ರಾಜ್ಯದಲ್ಲಿ 24×7 ಪ್ರಾಥಮಿಕ ಆರೋಗ್ಯ ಕೇಂದ್ರ: ಆರೋಗ್ಯ ಸಚಿವ ಕೆ.ಸುಧಾಕರ್
ಬೆಳಗಾವಿ, ನವೆಂಬರ್ 22: ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24×7 ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್)ಯ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿ, ಜನವರಿಯಿಂದ ಎಲ್ಲ ರೀತಿಯ ಪರೀಕ್ಷೆಯನ್ನು ಸಂಪೂರ್ಣ ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ. ಸಿಟಿ ಸ್ಕ್ಯಾನ್, ರಕ್ತ ಪರೀಕ್ಷೆಗಳು ಎಲ್ಲವೂ ಉಚಿತವಾಗಿ ಮಾಡಲಾಗುವುದು ಎಂದು ಹೇಳಿದರು.
ಚೀಟಿ ರಹಿತ ವ್ಯವಸ್ಥೆಯನ್ನು ಜಾರಿಗೆ ತರಲು ಎಲ್ಲ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ. ಯಾವುದೇ ಔಷಧಿ ಅಗತ್ಯವಿದ್ದರೂ ಸರ್ಕಾರ ಪೂರೈಸುತ್ತಿದೆ ಎಂದ ಸಚಿವರು, ಮಾದರಿ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ, ಜನಸಂಖ್ಯೆ ಅಧರಿಸಿ ಹೆಚ್ಚುವರಿ ಪಿ.ಎಚ್.ಸಿ ಆರಂಭ, ಆಂಬ್ಯುಲೆನ್ಸ್ ಸೇವೆ ಬಲವರ್ಧನೆ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಆತ್ಮಾವಲೋಕನ ಅಗತ್ಯ
ಖಾಸಗಿ ಆಸ್ಪತ್ರೆಗಳಿಗಿಂತ ಸರ್ಕಾರ ಹೆಚ್ಚು ಹಣ ಖರ್ಚು ಮಾಡುತ್ತದೆ. ಆದಾಗ್ಯೂ ಜನರಿಗೆ ಯಾಕೆ ಉತ್ತಮ ಸೌಕರ್ಯಗಳು ಸಿಗುತ್ತಿಲ್ಲ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದ ಸಚಿವ ಡಾ.ಸುಧಾಕರ್, ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿದರೆ ಖಾಸಗಿ ಆಸ್ಪತ್ರೆಗಿಂತ ಉತ್ತಮ ಸೇವೆ ನೀಡುವುದು ಸಾಧ್ಯವಾಗಲಿದೆ. ಎಲ್ಲ ಹಂತದ ವೈದ್ಯಕೀಯ ಅಧಿಕಾರಿ ಹಾಗೂ ಸಿಬ್ಬಂದಿಯ ಕೌಶಲ್ಯ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ ತರಬೇತಿ ನೀಡಲಾಗುವುದು ಎಂದರು. ಶುಚಿತ್ವ ಇರುವುದಿಲ್ಲ ಎಂಬ ದೊಡ್ಡ ಆರೋಪ ಸರ್ಕಾರಿ ಆಸ್ಪತ್ರೆಗಳ ಮೇಲಿದೆ. ವಿಷಯ ಪರಿಣಿತಿ ಜತೆಗೆ ಆಡಳಿತಾತ್ಮಕ ಕೌಶಲ್ಯವನ್ನು ವೈದ್ಯರು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೋವಿಡ್-19 ಕೂಡ ಒಂದು ಪಾಠ ಕಲಿಸಿದೆ
ಕೋವಿಡ್ ಸಂದರ್ಭದಲ್ಲಿ ಎದುರಾದ ಆಕ್ಸಿಜನ್ ಕೊರತೆ ಹಿನ್ನೆಲೆಯಲ್ಲಿ ಎಲ್ಲ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಘಟಕ ಆರಂಭಿಸಲಾಗುತ್ತಿದೆ. ವೈದ್ಯಕೀಯ ಸೌಲಭ್ಯ ಹೆಚ್ಚಿಸಲು ಕೋವಿಡ್-19 ಕೂಡ ಒಂದು ಪಾಠ ಕಲಿಸಿದಂತಾಗಿದೆ ಎಂದು ತಿಳಿಸಿದರು. ಬೆಳಗಾವಿಯಲ್ಲಿ ಸುಮಾರು 7 ಕೋಟಿ ರುಪಾಯಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ 350 ಹಾಸಿಗೆಗಳ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಶೀಘ್ರ ಲೋಕಾರ್ಪಣೆಯಾಗಲಿದೆ ಎಂದು ಮಾಹಿತಿ ನೀಡಿದರು.

ಸದ್ಯಕ್ಕೆ 400 ಸಕ್ರಿಯ ಪ್ರಕರಣಗಳಿವೆ
ಆರಂಭದ ದಿನಗಳಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಅತೀ ಹೆಚ್ಚು ಕಂಡುಬಂದವು. ಸ್ಥಳೀಯ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಜನರ ಸಹಕಾರದಿಂದ ನಿಯಂತ್ರಣದಲ್ಲಿ ಯಶಸ್ಸು ಸಾಧಿಸಲಾಗಿದೆ. ಸದ್ಯ ಜಿಲ್ಲೆಯಲ್ಲಿ ಶೇ.97 ಸರಾಸರಿ ಗುಣಮುಖರಾಗುತ್ತಿದ್ದಾರೆ. 25,390 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸದ್ಯಕ್ಕೆ 400 ಸಕ್ರಿಯ ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕಳೆದ ಹದಿನೈದು ದಿನಗಳಲ್ಲಿ 0.8% ಸಾವಿನ ಪ್ರಮಾಣವಿದೆ. ಕೋವಿಡ್-19 ನಿಯಂತ್ರಣದಲ್ಲಿ ಬೆಳಗಾವಿ ಜಿಲ್ಲೆ ಮಾದರಿಯಾಗಿದೆ. ಅದಕ್ಕಾಗಿ ಜಿಲ್ಲಾಧಿಕಾರಿಗಳಿಗೆ ಆರೋಗ್ಯ ಸಚಿವರು ಅಭಿನಂದನೆ ಸಲ್ಲಿಸಿದರು. ಔಟ್ ಲುಕ್ ಸಮೀಕ್ಷೆ ಪ್ರಕಾರ ಉತ್ತಮವಾಗಿರುವ ವೈದ್ಯಕೀಯ ಕಾಲೇಜುಗಳಲ್ಲಿ ಬಿಮ್ಸ್ ಕೂಡ ಇದೆ ಎಂದರು.

ಆರೋಗ್ಯ-ವೈದ್ಯಕೀಯ ಶಿಕ್ಷಣ ವಿಲೀನ
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳನ್ನು ಮುಂಬರುವ ದಿನಗಳಲ್ಲಿ ವಿಲೀನಗೊಳಿಸಿ ಒಂದೇ ಇಲಾಖೆ ರೂಪಿಸುವ ಚಿಂತನೆ ಸರ್ಕಾರಕ್ಕಿದೆ ಎಂದು ಸಚಿವ ಡಾ.ಸುಧಾಕರ್ ತಿಳಿಸಿದರು. ಸಾಮಾನ್ಯ ಜನರಿಗೆ ಗುಣಮಟ್ಟದ ಚಿಕಿತ್ಸೆ ಮತ್ತು ಸೌಲಭ್ಯ ಒದಗಿಸಲು ವೈದ್ಯಕೀಯ ಬೋಧಕ-ಬೋಧಕೇತರ ಸಿಬ್ಬಂದಿಗೆ 7ನೇ ವೇತನ ಆಯೋಗದ ಪ್ರಕಾರ ಸಂಬಳ, ಪಿಂಚಣಿ ವ್ಯವಸ್ಥೆ, ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹೆಚ್ಚಳ ಮತ್ತಿತರ ಕೆಲಸಗಳನ್ನು ಸರ್ಕಾರ ಮಾಡಿದೆ ಎಂದರು.

ನಿಸ್ವಾರ್ಥ ಮತ್ತು ಪ್ರಾಮಾಣಿಕ ಸೇವೆ
ಸರ್ಕಾರ ಮೂಲಸೌಕರ್ಯವನ್ನು ಒದಗಿಸಬಹುದು ಆದರೆ ಗುಣಮಟ್ಟದ ಚಿಕಿತ್ಸೆ ನೀಡುವುದು ವೈದ್ಯರ ಜವಾಬ್ದಾರಿಯಾಗಿದೆ. ಕೋವಿಡ್-೧೯ ಸಂದರ್ಭದಲ್ಲಿ ಸರ್ಕಾರಿ ವೈದ್ಯರು ಉತ್ತಮ ಸೇವೆ ಸಲ್ಲಿಸಿದ್ದಾರೆ. ಜನರಲ್ಲಿ ವಿಶ್ವಾಸ ಮೂಡಿಸಬೇಕಾದರೆ ನಿಸ್ವಾರ್ಥ ಮತ್ತು ಪ್ರಾಮಾಣಿಕ ಸೇವೆ ಅಗತ್ಯವಾಗಿದೆ ಎಂದು ಡಾ.ಸುಧಾಕರ್ ಕಿವಿಮಾತು ಹೇಳಿದರು.












Click it and Unblock the Notifications