ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದ ಲಖನ್ ಜಾರಕಿಹೊಳಿ!
ಬೆಳಗಾವಿ, ನವೆಂಬರ್ 23; ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಲಖನ್ ಜಾರಕಿಹೊಳಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದರಿಂದಾಗಿ ಬೆಳಗಾವಿ ಕ್ಷೇತ್ರದ ಚುನಾವಣಾ ಕಣ ಕುತೂಹಲಕ್ಕೆ ಕಾರಣವಾಗಿದೆ.
ಮಂಗಳವಾರ ಲಖನ್ ಜಾರಕಿಹೊಳಿ ಬೆಳಗಾವಿ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಈ ಸಂದರ್ಭದಲ್ಲಿ ಅಮರನಾಥ ಜಾರಕಿಹೊಳಿ ಮತ್ತು ಅಂಬಿರಾವ್ ಪಾಟೀಲ್ ಮುಂತಾದವರು ಉಪಸ್ಥಿತರಿದ್ದರು.
ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡುವ ಮೊದಲು ಬೆಳಗಾವಿಯ ಮೈದಾನದಲ್ಲಿ ಸಾವಿರಾರು ಬೆಂಬಲಿಗರು ಜಮಾವಣೆಗೊಂಡರು. ಲಖನ್ ಜಾರಕಿಹೊಳಿ ಜಗಜ್ಯೋತಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಬಳಿಕ ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಲಖನ್ ಜಾರಕಿಹೊಳಿ ಜೊತೆ ಹಿರಿಯ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು. ವಿವೇಕರಾವ್ ಪಾಟೀಲ ಸಹ ಲಖನ್ ಜಾರಕಿಹೊಳಿಗೆ ಬಹಿರಂಗ ಬೆಂಬಲ ಘೋಷಣೆ ಮಾಡಿದರು.
ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಅನ್ನು ಲಖನ್ ಜಾರಕಿಹೊಳಿಗೆ ಕೊಡಿಸಲು ಪ್ರಯತ್ನವನ್ನು ನಡೆಸಿದ್ದರು. ಆದರೆ ಪಕ್ಷ ಟಿಕೆಟ್ ನೀಡಲಿಲ್ಲ.
ಬೆಳಗಾವಿ ಕ್ಷೇತ್ರದಿಂದ ಬಿಜೆಪಿ ಹಾಲಿ ಎಂಎಲ್ಸಿ ಮಹಂತೇಶ ಕವಟಗಿಮಠಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ನಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಚಣ್ಣರಾಜ ಹಟ್ಟಿಹೊಳಿ ಅಭ್ಯರ್ಥಿಯಾಗಿದ್ದಾರೆ.
ಪರಿಷತ್ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಮಂಗಳವಾರ ಕೊನೆಯ ದಿನವಾಗಿತ್ತು. ಡಿಸೆಂಬರ್ 10ರಂದು ಮತದಾನ ನಡೆಯಲಿದೆ. ಡಿಸೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಲಖನ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ಕ್ಷೇತ್ರದ ಚುನಾವಣಾ ಚಿತ್ರಣವನ್ನು ಬದಲಿಸಿದೆ.
ನಾಮಪತ್ರ ಸಲ್ಲಿಕೆಗೂ ಮೊದಲು ಲಖನ್ ಜಾರಕಿಹೊಳಿ ನಡೆಸಿದ ಮೆರವಣಿಗೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು, ಪುರಸಭೆ, ನಗರಸಭೆ, ಪಟ್ಟಣ ಪಂಚಾಯಿತಿ, ಮಹಾನಗರ ಪಾಲಿಕೆಯ ವಿವಿಧ ಸದಸ್ಯರು ಪಾಲ್ಗೊಂಡಿದ್ದರು. ಇವೆರೆಲ್ಲೂ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡುವವರಾಗಿದ್ದಾರೆ. ಆದ್ದರಿಂದ ಲಖನ್ ಜಾರಕಿಹೊಳಿ ಸ್ಪರ್ಧೆ ಕುತೂಹಲಕ್ಕೆ ಕಾರಣವಾಗಿದೆ.
ಟಿಕೆಟ್ ನೀಡಲು ಮನವಿ; ಅರಭಾವಿ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಲಖನ್ ಜಾರಕಿಹೊಳಿಗೆ ಬಿಜೆಪಿ ಟಿಕೆಟ್ ನೀಡುವಂತೆ ಪಕ್ಷದ ನಾಯಕರಿಗೆ ಮನವಿ ಮಾಡಿದ್ದರು. "2019ರಲ್ಲಿ ನಡೆದ ಗೋಕಾಕ್ ಉಪ ಚುನಾವಣೆಯಲ್ಲಿ ಲಖನ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು. ಬಳಿಕ ಬದಲಾದ ಪರಿಸ್ಥಿತಿಯಲ್ಲಿ ಅವರು ಬಿಜೆಪಿ ಜೊತೆ ಗುರುತಿಸಿಕೊಂಡು ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಲೋಕಸಭಾ ಉಪ ಚುನಾವಣೆಯಲ್ಲಿ ಮಂಗಲಾ ಸುರೇಶ್ ಅಂಗಡಿ ಪರವಾಗಿ ಪ್ರಚಾರ ನಡೆಸಿ ಗೆಲುವಿಗೆ ಕಾರಣವಾಗಿದ್ದಾರೆ" ಎಂದು ಹೇಳಿದ್ದರು.
"ಲಖನ್ ಜಿಲ್ಲೆಯಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಗಮನಿಸಿ ಟಿಕೆಟ್ ನೀಡಬೇಕು" ಎಂದು ಬಾಲಚಂದ್ರ ಜಾರಕಿಹೊಳಿ ಬೇಡಿಕೆ ಇಟ್ಟಿದ್ದರು. ಆದರೆ ಬಿಜೆಪಿ ಹಾಲಿ ಅಭ್ಯರ್ಥಿಗೆ ಟಿಕೆಟ್ ನೀಡಿತ್ತು. ಈಗ ಲಖನ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ.
ಬೆಳಗಾವಿ ರಾಜಕೀಯದಲ್ಲಿ ಜಾರಕಿಹೊಳಿ ಕುಟುಂಬ ಪ್ರಭಾವಿಯಾಗಿದೆ. ಬಿಜೆಪಿಯಿಂದ ರಮೇಶ್ ಜಾರಕಿಹೊಳಿ (ಗೋಕಾಕ್), ಬಾಲಚಂದ್ರ ಜಾರಕಿಹೊಳಿ (ಅರಭಾವಿ) ಶಾಸಕರು.
ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದಲ್ಲಿದ್ದು ಯಮಕನಮರಡಿ ಶಾಸಕರು ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರು. ರಮೇಶ್ ಜಾರಕಿಹೊಳಿ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದರು. ಬಾಲಚಂದ್ರ ಜಾರಕಿಹೊಳಿ ಕೆಎಂಎಫ್ ಅಧ್ಯಕ್ಷರು. ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಜಾರಕಿಹೊಳಿ ಕುಟುಂಬದ ಮತ್ತೊಬ್ಬರಿಗೆ ಟಿಕೆಟ್ ನೀಡಿಲ್ಲ.












Click it and Unblock the Notifications