದೆ ಎಂದು ಹೇಳಿದರು.
ಶಕ್ತಿ ಯೋಜನೆ ಜಾರಿಯಿಂದ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವ ಮಹಿಳೆಯರ ಸಂಖ್ಯೆ ಕೂಡ ಹೆಚ್ಚಾಗಿದೆ. ಒಮ್ಮೆ ಹೋದರೆ ಪದೇ ಪದೇ ಪುಣ್ಯ ಕ್ಷೇತ್ರಗಳಿಗೆ ಹೋಗುವುದಿಲ್ಲ, ಎಲ್ಲವೂ ಸರಿ ಹೋಗಲಿದೆ. ಸಾರಿಗೆ ಸಂಸ್ಥೆಗಳಿಗೆ ವಿಶೇಷ ಅನುದಾನ ನೀಡಬೇಕಾಗುತ್ತದೆ. ಪ್ರಯಾಣಿಕರ ಜೊತೆ ಸೌಜನ್ಯದಿಂದ ವರ್ತಿಸಲು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕರು ಕೂಡ ಸಹಕಾರ ನೀಡಬೇಕು ಎಂದು ಮನವಿಗೆ ಮಾಡಿದ್ದಾರೆ.












Click it and Unblock the Notifications