ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ತೆರವು; ಬೆಳ್ಳಂಬೆಳಿಗ್ಗೆ ಸ್ಥಳೀಯರಿಂದ ಪ್ರತಿಭಟನೆ
ಬೆಳಗಾವಿ, ಆಗಸ್ಟ್ 15: ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮದಿನ. ಆದರೆ ಪ್ರತಿಷ್ಠಾಪಿಸಲಾಗಿದ್ದ ಕ್ರಾಂತಿಕಾರಿ ಪುರುಷನ ಪ್ರತಿಮೆಯನ್ನೇ ಬೆಳಗಿನ ಜಾವ ತೆರವುಗೊಳಿಸಿರುವ ಘಟನೆ ಬೆಳಗಾವಿಯ ಪೀರನವಾಡಿಯಲ್ಲಿ ನಡೆದಿದೆ.
ಸ್ಥಳೀಯರು ಪೀರನವಾಡಿ ಗ್ರಾಮದ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದರು. ಆದರೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಇಂದು ಬೆಳಗಿನ ಜಾವ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಪೊಲೀಸರು ತೆರವುಗೊಳಿಸಿದ್ದಾರೆ.
ಪೊಲೀಸರ ಕ್ರಮ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಬೃಹತ್ ಪ್ರತಿಭಟನೆಗೆ ಮುಂದಾದರು. ಪ್ರತಿಭಟನಾ ನಿರತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಅಲ್ಲದೇ 15ಕ್ಕೂ ಅಧಿಕ ಕನ್ನಡ ಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಪೀರನವಾಡಿಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಬೆಳಗಾವಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಳಗಾವಿ ಪೊಲೀಸ್ ಆಯುಕ್ತ ಏನಂದ್ರು?: ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ವಿವಾದಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗ್ಗೆ 5.15ರ ಸುಮಾರಿಗೆ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾಪನೆಗೆ ಕೆಲವರು ಯತ್ನಿಸಿದ್ದರು. ಮೂರ್ತಿ ಪ್ರತಿಷ್ಠಾಪಿಸಬೇಕಾದರೂ ಅನುಮತಿ ಪಡೆಯಬೇಕು. ಅನುಮತಿ ಇಲ್ಲದೇ ಮೂರ್ತಿ ಪ್ರತಿಷ್ಠಾಪಿಸುವುದು ನ್ಯಾಯಾಂಗ ನಿಂದನೆ ಆಗುತ್ತದೆ. ಅನುಮತಿ ಪಡೆದು ಪುತ್ಥಳಿ ನಿರ್ಮಿಸುವಂತೆ ನಮ್ಮ ಸಿಬ್ಬಂದಿ ಯುವಕರಿಗೆ ಮನವರಿಕೆ ಮಾಡಿದ್ದಾರೆ. ಮೂರ್ತಿ ಪ್ರತಿಷ್ಠಾಪನೆ ಮಾಡಲು ಯತ್ನಿಸಿದವರನ್ನು ವಶಕ್ಕೆ ಪಡೆದು ಬಿಡುಗಡೆ ಮಾಡಲಾಗಿದೆ ಎಂದರು.












Click it and Unblock the Notifications