ಲೋಕಸಭೆ ಚುನಾವಣೆ: ನೀತಿ ಸಂಹಿತೆ ಬಗ್ಗೆ ಕಠಿಣ ಸೂಚನೆ
ಬೆಳಗಾವಿ, ಮಾರ್ಚ್ 01: ಕೇಂದ್ರ ಚುನಾವಣಾ ಆಯೋಗ 2024ರ ಲೋಕಸಭೆ ಚುನಾವಣೆಯ ವೇಳಾಪಟ್ಟಿ ಘೋಷಣೆಗೆ ಸಿದ್ಧತೆ ನಡೆಸುತ್ತಿದೆ. ವೇಳಾಪಟ್ಟಿ ಪ್ರಕಟವಾಗುತ್ತಿದ್ದಂತೆಯೇ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ, ಕುರಿತು ಈಗಾಗಲೇ ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ/ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಗುತ್ತಿದೆ.
ಚುನಾವಣೆಯನ್ನು ನ್ಯಾಯ ಸಮ್ಮತವಾಗಿ ಮಾಡಬೇಕು. ಚುನಾವಣಾ ಆಯೋಗವು ಸೂಚಿಸಿದ ನಿಯಮಗಳ ಪಾಲನೆ ಆಗಬೇಕು. ಈ ಸಂದರ್ಭದಲ್ಲಿ ನೀತಿ ಸಂಹಿತೆಯ ಉಲ್ಲಂಘನೆ ಮಾಡಿದಲ್ಲಿ ಕಠಿಣ ಕ್ರಮಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಚಿಕ್ಕೋಡಿ ಲೋಕಸಭೆ ಕ್ಷೇತ್ರ ಚುನಾವಣಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ ಹೇಳಿದ್ದಾರೆ.

ಚಿಕ್ಕೋಡಿ ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಕುರಿತು ಅಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. "ಸಮುದಾಯಗಳ ನಡುವೆ, ಧಾರ್ಮಿಕ ಅಥವಾ ಭಾಷಿಕ ನಡುವೆ ಉದ್ವಿಗ್ನತೆ ಉಂಟುಮಾಡುವ ಯಾವುದೇ ಚಟುವಟಿಕೆಗೆ ಅವಕಾಶ ನೀಡಬಾರದು" ಎಂದರು.
"ಲೋಕಸಭೆ ಚುನಾವಣೆಯಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮ ರೀತಿಯಲ್ಲಿ ಕೆಲಸ ಮಾಡುವ ಮೂಲಕ ಚುನಾವಣೆ ಯಶಸ್ವಿಗೊಳಿಸಬೇಕು. ಚುನಾವಣಾ ಆಯೋಗ ಕಾಲ ಕಾಲಕ್ಕೆ ನೀಡುವ ಸೂಚನೆಗಳನ್ನು ಪಾಲಿಸಬೇಕು" ಎಂದು ಸೂಚನೆ ನೀಡಿದರು.
ವಿಶೇಷ ಜಿಲ್ಲಾಧಿಕಾರಿ ಗೀತಾ ಕೌಲಗಿ ಮಾತನಾಡಿ, "ಭಾರತ ಹೊರತುಪಡಿಸಿ ವಿಶ್ವದ ಯಾವುದೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿಯೂ ಮಾದರಿ ನೀತಿ ಸಂಹಿತೆ ಪರಿಕಲ್ಪನೆ ಇಲ್ಲ. 1960 ಕೇರಳ ವಿಧಾನಸಭೆ ಚುನಾವಣೆಯಲ್ಲಿ ಚುನಾವಣಾ ಆಯೋಗವು ಮೊದಲ ಬಾರಿಗೆ ಮಾದರಿ ನೀತಿ ಸಂಹಿತೆ ಜಾರಿ ಮಾಡಿತು" ಎಂದು ಹೇಳಿದರು.
"ಚುನಾವಣೆಗೆ ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು, ಆಯಾ ಪಕ್ಷಗಳು ಯಾವ ರೀತಿ ನಡೆದುಕೊಳ್ಳಬೇಕು. ಯಾವ ರೀತಿ ಪ್ರಚಾರ ಕೈಗೊಳ್ಳಬೇಕು. ಅಭ್ಯರ್ಥಿಗಳು ಹಾಗೂ ಮತದಾರರು ಏನು ಮಾಡಬಾರದು?. ಯಾವ ವಿಚಾರವನ್ನು ಗಮನದಲ್ಲಿಡಬೇಕು ಎಂಬುದರ ಬಗ್ಗೆ ತರಬೇತಿ ನೀಡಲಾಗುತ್ತದೆ. ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾಗಿ ತರಬೇತಿ ಪಡೆದು ತಮ್ಮ ಕರ್ತವ್ಯ ಮಾಡಬೇಕು" ಎಂದು ಕರೆ ನೀಡಿದರು.
ಎರಡು ಲೋಕಸಭಾ ಕ್ಷೇತ್ರಗಳು: ಬೆಳಗಾವಿ ಜಿಲ್ಲೆಯಲ್ಲಿ ಎರಡು ಲೋಕಸಭಾ ಕ್ಷೇತ್ರಗಳಿವೆ. ಬೆಳಗಾವಿ ಮತ್ತು ಚಿಕ್ಕೋಡಿ ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ ತಯಾರಿ ನಡೆಯುತ್ತಿದೆ. ಚುನಾವಣಾ ಕಾರ್ಯದಲ್ಲಿ ಪಾಲ್ಗೊಳ್ಳುವ ಅಧಿಕಾರಿ/ ಸಿಬ್ಬಂದಿಗಳನ್ನು ಈಗಾಗಲೇ ಆಯ್ಕೆ ಮಾಡಲಾಗಿದ್ದು, ಅವರಿಗೆ ತರಬೇತಿಯನ್ನು ನೀಡಲಾಗುತ್ತಿದೆ.
ಅಧಿಕಾರಿ/ ಸಿಬ್ಬಂದಿಗಳಿಗೆ ಮತಗಟ್ಟೆಗಳನ್ನು ಸರಿಯಾಗಿ ಪರಿಶೀಲನೆ ಮಾಡಬೇಕು. ಒಂದು ವೇಳೆ ದುರಸ್ತಿ ಇದ್ದಲ್ಲಿ ಸರಿಪಡಿಸಿಕೊಳ್ಳಬೇಕು. ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳ ಕಡೆಗೆ ಹೆಚ್ಚು ಗಮನಹರಿಸಬೇಕು ಎಂದು ಸೂಚನೆಯನ್ನು ನೀಡಲಾಗಿದೆ.
ಮತಗಟ್ಟೆ ಅಧಿಕಾರಿಗಳಿಗೆ ಪ್ರಾತ್ಯಾಕ್ಷಿಕೆ ಮೂಲಕ ತರಬೇತಿ ನೀಡಲಾಗುತ್ತಿದೆ. ಮತದಾರರು ಹೆಚ್ಚು ಮತದಾನ ಮಾಡುವ ನಿಟ್ಟಿನಲ್ಲಿ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿ ಉತ್ತಮ ರೀತಿಯಲ್ಲಿ ಕೆಲಸ ಮಾಡಬೇಕು. ತಂಡವಾಗಿ ಕೆಲಸ ಮಾಡುವ ಮೂಲಕ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಕರೆ ಕೊಡಲಾಗಿದೆ.
ಮಾರ್ಚ್ 10ರ ಬಳಿಕ ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಲಿದೆ. ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ. ಮತ ಎಣಿಕೆ ನಡೆದು, ಫಲಿತಾಂಶ ಪ್ರಕಟವಾಗುವ ತನಕ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಸರ್ಕಾರ ಅಧಿಕಾರಿಗಳ ವರ್ಗಾವಣೆ ಮಾಡಲು ಸಹ ಚುನಾವಣಾ ಆಯೋಗದಿಂದ ಅನುಮತಿಯನ್ನು ಪಡೆಯಬೇಕಿದೆ.












Click it and Unblock the Notifications