ಅಮಾನವೀಯ ಅಂತ್ಯಸಂಸ್ಕಾರಕ್ಕೆ ಜಿಲ್ಲಾಡಳಿತದ ವಿರುದ್ಧ ಜಾರಕಿಹೊಳಿ ಕಿಡಿ
ಬೆಳಗಾವಿ, ಆಗಸ್ಟ್ 17: ಕಿತ್ತೂರು ತಾಲ್ಲೂಕಿನ ಎಂಕೆ ಹುಬ್ಬಳ್ಳಿಯಲ್ಲಿ ಮೃತ ವ್ಯಕ್ತಿಯೊಬ್ಬರ ಶವವನ್ನು ಸೈಕಲ್ ಮೇಲೆ ತೆಗೆದುಕೊಂಡು ಹೋಗಿರುವ ಪ್ರಕರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸೈಕಲ್ ಮೇಲೆ ಮೃತದೇಹವನ್ನು ಸಂಸ್ಕಾರ ಮಾಡಿರುವ ವರದಿಯನ್ನು ಗಮನಿಸಿದ್ದೇನೆ. ನಾಗರಿಕ ಸಮಾಜದಲ್ಲಿರುವ ನಾವು ಸದಾ ಹೃದಯವಂತಿಕೆಯಿಂದ ಜೀವಿಸಬೇಕು. ಮೃತರ ಸಂಸ್ಕಾರವನ್ನು ಗೌರವಯುತವಾಗಿ ಮಾಡಬೇಕು. ಕೊರೊನಾ ಸೋಂಕಿನಿಂದಾಗಲೀ, ಬೇರೆ ಯಾವುದೇ ರೀತಿಯ ಅನಾರೋಗ್ಯದಿಂದ ಮೃತರಾದ ವ್ಯಕ್ತಿಗಳ ಅಂತ್ಯಕ್ರಿಯೆಗೆ ಅಧಿಕಾರಿಗಳು ಸೂಕ್ತ ಸಹಕಾರ ನೀಡಬೇಕು ಎಂದರು.
ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಈ ಕುರಿತು ಮಾತನಾಡಿದ್ದೇನೆ. ಇಂತಹ ಅಮಾನವೀಯ ಘಟನೆಗಳು ಮರುಕಳಿಸದಂತೆ, ಮುನ್ನೆಚ್ಚರಿಕೆ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಪ್ರತಿಕ್ರಿಯಿಸಿದರು.

ನಡ್ಡಾ ಭೇಟಿಯಾದ ಸಚಿವ; ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಸಚಿವ ಜಾರಕಿಹೊಳಿ ಭೇಟಿಯಾದರು.
ಜೆ.ಪಿ ನಡ್ಡಾ ಅವರನ್ನು ಭೇಟಿ ಮಾಡಿ ಕೆಲಹೊತ್ತು ಮಾತು ಕತೆ ನಡೆಸಿದರು. ರಾಷ್ಟ್ರೀಯ ಜಲ ನೀತಿ ರೂಪಿಸಿ ನದಿ ಜೋಡಣೆ ಹಾಗೂ ವಿವಿಧ ಕಾರ್ಯಕ್ರಮ ಸಂಬಂಧ ಉಭಯ ನಾಯಕರು ಚರ್ಚಿಸಿದರು. ಪಕ್ಷ ಸಂಘಟನೆಗೆ ಆದ್ಯತೆ ನೀಡಿ ಜನಸಾಮಾನ್ಯರನ್ನು ವಿಶ್ವಾಸಕ್ಕೆ ಪಡೆದು ಪಕ್ಷ ಸಂಘಟನೆ ಮಾಡುವಂತೆ ನಡ್ಡಾ ಅವರು ಜಾರಕಿಹೊಳಿ ಅವರಿಗೆ ಸಲಹೆ ನೀಡಿದರು.












Click it and Unblock the Notifications