ಬಾಣಂತಿಯರ ಸಾವು ಪ್ರತಿ ವರ್ಷ ಕಾಮನ್: ವಿವಾದ ಸೃಷ್ಟಿಸಿದ ಆರೋಗ್ಯ ಸಚಿವರ ಹೇಳಿಕೆ
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣವು ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಇದೇ ಮಾದರಿಯಲ್ಲಿ ಬೆಳಗಾವಿಯಲ್ಲೂ ನಡೆದಿದೆ ಎನ್ನಲಾಗಿದ್ದು, ಎಲ್ಲೆಡೆ ಆತಂಕ ಶುರುವಾಗಿದೆ. ಇನ್ನು ಈ ಸರಣಿ ಸಾವಿನ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೀಡಿರುವ ಹೇಳಿಕೆ ಈಗ ವಿವಾದಕ್ಕೆ ಕಾರಣವಾಗಿದೆ.
ಇಂದು ಬೆಳಗಾವಿ ಅಧಿವೇಶನಕ್ಕೆ ಬಂದಿರುವ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಸಾವು ಪ್ರಕರಣಗಳ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಆಸ್ಪತ್ರೆಗಳಲ್ಲಿ ಪ್ರತಿ ವರ್ಷ ಬಾಣಂತಿಯರ ಸಾವಾಗುತ್ತವೆ. ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಇದ್ದೇ ಇರುತ್ತೆ. ಅದನ್ನ ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು ಎಂದು ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಬಾಣಂತಿಯರ ಸಾವಿಗೆ ವೈದ್ಯಕೀಯ ಕಾರಣ ಎನ್ನಲು ಸಾಧ್ಯವಿಲ್ಲ. ಈ ಸಾವುಗಳ ಹಿಂದಿನ ಸತ್ಯಾಂಶಗಳನ್ನು ನಾವು ಚರ್ಚಿಸುತ್ತೇವೆ. ಆದರೆ ಇದನ್ನೇ ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ಸರಿಯಲ್ಲ. ಈ ಸಾವು ಪ್ರಕರಣಗಳಿಗೆ ಅಧಿವೇಶನದಲ್ಲಿ ಉತ್ತರ ಕೊಡುತ್ತೇವೆ. ವ್ಯವಸ್ಥೆಗಳನ್ನ ಸರಿಪಡಿಸುತ್ತಿದ್ದೇವೆ. ಸರ್ಕಾರ ಮೆಡಿಕಲ್ ಮಾಫಿಯಾಗೆ ಸಿಲುಕಿದೆಯಾ ಎಂಬ ವಿಚಾರವಾಗಿ, ಆರೋಗ್ಯ ಇಲಾಖೆ ಬಗ್ಗೆಯೂ ಮಾತನಾಡುತ್ತೇವೆ. ಬಳ್ಳಾರಿ ಆಸ್ಪತ್ರೆಯ ಕೇಸ್ ನಂತರ ಸರ್ಕಾರ ಎಚ್ಚೆತ್ತುಕೊಂಡಿದೆ. ಇದನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ದಿನೇಶ್ ಹೇಳಿದ್ದಾರೆ.
ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೊರತೆ ಸಂಬಂಧವೂ ಅವರು ಮಾತನಾಡಿದ್ದಾರೆ. ಶೀಘ್ರದಲ್ಲೇ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಆಸ್ಪತ್ರೆಗಳಲ್ಲಿ ಅರೆ ವೈದ್ಯಕೀಯ ಸಿಬ್ಬಂದಿಯ ಕೊರತೆಯೂ ಇದ್ದು ಈ ನೇಮಕಾತಿ ಕೂಡ ನಡೆಯಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕಾಂಗ್ರೆಸ್ ವೈರಸ್ನಿಂದ ಮುಕ್ತವಾಗಬೇಕು: ಅಶೋಕ್
ಬಾಣಂತಿಯರ ಸಾವು ಪ್ರಕರಣ ಸಂಬಂಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ವಿಪಕ್ಷ ನಾಯಕ ಆರ್.ಅಶೋಕ್, ಅಧಿಕಾರಕ್ಕೆ ಬಂದರೆ ಎನ್ಎಚ್ಎಂ ಅಡಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ಹಾಗು ನೌಕರರನ್ನ ಖಾಯಂ ಮಾಡುತ್ತೇವೆ ಎಂದು ಸುಳ್ಳು ಆಶ್ವಾಸನೆ ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಅವರಿಗೆ ವಿಶ್ವಾಸ ದ್ರೋಹ ಬಗೆದಿದೆ ಎಂದು ಕಿಡಿಕಾರಿದ್ದಾರೆ.

ಒಂದು ಕಡೆ ಆರೋಗ್ಯ ಇಲಾಖೆಯಲ್ಲಿ 35,196 ಹುದ್ದೆಗಳು ಖಾಲಿ ಇವೆ. ಮತ್ತೊಂದು ಕಡೆ ಖಾಯಂ ಹುದ್ದೆ ಬೇಡಿಕೆಗಾಗಿ 30,000 ಗುತ್ತಿಗೆ ವೈದ್ಯರು, ನೌಕರರು ಮುಷ್ಕರಕ್ಕೆ ಸಜ್ಜಾಗುತ್ತಿದ್ದಾರೆ. ಕೊರೊನಾ ವೈರಸ್ನಿಂದ ಬಚಾವಾದ ಕರ್ನಾಟಕದ ಜನತೆ, ಈಗ ಕಾಂಗ್ರೆಸ್ ವೈರಸ್ನಿಂದ ಮುಕ್ತವಾಗಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಇನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ತವರು ಜಿಲ್ಲೆ ಬೆಳಗಾವಿಯಲ್ಲೂ ಬಾಣಂತಿಯರು ಹಾಗೂ ನವಜಾತ ಶಿಶುಗಳ ಮರಣವಾಗಿರುವ ವಿಚಾರ ಬೆಳಕಿಗೆ ಬಂದಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವುಗಳ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಕಳೆದ 6 ತಿಂಗಳಲ್ಲೇ 29 ಬಾಣಂತಿಯರು ಹಾಗೂ 1 ವರ್ಷದಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿರುವುದು ದುಃಖ ತರಿಸಿದೆ. ಈ ಹಿಂದಿನ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ದೇಶಕ್ಕೆ ಮಾದರಿಯಾಗಿದ್ದ ಆರೋಗ್ಯ ಇಲಾಖೆಯನ್ನು ಸಂಪೂರ್ಣ ಕಡೆಗಣಿಸಿರುವ ಕಾಂಗ್ರೆಸ್ ಸರ್ಕಾರದ ಬೇಜವಾಬ್ದಾರಿ ದುರಾಡಳಿತದಲ್ಲಿ ಇಲಾಖೆಯ ಅಕ್ರಮ, ಭ್ರಷ್ಟಾಚಾರಗಳು ಲೋಕಾಯುಕ್ತ ದಾಳಿಯಿಂದ ಬಯಲಾಗುತ್ತಿವೆ ಎಂದು ದೂರಿದ್ದಾರೆ.
ನಿರಂತರವಾಗಿ ಬಡಕುಟುಂಬಗಳ ತಾಯಂದಿರು ಹಾಗೂ ಹಸುಗೂಸುಗಳ ಸಾವು ನೋವುಗಳಾಗುತ್ತಿದ್ದರೂ, ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆ ನಡೆಸಿದರೂ ಎಚ್ಚೆತ್ತುಕೊಂಡು ಘಟನೆಯ ಕುರಿತು ಕಠಿಣ ಕ್ರಮ ಕೈಗೊಳ್ಳಲು ತಾತ್ಸಾರ ಧೋರಣೆ ತಾಳಿರುವ ಕಾಂಗ್ರೆಸ್ ಸರ್ಕಾರಕ್ಕೆ ಜನಸಾಮಾನ್ಯರು, ಬಡವರು ತಕ್ಕಪಾಠ ಕಲಿಸಲೇಬೇಕಿದೆ ಎಂದಿದ್ದಾರೆ.












Click it and Unblock the Notifications