ಲಖನ್ ಜಾರಕಿಹೊಳಿ ಬಿಜೆಪಿಗೆ, ಸತೀಶ್ ಜಾರಕಿಹೊಳಿ ವಿರುದ್ಧ ಸ್ಪರ್ಧೆ?
ಬೆಳಗಾವಿ, ಮಾರ್ಚ್ 16 : ಬೆಳಗಾವಿ ಜಿಲ್ಲೆಯ ಚುನಾವಣಾ ಕಣ ಕುತೂಹಲಕ್ಕೆ ಕಾರಣವಾಗಿದೆ. ಯಮನಕರಡಿ ಕ್ಷೇತ್ರದಲ್ಲಿ ಸಹೋದರದ ನಡುವೆ ಮುಖಾಮುಖಿ ಸ್ಪರ್ಧೆ ನಡೆಯುವ ಸಾಧ್ಯತೆ ಇದೆ. ಲಖನ್ ಜಾರಕಿಹೊಳಿ ಬಿಜೆಪಿ ಕಡೆ ಮುಖ ಮಾಡಿದ್ದಾರೆ.
ಸತೀಶ್ ಜಾರಕಿಹೊಳಿ ಅವರಿಗೆ ಯಮನಕರಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಖಾತರಿಯಾಗಿದೆ. ಆದ್ದರಿಂದ, ಟಿಕೆಟ್ ಆಕಾಂಕ್ಷಿಯಾಗಿದ್ದ ಲಖನ್ ಜಾರಕಿಹೊಳಿ ಬಿಜೆಪಿ ಸೇರಲು ಮುಂದಾಗಿದ್ದು, ಸಹೋದರ ವಿರುದ್ಧ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ.
ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ ಲಖನ್ ಜಾರಕಿಹೊಳಿ
ಲಖನ್ ಜಾರಕಿಹೊಳಿ ಅವರು ಬಿಜೆಪಿಗೆ ಸೇರಲು ಮಾಜಿ ಸಚಿವ ಉಮೇಶ್ ಕತ್ತಿ ಅವರು ಮಧ್ಯಸ್ಥಿಕೆ ವಹಿಸಿದ್ದಾರೆ. ಡಿಸಿಸಿ ಬ್ಯಾಂಕ್ ರಾಜಕಾರಣ ಈ ಬೆಳವಣಿಗೆ ಹಿಂದೆ ಕೆಲಸ ಮಾಡಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನ ಪಡೆಯಲು ರಮೇಶ್ ಕತ್ತಿಗೆ ಜಾರಕಿಹೊಳಿ ಸಹೋದರರು ಸಹಾಯ ಮಾಡಿದ್ದರು.
ಜಾರಕಿಹೊಳಿ ಅವರ ಕುಟುಂಬದಲ್ಲಿ ಸತೀಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ರಮೇಶ್ ಜಾರಕಿಹೊಳಿ ಅವರು ಶಾಸಕರು. ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ಕ್ಷೇತ್ರದ ಶಾಸಕರಾಗಿದ್ದು, ಅವರು ಬಿಜೆಪಿ ಪಕ್ಷದಲ್ಲಿದ್ದಾರೆ.
ಬೆಳಗಾವಿಯಲ್ಲಿ ಕಾಂಗ್ರೆಸ್ ಗೆಲ್ಲಿಸಲು 'ಮಿಷನ್ 12' ತಂತ್ರ!
ಸತೀಶ್ ಜಾರಕಿಹೊಳಿ ಯಮನಕರಡಿ ಕ್ಷೇತ್ರದ ಶಾಸಕರು. ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದರು. ಸಂಪುಟ ಪುನಾರಚನೆ ಮಾಡುವಾಗ ಅವರನ್ನು ಕೈ ಬಿಟ್ಟು, ಗೋಕಾಕ ಕ್ಷೇತ್ರದ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಸಿದ್ದರಾಮಯ್ಯ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ.
ಲಖನ್ ಜಾರಕಿಹೊಳಿ ಸೇರ್ಪಡೆ ಬಗ್ಗೆ ಜಿಲ್ಲಾ ಬಿಜೆಪಿ ನಾಯಕರ ಜೊತೆ ಚರ್ಚೆ ನಡೆಸಿಲ್ಲ. ಹಿಂದೆ ಬಾಲಚಂದ್ರ ಜಾರಕಿಹೊಳಿ ಅವರು ಜೆಡಿಎಸ್ನಿಂದ ಬಿಜೆಪಿ ಸೇರುವಾಗಲೂ ಜಿಲ್ಲಾ ನಾಯಕರ ಜೊತೆ ಚರ್ಚೆ ನಡೆಸಿರಲಿಲ್ಲ.
ಸಿದ್ದರಾಮಯ್ಯ ವಿರುದ್ಧ ಸತೀಶ್ ಜಾರಕಿಹೊಳಿ ಗರಂ!
2017ರಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿಯೇ ರಮೇಶ್ ಜಾರಕಿಹೊಳಿ ಅವರು ಯಮನಕರಡಿ ಕ್ಷೇತ್ರವನ್ನು ಬಿಟ್ಟುಕೊಡುವಂತೆ ಸತೀಶ್ ಜಾರಕಿಹೊಳಿ ಅವರಿಗೆ ಹೇಳಿದ್ದರು. ಲಖನ್ ಜಾರಕಿಹೊಳಿ ಅಲ್ಲಿಂದ ಸ್ಪರ್ಧಿಸಲಿ ಎಂದು ತಿಳಿಸಿದ್ದರು.
ಆದರೆ, ಸತೀಶ್ ಜಾರಕಿಹೊಳಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಈಗ ಲಖನ್ ಜಾರಕಿಹೊಳಿ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದ್ದು, ಬಿಜೆಪಿ ಸೇರುವ ಸಿದ್ಧತೆಯಲ್ಲಿದ್ದಾರೆ.