ಒಂದಾದ ಜಾರಕಿಹೊಳಿ ಸಹೋದರರು, ಲಖನ್ ಬಿಜೆಪಿ ಸೇರಲ್ಲ!
?ಬೆಳಗಾವಿ, ಏಪ್ರಿಲ್ 04 : ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬೆಳಗಾವಿಯಲ್ಲಿ ಜಾರಕಿಹೊಳಿ ಸಹೋದರರು ಒಂದಾಗಿದ್ದಾರೆ. ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಲು ಹೊರಟಿದ್ದ ಲಖನ್ ಜಾರಕಿಹೊಳಿ ಯೂಟರ್ನ್ ತೆಗೆದುಕೊಂಡಿದ್ದಾರೆ.
ಬುಧವಾರ ಗೋಕಾಕ ತಾಲೂಕಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಿತು. ಸಭೆಯಲ್ಲಿ ಮಾತನಾಡಿದ ಲಖನ್ ಜಾರಕಿಹೊಳಿ ಅವರು, 'ಕಾಂಗ್ರೆಸ್ ಪಕ್ಷ ತ್ಯಜಿಸುವುದಿಲ್ಲ. ಎಲ್ಲಾ ಕಾರ್ಯಕರ್ತರು ಒಗ್ಗಟ್ಟಾಗಿ ಕೆಲಸ ಮಾಡಿ, ರಮೇಶ್ ಜಾರಕಿಹೊಳಿ ಅವರನ್ನು ಗೆಲ್ಲಿಸಬೇಕು' ಎಂದು ಕರೆ ನೀಡಿದರು.
ಯಮಕನಮರಡಿ ಕ್ಷೇತ್ರದಿಂದ ಲಖನ್ ಜಾರಕಿಹೊಳಿ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದರು. ಬಿಜೆಪಿ ಸೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಮತ್ತು ಸಹೋದರ ಸತೀಶ್ ಜಾರಕಿಹೊಳಿ ಅವರ ವಿರುದ್ಧವೇ ಲಖನ್ ಸ್ಪರ್ಧೆ ಮಾಡಲು ತೀರ್ಮಾನಿಸಿದ್ದರು.

ಆದರೆ, ಚುನಾವಣೆ ಹತ್ತಿರವಾದಂತೆ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ. ಕಾಂಗ್ರೆಸ್ ಪಕ್ಷ ತ್ಯಜಿಸುವುದಿಲ್ಲ ಎಂದು ಇಂದು ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿ ಹೆಚ್ಚಿದೆ.
'ನಮ್ಮ ತಂದೆ-ತಾಯಿ ನಿರ್ಮಿಸಿದ ರಾಜ್ಯದಲ್ಲಿ ರಾಜ್ಯಭಾರ ಮಾಡುತ್ತಿದ್ದೇನೆ. ಕಾಂಗ್ರೆಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಒಟ್ಟಾಗಿ ರಮೇಶ್ ಜಾರಕಿಹೊಳಿ ಅವರನ್ನು 50 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು' ಎಂದು ಕರೆ ನೀಡಿದರು.
'ಜಾರಕಿಹೊಳಿ ಕುಟುಂಬ ಪಕ್ಷಾತೀತವಾಗಿದೆ. ವಿರೋಧಿಗಳ ಮಾತಿಗೆ ಜನರ ಕಿವಿಗೊಡಬಾರದು. ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಶ್ರಮಿಸಬೇಕು' ಎಂದು ಲಖನ್ ಜಾರಕಿಹೊಳಿ ಕರೆ ನೀಡಿದರು.
ಜಾರಕಿಹೊಳಿ ಕುಟುಂಬದಲ್ಲಿ ಮೂವರು ಶಾಸಕರಿದ್ದಾರೆ. ಕುಟುಂಬ ರಾಜಕೀಯವಾಗಿ ಭಾರೀ ಪ್ರಭಾವವನ್ನು ಹೊಂದಿದೆ.
ರಮೇಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಸಂಪುಟದಲ್ಲಿ ಸಣ್ಣ ಕೈಗಾರಿಕೆ ಖಾತೆ ಸಚಿವರು (ಗೋಕಾಕ ಕ್ಷೇತ್ರದ ಶಾಸಕ). ಸತೀಶ್ ಜಾರಕಿಹೊಳಿ ಅವರು ಯಮಕನಮರಡಿ ಕ್ಷೇತ್ರದ ಶಾಸಕರು, ಮಾಜಿ ಸಚಿವರು ಮತ್ತು ಎಐಸಿಸಿ ಕಾರ್ಯದರ್ಶಿಗಳು.
ಬಾಲಚಂದ್ರ ಜಾರಕಿಹೊಳಿ ಅವರು ಬಿಜೆಪಿ ಪಕ್ಷದಲ್ಲಿದ್ದಾರೆ. ಅರಭಾವಿ ಕ್ಷೇತ್ರದ ಶಾಸಕರಾಗಿದ್ದಾರೆ. ಲಖನ್ ಜಾರಕಿಹೊಳಿ ಅವರು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದರು.












Click it and Unblock the Notifications