ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಶುಭಸುದ್ದಿ ಕೊಟ್ಟ ಕುಮಾರಸ್ವಾಮಿ
ಬೆಳಗಾವಿ, ಡಿಸೆಂಬರ್ 13: ಹೈದ್ರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅನುದಾನವನ್ನು ಪ್ರಸ್ತುತವಿರುವ 1500ಕೋಟಿ ರೂ.ನಿಂದ 2ಸಾವಿರ ಕೋಟಿಗಳಿಗೆ ಹೆಚ್ಚಿಸಬೇಕೆಂಬ ಆ ಭಾಗದ ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿ ಅವರು ಸಕರಾತ್ಮಕವಾಗಿ ಸ್ಪಂದಿಸಿದ್ದು, 2ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದಾರೆ.
ಅವರು ಬುಧವಾರ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗದ ಶಾಸಕರೊಂದಿಗೆ ಆ ಭಾಗದ ಸಮಸ್ಯೆಗಳ ಬಗ್ಗೆ ಸಮಾಲೋಚನಾ ಸಭೆ ನಡೆಸಿ ಮಾತನಾಡಿ, ಈ ನಿರ್ಣಯ ಪ್ರಕಟಿಸಿದರು.
ಹೈದ್ರಬಾದ್ ಕರ್ನಾಟಕ ಅಭಿವೃದ್ಧಿಗೆ ಪ್ರಸ್ತುತ ಬಜೆಟ್ನಲ್ಲಿ 1500ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. ಆದರೆ ಒಂದು ಸಾವಿರ ರೂ. ಕಾಮಗಾರಿಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನವನ್ನು ಮುಂದಿನ ಬಜೆಟ್ನಲ್ಲಿ 2ಸಾವಿರ ಕೋಟಿ ರೂ.ಗಳಿಗೆ ಹೆಚ್ಚಿಸಬೇಕು ಎಂದು ಶಾಸಕರು ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದರು.

2 ಸಾವಿರ ಕೋಟಿ ಕ್ರಿಯಾ ಯೋಜನೆಗೆ ಒಪ್ಪಿಗೆ
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಅವರು, 2ಸಾವಿರ ಕೋಟಿ ರೂ.ಗಳಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಸಲ್ಲಿಸಿ. ಪ್ರಸ್ತುತ ಸಾಲಿನಲ್ಲಿ ಇದುವರೆಗೆ ಹೈದ್ರಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ 692 ಕೋಟಿ ರೂ. ವೆಚ್ಚ ಮಾಡಲಾಗಿದೆ. ಮುಂದಿನ ಮೂರು ತಿಂಗಳ ಅವಧಿಯಲ್ಲಿ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಿ ಹಣ ಬಳಕೆ ಪ್ರಮಾಣ ಪತ್ರ ಸಲ್ಲಿಸಿದಂತೆ ಉಳಿದ ಅನುದಾನವನ್ನು ಬಿಡುಗಡೆ ಮಾಡಲು ಸಿದ್ಧ. ಎಂದು ಉತ್ತರಿಸಿದರು.

ನಂಜುಂಡಪ್ಪ ವರದಿ ಅನುಷ್ಠಾನ
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಅನುದಾನದಲ್ಲಿ ನಗರ ಪ್ರದೇಶಗಳಿಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಕೆಲವು ಶಾಸಕರು ತಿಳಿಸಿದ್ದು, ಇದನ್ನು ಸರಿಪಡಿಸಲಾಗುವುದು. ನಂಜುಂಡಪ್ಪ ವರದಿ ಅನುಷ್ಟಾನದ ಬಳಿಕ ಆ ಭಾಗದಲ್ಲಿ ಉಂಟಾಗಿರುವ ಅಭಿವೃದ್ಧಿಗಳನ್ನು ಪರಿಶೀಲಿಸಿ, ಇನ್ನೂ ಅಭಿವೃದ್ಧಿ ಹೊಂದಬೇಕಾದ ಪ್ರದೇಶಗಳಿಗೆ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಹೈ-ಕರ್ನಾಟಕ ಹೊಸ ಕಾಲೇಜುಗಳ ಸ್ಥಾಪನೆ
ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಅವರು ಆ ಭಾಗದಲ್ಲಿ ಹಲವಾರು ಹುದ್ದೆಗಳು ಖಾಲಿಯಿರುವುದಾಗಿ ಪ್ರಸ್ತಾಪಿಸಿದರು. ಅಗತ್ಯ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಮುಂದಿನ ವರ್ಷದ ಬಜೆಟ್ನಲ್ಲಿ ಈ ಭಾಗದಲ್ಲಿ ಶಾಲೆ, ಪಿಯು ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಹೆಚ್ಚಿನ ಅನುದಾನನವನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಅವರು ಭರವಸೆ ನೀಡಿದರು.

2013 ರಿಂದ 3039 ಕೋಟಿ ಹೈ-ಕ ಭಾಗದ ರಸ್ತೆಗಳಿಗಾಗಿ ವೆಚ್ಚ
ಲೋಕೋಪಯೋಗಿ ಇಲಾಖೆ ವತಿಯಿಂದ 2013ರಿಂದ 2018ರ ಮಾರ್ಚ್ವರೆಗೆ ರಸ್ತೆ ಕಾಮಗಾರಿಗಳಿಗೆ ಉತ್ತರ ಮತ್ತು ಈಶಾನ್ಯ ವಲಯಗಳಿಗೆ ಒಟ್ಟು 14369 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ನವೆಂಬರ್ ಅಂತ್ಯದವರೆಗೆ 3039ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರಸ್ತುತ ಸಾಲಿನಲ್ಲಿ ಬಜೆಟ್ನಲ್ಲಿ 1375ಕೋಟಿ ರೂ. ಒದಗಿಸಲಾಗಿದ್ದರೂ, ಈಗಾಗಲೇ 3173 ಕೋಟಿ ರೂ.ಗಳಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಅವರು ಹೇಳಿದರು.

ಹೈ-ಕ ಅಭಿವೃದ್ಧಿ ಮಂಡಳಿ ಸದಸ್ಯರು ಭಾಗಿ
ಉಪಮುಖ್ಯಮಂತ್ರಿ ಡಾ.ಪರಮೇಶ್ವರ್, ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ ಪಾಟೀಲ್, ಸಚಿವರಾದ ಪ್ರಿಯಾಂಕ ಖರ್ಗೆ, ಹೆಚ್.ಡಿ.ರೇವಣ್ಣ, ಡಿ.ಕೆ.ಶಿವಕುಮಾರ್, ಬಂಡೆಪ್ಪ ಖಾಶೆಂಪುರ, ಆರ್.ಶಂಕರ್, ವೆಂಕಟರಾವ್ ನಾಡಗೌಡ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ್, ಹೈದರಾಬಾದ್ ಕರ್ನಾಟಕ ಭಾಗದ ಎಲ್ಲಾ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications