ವಾರದೊಳಗೆ ಬೆಳೆ ಸಮೀಕ್ಷೆ ಕಾರ್ಯ ಮುಗಿಸುವಂತೆ ಕೃಷಿ ಸಚಿವರ ಸೂಚನೆ
ಬೆಳಗಾವಿ, ಸೆಪ್ಟೆಂಬರ್ 14: ಮುಂದಿನ ಒಂದು ವಾರದಲ್ಲಿ ಬೆಳೆ ಸಮೀಕ್ಷೆ ಕಾರ್ಯವನ್ನು ಪೂರ್ಣಗೊಳಿಸಬೇಕು ಎಂದು ಸಚಿವ ಬಿ.ಸಿ.ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಸುವರ್ಣ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇಂದು ನಡೆದ ಬೆಳಗಾವಿ ವಿಭಾಗ ಮಟ್ಟದ ಬೆಳೆ ಸಮೀಕ್ಷೆ ಕಾರ್ಯ ಮತ್ತು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಂತ್ರಜ್ಞಾನ ಆಧಾರಿತವಾಗಿ ರೈತರೇ ಸ್ವಯಂ ನಡೆಸುವ ಬೆಳೆ ಸಮೀಕ್ಷೆ ಕಾರ್ಯಕ್ಕೆ ಉತ್ತರ ಕರ್ನಾಟಕದಲ್ಲಿ ಇದುವರೆಗೆ ಅತ್ಯುತ್ತಮ ಸ್ಪಂದನೆ ದೊರೆತಿದೆ. ರಾಜ್ಯದಾದ್ಯಂತ 78 ಲಕ್ಷ ರೈತರು ಈಗಾಗಲೇ ಸ್ವತಃ ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಕೆಲವು ಕರಾವಳಿ ಜಿಲ್ಲೆಗಳಲ್ಲಿ ನೆಟ್ ವರ್ಕ್ ಸಮಸ್ಯೆಯಿಂದ ಬೆಳೆ ಸಮೀಕ್ಷೆ ಸ್ವಲ್ಪಮಟ್ಟಿಗೆ ಹಿನ್ನಡೆಯಾಗಿದೆ. ಮುಂಬರಲಿರುವ ದಿನಗಳಲ್ಲಿ ರೈತರೇ ಸ್ವಯಂ ತಮ್ಮ ಬೆಳೆಗಳ ಸಮೀಕ್ಷೆ ಮಾಡಲಿದ್ದಾರೆ. ಬೆಳೆ ಸಮೀಕ್ಷೆ ಆಪ್ ಅನ್ನು ಇಡೀ ದೇಶಕ್ಕೆ ವಿಸ್ತರಣೆ ಮಾಡಲಾಗುವುದು ಎಂದು ಕೇಂದ್ರ ಕೃಷಿ ಸಚಿವರು ಭರವಸೆ ನೀಡಿರುವುದಾಗಿ ತಿಳಿಸಿದರು.

ಬೆಳೆವಿಮೆ ಪಾವತಿ ಕಡ್ಡಾಯಗೊಳಿಸಿ: ರೈತರು ಕೇವಲ ಶೇ.2ರಷ್ಟು ವಿಮೆ ಹಣ ಪಾವತಿಸಬೇಕು. ಉಳಿದ ಶೇ.98 ಸರ್ಕಾರವೇ ಪಾವತಿಸುವುದರಿಂದ ಮುಂಬರುವ ದಿನಗಳಲ್ಲಿ ಪ್ರತಿಯೊಬ್ಬರೂ ಕಡ್ಡಾಯವಾಗಿ ಬೆಳೆ ವಿಮೆ ಪಾವತಿಸುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಪಾಟೀಲ ಸೂಚನೆ ನೀಡಿದರು.
ಜಿಲ್ಲಾವಾರು ಮಳೆ, ಬಿತ್ತನೆ, ಗೊಬ್ಬರ ಪೂರೈಕೆ ಹಾಗೂ ಲಭ್ಯತೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಮಣ್ಣಿನ ಗುಣಮಟ್ಟ ಅರಿತುಕೊಂಡರೆ ಕೃಷಿ ಸಮಸ್ಯೆಗಳನ್ನು ಪರಿಹರಿಸಬಹುದು. ಆದ್ದರಿಂದ ಮಣ್ಣು ಪರೀಕ್ಷೆಗೆ ಆದ್ಯತೆ ನೀಡಬೇಕು ಎಂದು ಸಚಿವ ಬಿ.ಸಿ.ಪಾಟೀಲ ನಿರ್ದೇಶನ ನೀಡಿದರು.
ರೈತರ ಆದಾಯ ದ್ವಿಗುಣಗೊಳಿಸಬೇಕಾದರೆ ರೈತರು ಬಹುಬೆಳೆ ಪದ್ಧತಿಯನ್ನು ಅನುಸರಿಸಲು ಪ್ರೋತ್ಸಾಹಿಸಬೇಕು. ಅದೇ ರೀತಿ ರೈತ ಸಮುದಾಯದಲ್ಲಿ ವೈಜ್ಞಾನಿಕ ಮನೋಭಾವ ರೂಢಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದರು. ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಮುಂದಿನ ವರ್ಷಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು.












Click it and Unblock the Notifications