PM Modi Belagavi Visit : ಮೋದಿ ರೋಡ್ ಶೋಗಾಗಿ ಪರೀಕ್ಷೆ ರದ್ದು, ಕಾಂಗ್ರೆಸ್ ಟೀಕೆ
ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಗಾವಿಗೆ ಭೇಟಿ ನೀಡುವ ಹಿನ್ನಲೆಯಲ್ಲಿ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದಕ್ಕೆ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.
ಬೆಳಗಾವಿ, ಫೆಬ್ರವರಿ 26; ಪ್ರಧಾನಿ ಮೋದಿ ನರೇಂದ್ರ ಮೋದಿ ಫೆಬ್ರವರಿ 27ರ ಸೋಮವಾರ ಕರ್ನಾಟಕಕ್ಕೆ ಆಗಮಿಸಲಿದ್ದಾರೆ. ಶಿವಮೊಗ್ಗ ಮತ್ತು ಬೆಳಗಾವಿಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳುತ್ತಿದ್ದಾರೆ. ಮೋದಿ ಬೆಳಗಾವಿ ಭೇಟಿ ಹಿನ್ನಲೆಯಲ್ಲಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತು ಕರ್ನಾಟಕ ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.
ಭಾನುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, 'ಶಿಕ್ಷಣವಿಲ್ಲದವರಿಗೆ ಶಿಕ್ಷಣದ ಮಹತ್ವ ಅರಿಯುವುದುದಾದರೂ ಹೇಗೆ!, @narendramodi ಅವರು "ನಾ ಪಡುಂಗಾ, ನಾ ಪಡನೆದುಂಗಾ" ಎನ್ನಲು ಹೊರಟಿದ್ದಾರೆಯೇ @BJP4Karnataka?' ಎಂದು ಪ್ರಶ್ನೆ ಮಾಡಿದೆ. ಸೋಮವಾರ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿರುವ ಕುರಿತ ಪತ್ರಿಕಾ ವರದಿಯನ್ನು ಟ್ವೀಟ್ ಮಾಡಿದೆ.

ಸೋಮವಾರ ಬೆಳಗಾವಿ ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಅಕೌಂಟನ್ಸಿ, ಗಣಿತದ ವಾರ್ಷಿಕ ಪರೀಕ್ಷೆಗಳು ನಡೆಯಬೇಕಿತ್ತು. 19 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿತ್ತು. ಆದರೆ ನರೇಂದ್ರ ಮೋದಿ ಬೆಳಗಾವಿ ನಗರದಲ್ಲಿ ಸುಮಾರು 8 ಕಿ. ಮೀ. ರೋಡ್ ಶೋ ನಡೆಸುವ ಕಾರಣ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಕುರಿತು ಕಾಂಗ್ರೆಸ್ ಅಸಮಾಧಾನ ವ್ಯಕ್ತಪಡಿಸಿದೆ.
ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿ ರುವ ಕಾರಣ, ಬೆಳಗಾವಿ ಜಿಲ್ಲೆಯಲ್ಲಿ ನಡೆಯಬೇಕಿದ್ದ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಎಲ್ಲಾ ಕಾಲೇಜುಗಳ ಪ್ರಾಂಶುಪಾಲರಿಗೆ ಫೆಬ್ರವರಿ 24ರಂದು ಈ ಕುರಿತು ಸುತ್ತೋಲೆ ಮೂಲಕ ಮಾಹಿತಿ ನೀಡಲಾಗಿದೆ. ಅಲ್ಲದೇ ಸೋಮವಾರ ನಡೆಯಬೇಕಿದ್ದ ಪರೀಕ್ಷೆಗಳನ್ನು ಮಾರ್ಚ್ 6ರಂದು ನಡೆಸುವುದಾಗಿಯೂ ಮಾಹಿತಿ ನೀಡಲಾಗಿದೆ.

ಆದರೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪರೀಕ್ಷೆಗಳು ಸೋಮವಾರ ಎಂದಿನಂತೆ ನಡೆಯಲಿವೆ. ಮೋದಿ ಕಾರ್ಯಕ್ರಮಕ್ಕೆ ಬೆಳಗಾವಿ ನಗರ ಹಾಗೂ ಸುತ್ತಮುತ್ತಲಿನ ಹಳ್ಳಿಗಳಿಂದ ಜನರು ಆಗಮಿಸುತ್ತಾರೆ. ಇದಕ್ಕಾಗಿಯೇ 1500 ಬಸ್ಗಳನ್ನು ಬಳಕೆ ಮಾಡಲಾಗುತ್ತಿದೆ. ಆದ್ದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂದು ಪರೀಕ್ಷೆ ಮುಂದೂಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾಂಗ್ರೆಸ್ ತನ್ನ ಟ್ವೀಟ್ನಲ್ಲಿ, 'ಶಿಕ್ಷಣವಿಲ್ಲದವರಿಗೆ ಶಿಕ್ಷಣದ ಮಹತ್ವ ಅರಿಯುವುದುದಾದರೂ ಹೇಗೆ!. ವಿದ್ಯಾರ್ಥಿಗಳ ಭವಿಷ್ಯ ಬಲಿಕೊಟ್ಟು ಶೋಕಿ ನಡೆಸಲು ಹೊರಟಿರುವ @BSBommai ಅವರೇ, ತಮಗೆ ಚುನಾವಣಾ ಪ್ರಚಾರ ಮುಖ್ಯವೇ? ವಿದ್ಯಾರ್ಥಿಗಳ ಭವಿಷ್ಯ ಮುಖ್ಯವೇ? ಸ್ಪಷ್ಟಪಡಿಸಿ' ಎಂದು ಕಾಂಗ್ರೆಸ್ ಸವಾಲು ಹಾಕಿದೆ. ಬೆಳಗಾವಿಯಲ್ಲಿ ಮೋದಿ ಕಾರ್ಯಕ್ರಮಕ್ಕಾಗಿ ಪರೀಕ್ಷೆ ಮುಂದೂಡಿರುವುದಕ್ಕೆ ಅಸಮಾಧಾನ ಹೊರಹಾಕಿದೆ.
ಮಧ್ಯಾಹ್ನ ಬೆಳಗಾವಿಗೆ ಭೇಟಿ; ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬೆಳಗ್ಗೆ ಶಿವಮೊಗ್ಗಕ್ಕೆ ಆಗಮಿಸಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಮಧ್ಯಾಹ್ನ 2.15ಕ್ಕೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಹೈಟೆಕ್ ರೈಲು ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ನಂತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಬಳಿಕ ಬೆಳಗಾವಿ ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ನಂತರ ಪಕ್ಷದ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.
ಬೆಳಗಾವಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ. ದೇಶದ 8 ಸಾವಿರ ರೈತರಿಗೆ 16 ಸಾವಿರ ಕೋಟಿ ರೂ. ಬಿಡುಗಡೆಯಾಗಲಿದೆ ಇದಕ್ಕೆ ಬೆಳಗಾವಿ ವೇದಿಕೆಯಾಗಲಿದೆ. ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ ಬೆಳಗಾವಿಯಲ್ಲಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಎದುರಾಗುತ್ತಿದ್ದು, ಪ್ರಧಾನಿ ಮೋದಿ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.
ಸೋಮವಾರ ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಬಿಜೆಪಿಯ ಬೃಹತ್ ಸಮಾವೇಶ ನಡೆಯಲಿದೆ. ರಾಜ್ಯದಲ್ಲಿ ಅತಿ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಜಿಲ್ಲೆಯಲ್ಲಿ ಬೆಳಗಾವಿಯೂ ಒಂದು. ಈ ಹಿನ್ನಲೆಯಲ್ಲಿ ಮೋದಿ ಬೆಳಗಾವಿ ಭೇಟಿ ಚುನಾವಣಾ ದೃಷ್ಟಿಯಿಂದ ಮಹತ್ವದ್ದಾಗಿದೆ. ಮೋದಿ ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಸಮಾವೇಶ ನಡೆಯಲಿರುವ ಮಾಲಿನಿ ಸಿಟಿಯವರೆಗೆ 8 ಕಿ. ಮೀ. ದೂರ ಬೃಹತ್ ರೋಡ್ ಶೋ ನಡೆಸುವ ಸಾಧ್ಯತೆಯಿದೆ ಎಂಬ ಮಾಹಿತಿ ಇದೆ.












Click it and Unblock the Notifications