ಅತಿವೃಷ್ಟಿಗೆ ಗಡಿಜಿಲ್ಲೆ ಬೆಳಗಾವಿಯಲ್ಲಾದ ಹಾನಿ ಎಷ್ಟು?
ಬೆಳಗಾವಿ, ಆಗಸ್ಟ್ 24: ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆಹಾನಿ, ಮನೆ ಹಾನಿ ಹಾಗೂ ಮೂಲಸೌಕರ್ಯಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 972 ಕೋಟಿ ರುಪಾಯಿ ಹಾನಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.
ಈ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದು ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಹಿಡಕಲ್ ಜಲಾಶಯದ ಬಳಿಯ ಸಭಾಭವನದಲ್ಲಿ ಸೋಮವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದಾಗ್ಯೂ ಕೆಲವು ಕಡೆಗಳಲ್ಲಿ ಹೆಚ್ಚಿನ ಮಳೆಯಿಂದ ಉಂಟಾಗಿರುವ ಬೆಳೆಹಾನಿಯ ಜಂಟಿ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನೀರು ಬಿಡುಗಡೆಯ ಬಗ್ಗೆ ಇದೇ ರೀತಿ ನಿರಂತರ ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳಬೇಕು. ದಿಢೀರ್ ನೀರು ಬಿಡುಗಡೆಯಿಂದ ನದಿ ತೀರದ ಗ್ರಾಮಗಳಿಗೆ ತೊಂದರೆಯಾಗುತ್ತದೆ ಎಂದು ತಿಳಿಸಿದರು.
ಈ ಬಾರಿ ಸಮನ್ವಯ ಸಮರ್ಪಕವಾಗಿರುವುದರಿಂದ ಪ್ರವಾಹ ಪರಿಸ್ಥಿತಿ ಉದ್ಭವಿಸದಂತೆ ತಡೆಗಟ್ಟಲು ಸಾಧ್ಯವಾಗಿದೆ ಎಂದರು. ಮಹಾರಾಷ್ಟ್ರದಲ್ಲಿ ಮಳೆಪ್ರಮಾಣ ಹಾಗೂ ಕೊಯ್ನಾ ಜಲಾಶಯದ ಮಾಹಿತಿಯನ್ನು ಸಚಿವ ರಮೇಶ್ ಜಾರಕಿಹೊಳಿ ಪಡೆದುಕೊಂಡರು.

ಮಲಪ್ರಭಾ ನದಿಯಿಂದ ಗೋಕಾಕ್ ಮತ್ತು ರಾಮದುರ್ಗದ ಕೆಲವೆಡೆ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ತಡೆಗೋಡೆ ನಿರ್ಮಿಸುವ ಬಗ್ಗೆ ಚರ್ಚಿಸಿದರು. ಕೆರೆ ತುಂಬಿಸುವ ಯೋಜನೆಯ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಬೆಳೆಹಾನಿ ಜಂಟಿ ಸಮೀಕ್ಷೆಗೆ ಈಗಾಗಲೇ ನೀಡಲಾಗಿರುವ ನಿರ್ದೇಶನದ ಪ್ರಕಾರ ತಕ್ಷಣವೇ ಸಮೀಕ್ಷೆ ಕೈಗೊಳ್ಳಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಮುಖ್ಯಮಂತ್ರಿಗಳ ಗಮನಕ್ಕೆ ತರಬೇಕಾದ ವಿಷಯಗಳ ಕುರಿತು ಸಚಿವರು ಅಧಿಕಾರಿಗಳ ಜತೆ ಚರ್ಚೆ ನಡೆಸಿದ ಸಚಿವರು, ಇತ್ತೀಚೆಗೆ ಮಳೆಯಿಂದ ಉಂಟಾಗಿರುವ ಬೆಳೆಹಾನಿ, ಜೀವಹಾನಿ ಹಾಗೂ ಪರಿಹಾರ ವಿತರಣೆ ಪ್ರಗತಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿಯನ್ನು ನೀಡಿದರು.












Click it and Unblock the Notifications